ಸ್ತ್ರೀಶಕ್ತಿ ಎಂಬುದು ರಾಷ್ಟ್ರೀಯ ಶಕ್ತಿಯಾಗಬೇಕು: ಶಾಸಕ ಆರಗ ಜ್ಞಾನೇಂದ್ರ

KannadaprabhaNewsNetwork |  
Published : Jun 04, 2025, 02:08 AM IST
ಪೋಟೋ: 03ಎಸ್‌ಎಂಜಿಕೆಪಿ05ಶಿವಮೊಗ್ಗದ ನಗರದ ಆದಿ ಚುಂಚನಗಿರಿ ಸಭಾ ಭವನದಲ್ಲಿ ಮಂಗಳವಾರ ಅಖಿಲ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಮಹಿಳಾ ವಿಭಾಗದ ಜಿಲ್ಲಾ ಶಾಖೆಯಿಂದ ಹಮ್ಮಿಕೊಂಡಿದ್ದ ಸಾಂಪ್ರದಾಯಿಕ ಸಸ್ಯಾಹಾರಿ ಖಾದ್ಯಗಳ ಪ್ರಾತ್ಯಕ್ಷತೆ ಹಾಗೂ ಸಾಮಾನ್ಯಜ್ಞಾನದ ರಸಪ್ರಶ್ನೆ ಸ್ಪರ್ಧೆ ಹಾಗೂ ಸದಸ್ಯರಿಗೆ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಶಾಸಕ ಆರಗ ಜ್ಞಾನೇಂದ್ರ ಉದ್ಘಾಟಿಸಿದರು. | Kannada Prabha

ಸಾರಾಂಶ

ಸ್ತ್ರೀಶಕ್ತಿ ರಾಷ್ಟ್ರೀಯ ಶಕ್ತಿಯಾಗಬೇಕು, ಮಹಿಳೆಯರು ಕೀಳರಿಮೆಯಿಂದ ಹೊರಗೆ ಬಂದು ಈ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಸ್ತ್ರೀಶಕ್ತಿ ರಾಷ್ಟ್ರೀಯ ಶಕ್ತಿಯಾಗಬೇಕು, ಮಹಿಳೆಯರು ಕೀಳರಿಮೆಯಿಂದ ಹೊರಗೆ ಬಂದು ಈ ಮಣ್ಣಿನ ಸಂಸ್ಕೃತಿಯನ್ನು ಮುಂದಿನ ತಲೆಮಾರಿಗೆ ತಲುಪಿಸುವ ಕೆಲಸ ಮಾಡಬೇಕು ಎಂದು ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ನಗರದ ಆದಿ ಚುಂಚನಗಿರಿ ಸಭಾ ಭವನದಲ್ಲಿ ಮಂಗಳವಾರ ಅಖಿಲ ಕರ್ನಾಟಕ ರಾಜ್ಯ ಒಕ್ಕಲಿಗರ ಸಂಘದ ಮಹಿಳಾ ವಿಭಾಗದ ಜಿಲ್ಲಾ ಶಾಖೆಯಿಂದ ಹಮ್ಮಿಕೊಂಡಿದ್ದ ಸಾಂಪ್ರದಾಯಿಕ ಸಸ್ಯಾಹಾರಿ ಖಾದ್ಯಗಳ ಪ್ರಾತ್ಯಕ್ಷತೆ ಹಾಗೂ ಸಾಮಾನ್ಯ ಜ್ಞಾನದ ರಸಪ್ರಶ್ನೆ ಸ್ಪರ್ಧೆ ಹಾಗೂ ಸದಸ್ಯರಿಗೆ ಐಡಿ ಕಾರ್ಡ್ ವಿತರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, 26 ಜನ ಅಮಾಯಕ ಪ್ರವಾಸಿಗರನ್ನು ಧರ್ಮವನ್ನು ಕೇಳಿ ಹೊಡೆದುಹಾಕಿದ ಭಯೋತ್ಪಾದಕರನ್ನು ಹುಡುಕಿ ಹುಡುಕಿ ಹೊಡೆದುಹಾಕಿ, ಈ ರಾಷ್ಟ್ರದಲ್ಲಿ ಮಹಿಳೆಯರ ಸಿಂದೂರಕ್ಕೆ ದೇಶ ಎಷ್ಟು ಬೆಲೆ ಕೊಡುತ್ತದೆ ಎಂಬುದನ್ನು ಈ ಜಗತ್ತು ನೋಡಿದೆ ಎಂದರು.

ನಮ್ಮ ದೇಶದಲ್ಲಿ ಮಹಿಳೆಯರಿಗೆ ಸನಾತನ ಪಾವಿತ್ರ್ಯತೆ ಹಾಗೂ ಗೌರವ ನೀಡಿದೆ. ಈ ದೇಶಕ್ಕೆ ನಮ್ಮ ಯೋಗದಾನ ಏನು ಎಂದು ಪ್ರತಿ ಹೆಣ್ಣು ಮಕ್ಕಳು ಯೋಚಿಸುವ ಕಾಲ ಬಂದಿದೆ. ಎಲ್ಲಾ ರಂಗಗಳಲ್ಲೂ ಮಹಿಳೆಯರು ಭಾಗವಹಿಸುತ್ತಿದ್ದು, ಅವಕಾಶ ಸಿಕ್ಕಿದರೆ ಏನು ಬೇಕಾದರೂ ಸಾಧನೆ ಮಾಡುತ್ತೇವೆ ಎಂದು ತೋರಿಸಿಕೊಟ್ಟಿದ್ದಾರೆ. ನಾನು ಗೃಹಮಂತ್ರಿಯಾಗಿದ್ದಾಗ ಮಹಿಳಾ ಕಾನ್‌ಸ್ಟೇಬಲ್‌ನಿಂದ ಹಿಡಿದು, ಮಹಿಳಾ ಐಪಿಎಸ್ ಅಧಿಕಾರಿಯವರೆಗೆ ಅವರ ಕಾರ್ಯಕ್ಷಮತೆಯನ್ನು ನೋಡಿದ್ದೇನೆ. ಮಹಿಳೆಯರು ಮಾನಸಿಕವಾಗಿ ತಯಾರಿ ನಡೆಸಿದರೆ ಏನೂ ಬೇಕಾದರೂ ಸಾಧಿಸಬಹುದು ಎಂದರು.

ಮುಂದಿನ ಪೀಳಿಗೆಗೆ ನಮ್ಮ ಸಂಸ್ಕೃತಿಯನ್ನು ತಲುಪಿಸುವ ಬಹಳ ದೊಡ್ಡ ಹೊಣೆಗಾರಿಕೆ ನಮ್ಮ ಅಕ್ಕ-ತಂಗಿಯರ ಮೇಲಿದೆ. ಮಗ ಸರಿಯಿಲ್ಲ ಎಂದರೆ ತಾಯಿ ಯಾರು ಎಂದು ಮೊದಲು ಕೇಳುತ್ತಾರೆ. ಈ ರಾಷ್ಟ್ರಕ್ಕೆ ಮಾನವ ಸಂಪನ್ಮೂಲ ಕೊಡುವ ತಾಯಿಯ ಜವಾಬ್ದಾರಿ ದೊಡ್ಡದು. ಆರ್ಥಿಕತೆಯನ್ನು ವಿಶ್ವದಲ್ಲೇ ನಾಲ್ಕನೇ ಅತೀ ದೊಡ್ಡ ದೇಶವಾದ ಭಾರತದ ಆರ್ಥಿಕ ಮಂತ್ರಿ ಓರ್ವ ಮಹಿಳೆಯಾಗಿದ್ದು, ದೇಶದ ಮಹಿಳೆಯರಿಗೆ ಮಾದರಿಯಾಗಿದ್ದಾರೆ ಎಂದು ತಿಳಿಸಿದರು.

ಸಿನಿಮಾ ನಟಿಯರು ನಮಗೆ ರೋಲ್ ಮಾಡೆಲ್ ಅಲ್ಲ, ಪ್ರತಿಯೊಬ್ಬ ಮಹಿಳೆ ಸಹನಾಮೂರ್ತಿಯಾಗಬೇಕು. ನಮ್ಮ ನಡುವೆ ಇತ್ತೀಚೆಗೆ ಡೈವರ್ಸ್ ಎಂಬ ಸಾಮಾಜಿಕ ವಿಪ್ಲವ ನಡೆಯುತ್ತಿದೆ. ಶ್ರಮ ಜೀವನಕ್ಕೆ ಬೆನ್ನು ತೋರಿಸುತ್ತಾ ಇದ್ದೇವೆ. ರೈತರನ್ನು ಹೆಣ್ಣು ಮಕ್ಕಳು ಮದುವೆಯಾಗುತ್ತಿಲ್ಲ. ರೈತಾಪಿ ಬದುಕಿನ ಮೇಲೆ ಇದು ದೊಡ್ಡ ಪರಿಣಾಮ ಬೀರುತ್ತಿದೆ. ಮಕ್ಕಳ ಸಂಖ್ಯೆ ಕಡಿಮೆಯಾಗುತ್ತಿದೆ. ಒಂದೇ ಒಂದು ಮಗುವಿದ್ದರೂ ಅದನ್ನು ನೋಡಲು ಆಳುಗಳನ್ನು ನೇಮಿಸುವ ಪರಿಸ್ಥಿತಿ ಇದೆ. ಹೆಣ್ಣನ್ನು ಭೂಮಿಗೆ ಹೋಲಿಸುತ್ತಾರೆ. ಕ್ಷಮಯಾ ಧರಿತ್ರಿ ಎನ್ನುತ್ತಾರೆ. ಕುಟುಂಬ ವ್ಯವಸ್ಥೆಯ ಬಗ್ಗೆ ಚಿಂತನೆ ಮಾಡುವ ಕಾಲ ಬಂದಿದೆ. ಮಹಿಳಾ ಸಂಘಟನೆಗಳು ಈ ಬಗ್ಗೆ ಸೆಮಿನಾರ್‌ಗಳನ್ನು ಏರ್ಪಡಿಸಿ ಮಹಿಳೆಯರಲ್ಲಿ ನಮ್ಮ ಸಂಸ್ಕಾರ, ಸಂಸ್ಕೃತಿ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ರಾಜ್ಯ ಒಕ್ಕಲಿಗರ ಮಹಿಳಾ ವೇದಿಕೆಯ ಅಧ್ಯಕ್ಷೆ ಶಾಂತಾ ಸುರೇಂದ್ರ ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ವಿವಿಧ ೪೮ ಕಾರ್ಯಕ್ರಮಗಳನ್ನು ಈ ವೇದಿಕೆ ಹಮ್ಮಿಕೊಂಡು ಬಂದಿದೆ. ಗುರಿಮುಟ್ಟಲು ಗುರುಗಳ ಆಶೀರ್ವಾದ ಬೇಕು. ನಮ್ಮ ಸಂಘ ಗುರುಗಳ ಆಶೀರ್ವಾದದಿಂದ ಸಚ್ಚಾರಿತ್ರ, ಸದ್ಗುಣ, ಸದ್ಭಾವನೆ ಸಂಘಟನೆಯ ಮೂಲಮಂತ್ರವನ್ನಾಗಿಸಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಸಂಘಟನೆಯನ್ನು ಬಲವಾಗಿ ಕಟ್ಟಿ, ಮಹಿಳೆಯರಿಗೆ ಸಬಲೀಕರಣಗೊಳಿಸಲು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬಂದಿದೆ ಎಂದರು.

ಕಾರ್ಯಕ್ರಮದ ಸಾನ್ನಿಧ್ಯವನ್ನು ಆದಿ ಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಸನ್ನನಾಥ ಸ್ವಾಮೀಜಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪ್ರಮುಖರಾದ ಸೂಡಾ ಅಧ್ಯಕ್ಷ ಎಚ್.ಎಸ್. ಸುಂದರೇಶ್, ಸಂಘದ ಅಧ್ಯಕ್ಷರಾದ ಪ್ರತಿಮಾ ಡಾಕಪ್ಪಗೌಡ, ಯುವ ವೇದಿಕೆ ಜಿಲ್ಲಾ ಅಧ್ಯಕ್ಷ ರಘುರಾಜ್, ರಂಗೇಗೌಡ, ಆರ್. ವಿಜಯಕುಮಾರ್, ಎಚ್. ರಾಮಚಂದ್ರ, ಎಂ. ಪ್ರಕಾಶ್, ರಮೇಶ್ ಹೆಗ್ಡೆ, ಶಿವರಾಜ್, ಅಶೋಕ್, ಸ್ವರ್ಣಾರಮೇಶ್, ಆರತಿ ಪ್ರಕಾಶ್, ಮಮತಾ ದಿವಾಕರ್, ರೇವತಿ, ಪ್ರಫುಲ್ಲಾ, ಚಂದ್ರಕಲಾ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ