ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಖಾಸಗಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಮಹಿಳೆಯರಿಗೆ ಎಲ್ಲ ರೀತಿಯ ಮೂಲ ಸೌಲಭ್ಯ ಕಲ್ಪಿಸುವ ಜೊತೆಗೆ ಪ್ರತಿಯೊಬ್ಬ ಮಹಿಳೆಯನ್ನು ಗೌರವಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ತಿಳಿಸಿದರು.ಜಿಲ್ಲಾಡಳಿತ ಭವನದ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಮಂಗಳವಾರ ರಾಷ್ಟ್ರೀಯ ಮಹಿಳಾ ಆಯೋಗ, ನವದೆಹಲಿ. ಕರ್ನಾಟಕ ರಾಜ್ಯ ಮಹಿಳಾ ಆಯೋಗ, ಬೆಂಗಳೂರು. ಜಿಲ್ಲಾಡಳಿತ ಮತ್ತು ಜಿಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಮಹಿಳೆಯರು ದೂರು ನೀಡಲಿ
ಮಹಿಳೆ ದೌರ್ಜನ್ಯಕ್ಕೆ ಒಳಗಾದಾಗ ದೂರು ನೀಡುವುದಕ್ಕೆ ಹಿಂಜರಿಯಬಾರದು. ಕಾನೂನಿನಡಿ ರಕ್ಷಣೆ ಪಡೆಯುವುದಕ್ಕೆ ಸಾಕಷ್ಟು ಅವಕಾಶಗಳಿವೆ. ಅವುಗಳನ್ನು ಅರಿತುಕೊಂಡು ದೌರ್ಜನ್ಯದ ವಿರುದ್ಧ ಸೆಟೆದು ನಿಲ್ಲಬೇಕು. ಮರ್ಯಾದೆಗೆ ಅಂಜಿ ಕೆಲವು ಮಹಿಳೆಯರು ಲೈಂಗಿಕ ದೌರ್ಜನ್ಯ, ಕಿರುಕುಳಗಳನ್ನು ಸಹಿಸಿಕೊಂಡಿರುತ್ತಾರೆ. ಮಹಿಳೆಯರು ಕಾಯಿದೆಯನ್ನು ಅರಿತು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಎಲ್ಲವನ್ನೂ ಕಾಯಿದೆಯಿಂದಲೇ ಸರಿಪಡಿಸಲಾಗುವುದಿಲ್ಲ. ಕಾಯ್ದೆಗಿಂತ ಸಂಸ್ಕಾರವೂ ಮುಖ್ಯ. ಪ್ರತಿಯೊಬ್ಬ ಹೆಣ್ಣನ್ನು ಗೌರವದಿಂದ ನೋಡುವ ಮನೋಭಾವ ಬೆಳೆಸಿಕೊಂಡರೆ ಕಾಯ್ದೆಗಳ ಅಗತ್ಯವೇ ಇರುವುದಿಲ್ಲ. ಸರ್ಕಾರಿ ಮತ್ತು ಖಾಸಗಿ ವಲಯಗಳಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವಾಗಬೇಕು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಮಹಿಳಾ ದೌರ್ಜನ್ಯದ ಬಗ್ಗೆ ಮಾಹಿತಿಯನ್ನು ಸೂಚನ ಫಲಕಗಳಲ್ಲಿ ಪ್ರದರ್ಶಿಸಬೇಕು ಎಂದು ತಿಳಿಸಿದರು. ದೌರ್ಜನ್ಯ ವಿರುದ್ಧ ಪ್ರತಿಭಟಿಸಿ
ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಆರ್.ಲತಾ ಮಾತನಾಡಿ, ಕಚೇರಿಗಳಲ್ಲಿ ಕೆಲಸ ಮಾಡುವ ಸಂದರ್ಭಗಳಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದಾಗ ಅವುಗಳನ್ನು ಸಹಿಸಿಕೊಳ್ಳಬಾರದು. ಅದರ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಒಬ್ಬ ಮಹಿಳೆಯು ಮಗಳಾಗಿ, ಸೋದರಿಯಾಗಿ, ಪತ್ನಿಯಾಗಿ, ತಾಯಿಯಾಗಿ ಎಲ್ಲಾ ಪಾತ್ರಗಳನ್ನು ನಿರ್ವಹಿಸುತ್ತಾಳೆ. ಮಹಿಳೆಯರಿಗೆ ಗೌರವ ನೀಡುವ ಮೂಲಕ ದೇಶದ ಪ್ರಗತಿಯನ್ನು ಸಾಧಿಸಬೇಕು ಎಂದರು.ಒಂದು ದೇಶದ ಅಭಿವೃದ್ಧಿಯನ್ನು ಅಳೆಯಬೇಕಾದರೆ ಆ ದೇಶದಲ್ಲಿ ಮಹಿಳೆಯರನ್ನು ಯಾವ ರೀತಿ ಕಾಣುತ್ತಿದ್ದಾರೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂಬ ಸ್ವಾಮಿ ವಿವೇಕಾನಂದರ ಮಾತನ್ನು ನಾವೆಲ್ಲರೂ ಅರ್ಥ ಮಾಡಿಕೊಳ್ಳಬೇಕು. ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯವು ಕೇವಲ ಸರ್ಕಾರಿ ಕಚೇರಿಗಳಲ್ಲದೆ ಖಾಸಗಿಯಾಗಿ ಕೆಲಸ ಮಾಡುವ ಸ್ಥಳದಲ್ಲಿಯೂ ಕಂಡುಬರುತ್ತವೆ ಎಂದರು.
ಕಾರ್ಯಾಗಾರದಲ್ಲಿ ಜಿಪಂ ಸಿಇಒ ಪ್ರಕಾಶ್ ಜಿ.ಟಿ ನಿಟ್ಟಾಲಿ, ಅಪರ ಡೀಸಿ ಡಾ. ಎನ್.ಭಾಸ್ಕರ್, ಜಿಲ್ಲಾ ಎಸ್ಪಿ ಕುಶಾಲ್ ಚೌಕ್ಸೆ, ಸಂಪನ್ಮೂಲ ವ್ಯಕ್ತಿಗಳಾಗಿ ಸುಪ್ರೀಂ ಕೋರ್ಟ್ನ ಹಿರಿಯ ವಕೀಲ ರಿಷಿ ಮದನ್, ಕ್ರೈಸ್ಟ್ ಯುನಿವರ್ಸಿಟಿಯ ಡಾ.ಎನ್ ಸ್ವಪ್ನ, ಬೆಂಗಳೂರು ಆಡಳಿತ ಸಿ.ಐ.ಡಿ ಘಟಕ ಸಿ.ಜಿ ರೋಹಿತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ವೆಂಕಟೇಶ್ ರೆಡ್ಡಿ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು,ಶಿಕ್ಷಕರು ಮತ್ತಿತರರು ಇದ್ದರು.