ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ಮಹಿಳೆಯರು ವ್ಯಾಪಾರ ವಹಿವಾಟಿನಲ್ಲಿ ಒಂದಾಗಿ ಕಾರ್ಯನಿರ್ವಹಿಸುತ್ತಿರುವಂತೆ ಸಮಸ್ಯೆಗಳು ಕಂಡು ಬಂದಾಗ ಮಹಿಳೆಯರು ಸಂಘಟಿತರಾಗಿ ಹೋರಾಡಬೇಕು ಎಂದು ಜಿಲ್ಲಾ ಮಕ್ಕಳ ವಿಶೇಷ ಪೊಲೀಸ್ ಘಟಕದ ಮಹಿಳಾ ಮುಖ್ಯ ಪೇದೆ ಎಂ.ಬಿ.ಸುಮತಿ ಹೇಳಿದರು.ಗುರುವಾರ ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ವತಿಯಿಂದ ಖಾಸಗಿ ಬಸ್ ನಿಲ್ದಾಣದಲ್ಲಿ ಮಹಿಳಾ ಗ್ರಾಮಸಭೆಯಲ್ಲಿ ಮಹಿಳೆಯ ರಕ್ಷಣೆ ಮತ್ತು ಹಕ್ಕು ಕಾನೂನುಗಳ ಬಗ್ಗೆ ಮಾಹಿತಿ ನೀಡಿದರು.
ಮಹಿಳೆಯರ ಮೇಲೆ ದೌರ್ಜನ್ಯಗಳು ನಿರಂತರವಾಗಿ ನಡೆಯುತ್ತಿರುವುದನ್ನು ನಿತ್ಯವು ನಾವು ಕಾಣುತ್ತಿದ್ದೇವೆ ಕೇಳಿಸಿಕೊಳ್ಳುತ್ತಿದ್ದೇವೆ. ಅವುಗಳನ್ನು ತಡೆಯುವ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಸಾಕಷ್ಟು ಕಾನೂನುಗಳಲ್ಲಿ ಮಾರ್ಪಡು, ಸುಲಲಿತವಾಗಿ ಕಾನೂನು ರಚಿಸಲಾಗಿದೆ. ತಮ್ಮ ಸುತ್ತ ಮುತ್ತಲಿನ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಸಂಭವಿಸಿದಾಗ ಮಹಿಳೆಯರು ಸುಮ್ಮನಿರದೆ ಸಂಘಟಿತರಾಗಿ ಎದುರಿಸುವ ಮೂಲಕ ಕಾನೂನಿನಡಿಯಲ್ಲಿ ಮಹಿಳೆಯರು ದೌರ್ಜನ್ಯ ತಡೆಯಲು ಸಾಧ್ಯ ಎಂದು ಅವರು ಹೇಳಿದರು. ಮಹಿಳೆಯರು ಇಂದಿನ ದಿನಗಳಲ್ಲಿ ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. ಮಹಿಳೆಯರು ಸ್ತ್ರೀಶಕ್ತಿ ಹಾಗೂ ಸ್ವಸಹಾಯ ಸಂಘಗಳಲ್ಲಿ ಸಂಘಟಿತರಾಗಿ ವ್ಯಾಪಾರ ವಹಿವಾಟಿನಲ್ಲಿ ತೊಡಗಿಸಿಕೊಂಡಿರುವುದೇ ಸಾಕ್ಷಿಯಾಗಿದೆ ಎಂದು ತಿಳಿಸಿದರು. ಸಭೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಪಿ.ಆರ್.ಸುನಿಲ್ಕುಮಾರ್ ಉದ್ಘಾಟಿಸಿ ಮಾತನಾಡಿ, ಮಹಿಳೆಯರು ತಮ್ಮ ವ್ಯಾಪ್ತಿಯಲ್ಲಿ ಸಮಸ್ಯೆ ಹಾಗೂ ಕುಂದು ಕೊರತೆಗಳ ಬಗ್ಗೆ ಮಾಹಿತಿ ನೀಡಿದ್ದಲ್ಲಿ ಸಮಸ್ಯೆ ಪರಿಹಾರಕ್ಕೆ ಪಂಚಾಯಿತಿ ಸಂಬಂಧಿಸಿದ ಇಲಾಖೆಗಳಿಗೆ ಪತ್ರ ವ್ಯವಹಾರವನ್ನು ನಡೆಸುವ ಮೂಲಕ ಪರಿಹಾರಕ್ಕೆ ಮುಂದಾಗುವುದಾಗಿ ಹೇಳಿದರು. ಈ ಸಭೆಯಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿ.ಜಿ.ಲೋಕೇಶ್, ಪಂಚಾಯಿತಿ ಸದಸ್ಯರಾದ ರಫೀಕ್ಖಾನ್, ವಸಂತಿ, ಗ್ರಾ.ಪಂ.ಲೆಕ್ಕಪರಿಶೋಧಕಿ ಚಂದ್ರಕಲಾ, ಸಿಬ್ಬಂದಿ ಸಂಧ್ಯಾ, ಡಿ.ಎಂ.ಮಂಜುನಾಥ್, ಅಂಗನವಾಡಿ ಕಾರ್ಯಕರ್ತೆಯರು, ಸುಂಟಿಕೊಪ್ಪ ಗ್ರಾ.ಪಂ. ಸಂಜೀವಿನಿ ಒಕ್ಕೂಟದ ಸ್ವರ್ಣ, ಗೀತಾ, ಪದಾಧಿಕಾರಿಗಳು ಇದ್ದರು.