ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣ ಭಕ್ತ ಕನಕದಾಸ ಕ್ರೀಡಾಂಗಣದಲ್ಲಿ ತಾಲೂಕು ಪಂಚಾಯ್ತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಇಲಾಖೆ ಮತ್ತು ಪಂಚಾಯತ್ ರಾಜ್ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ನಡೆದ ಕಬಡ್ಡಿ, ಥ್ರೋಬಾಲ್, ಶಾಟ್ ಪಟ್, 100 ಮೀ. ಓಟ, ಕ್ರಿಕೆಟ್, ರಂಗೋಲಿ ಮತ್ತು ಚಿತ್ರಕಲಾ ಸ್ಪರ್ಧೆ, ಗ್ರಾಮೀಣ ಸೊಗಡಿನ ರಾಗಿ ಬೀಸುವ ಸ್ಪರ್ಧೆ ಇತರ ಸ್ಪರ್ಧೆಗಳಲ್ಲಿ ಮಹಿಳೆಯರು ಭಾಗವಹಿಸಿ ಒತ್ತಡದ ಕೆಲಸದ ನಡುವೆಯೂ ಖುಷಿ ಪಟ್ಟರು.
ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆದ ರಂಗೋಲಿ ಸ್ಪರ್ಧೆ ಹಾಗೂ ಕಬಡ್ಡಿ ಆಟಗಳು ಗಮನ ಸೆಳೆಯಿತು. ಸ್ಪರ್ಧೆಗಳಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳಿಗೆ ಮಹಿಳೆಯರು ಸ್ಪೂರ್ತಿ ತುಂಬಿದರು.ತಾಪಂ ಇಒ ಎಚ್.ಜಿ.ಶ್ರೀನಿವಾಸ್ ಕ್ರೀಡೆಗೆ ಚಾಲನೆ ನೀಡಿ ಮಾತನಾಡಿ, ಪುರುಷರಷ್ಟೆ ಮಹಿಳೆಯರು ಸಮಾನಾಗಿ ದುಡಿದು ಸಮಾಜ ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಒತ್ತಡದಲ್ಲಿ ಕೆಲಸ ನಿರ್ವಹಿಸುವ ಮಹಿಳೆಯರಿಗೆ ಆಟೋಟವನ್ನು ಹಮ್ಮಿಕೊಳ್ಳಲಾಗಿದೆ. ಆಟೋಟಗಳ ಸ್ಪರ್ಧೆಯಿಂದ ಮಹಿಳೆಯರಿಗೆ ಮಾನಸಿಕ ಶಕ್ತಿ ಹೆಚ್ಚಲಿದೆ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕುಮಾರಸ್ವಾಮಿ, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ದೀಪಕ್, ಶಿಕ್ಷಣ ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ತಾಪಂ ಸಿಬ್ಬಂದಿ ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಹಾಜರಿದ್ದರು.