ಫಲಾಪೇಕ್ಷೆ ಇಲ್ಲದೆ ಜೆಡಿಎಸ್‌ ಸಂಘಟನೆಗೆ ಶ್ರಮಿಸಿ

KannadaprabhaNewsNetwork |  
Published : Jul 10, 2025, 12:49 AM IST
ಸೋಲು ಗೆಲುವು ಮುಖ್ಯವಲ್ಲ, ಪಕ್ಷವನ್ನು ಕಟ್ಟಿ ಬೆಳೆಸಿ ಬೇಕಾಗಿರುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ :ನಿಖಿಲ್ ಕುಮಾರಸ್ವಾಮಿ | Kannada Prabha

ಸಾರಾಂಶ

ಗ್ಯಾರಂಟಿ ಯೋಜನೆ ಜನಕ್ಕೆ ತಲುಪುತ್ತಿಲ್ಲ ಇದು ರಾಜ್ಯದ ಜನರ ಅಭಿಪ್ರಾಯ. ಗ್ಯಾರಂಟಿ ಕೊಡುವುದು ತಪ್ಪು ಅಂತ ಹೇಳ್ತಿಲ್ಲ. ಗ್ಯಾರಂಟಿ ಜತೆಗೆ ಅಭಿವೃದ್ಧಿ ಮಾಡಿ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಅಭಿವೃದ್ಧಿ ಕಾಣುತ್ತಿಲ್ಲ. ಕಳೆದ ಎರಡು ವರ್ಷದಲ್ಲಿ ಎಷ್ಟು ಶಾಸಕರಿಗೆ ಎಷ್ಟು ಅನುದಾನ ಕೊಟ್ಟಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ಲೂಟಿ ಹೊಡೆಯುತ್ತಿದೆ.

ಕನ್ನಡಪ್ರಭ ವಾರ್ತೆ ಗೌರಿಬಿದನೂರು

ನಮಗೆ ಚುನಾವಣೆಯಲ್ಲಿ ಸೋಲು ಗೆಲುವು ಮುಖ್ಯವಲ್ಲ, ಪಕ್ಷವನ್ನು ಕಟ್ಟಿ ಬೆಳಸಿ ಜನರೊಂದಿಗೆ ಇರುವುದು ಮುಖ್ಯ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.ನಗರದ ಶ್ರೀ ಪ್ರಸನ್ನ ಆಂಜನೇಯ ಸ್ವಾಮಿ ದೇವಸ್ಥಾನದ ಕಲ್ಯಾಣ ಮಂಟಪದಲ್ಲಿ ಬುಧವಾರ ಜೆಡಿಎಸ್ ಕಾರ್ಯಕರ್ತರ ಸಭೆ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಅವರು, ತಾಲೂಕಿನ ಜನತೆ ಜೆಡಿಎಸ್ ಬಗ್ಗೆ ಹೆಚ್ಚಿನ ಅಭಿಮಾನವಿದೆ ಎಂದರು.

ಪಕ್ಷ ಸಂಘಟನೆಗೆ ಸಹಕರಿಸಿ

ಜನರೊಂದಿಗೆ ಜನತಾದಳ ಕಾರ್ಯಕ್ರಮದ ಹೆಸರಿನಲ್ಲಿ ತಾವು ಪ್ರವಾಸ ಕೈಗೊಂಡಿದ್ದು, ಯಾವುದೇ ಫಲಾಪೇಕ್ಷೆ ಇಲ್ಲದೇ ಪಕ್ಷದ ಬೆಳವಣಿಗೆಗೆ ಸಹಕರಿಸಬೇಕು, ಮುಂಬರುವ ತಾಪಂ ಮತ್ತು ಜಿಪಂ ಚುನಾವಣೆಗಳಲ್ಲಿ ಪಕ್ಷದಿಂದ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಬೇಕು. ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳೊಂದಿಗೆ ಆಡಳಿತ ನಡೆಸುತ್ತಿದ್ದು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ ಎಂದರು.ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ರೈತರು ಸ್ವಾಭಿಮಾನದಿಂದ ಬದುಕು ಸಾಗಿಸುತ್ತಿದ್ದಾರೆ, ಅವರಿಗೆ ಸೌಲಭ್ಯಗಳನ್ನು ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ, ಕೃಷಿ ಚುಟುವಟಿಕೆಗಳಿಗೆ ಎಚ್‌ಎನ್‌ ವ್ಯಾಲಿ ಮತ್ತು ಕೆಸಿ ವ್ಯಾಲಿ ನೀರು ಯೋಗ್ಯವಲ್ಲ, ರೈತರ ವಿಚಾರಗಳನ್ನು ನಮ್ಮ ಪಕ್ಷ ಗಂಭೀರವಾಗಿ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.

ಕೊಟ್ಟ ಮಾತು ನೆರವೇರಿಸುವ ಧ್ಯೇಯ

ಕಾರ್ಯಕ್ರಮ ಮುಗಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ನಿಖಿಲ್‌ಕುಮಾರಸ್ವಾಮಿ, ತಮಗೆ ಅಧಿಕಾರದ ಪಡೆಯುವುದಕ್ಕಿಂತಲೂ ಮುಖ್ಯವಾಗಿ ನಮ್ಮ ಪಕ್ಷವನ್ನು ಬಲಪಡಿಸುವುದು ಮುಖ್ಯ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸುವ ಮೂಲಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ನೀಡಿರುವ ಮಾತನ್ನು ನೆರವೇರಿಸುವುದೇ ತಮ್ಮ ಧ್ಯೇಯ ಎಂದರು.

ಗ್ಯಾರಂಟಿ ಯೋಜನೆ ಜನಕ್ಕೆ ತಲುಪುತ್ತಿಲ್ಲ ಇದು ರಾಜ್ಯದ ಜನರ ಅಭಿಪ್ರಾಯ. ಗ್ಯಾರಂಟಿ ಕೊಡುವುದು ತಪ್ಪು ಅಂತ ಹೇಳ್ತಿಲ್ಲ. ಗ್ಯಾರಂಟಿ ಜತೆಗೆ ಅಭಿವೃದ್ಧಿ ಮಾಡಿ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯ ಅಭಿವೃದ್ಧಿ ಕಾಣುತ್ತಿಲ್ಲ. ಕಳೆದ ಎರಡು ವರ್ಷದಲ್ಲಿ ಎಷ್ಟು ಶಾಸಕರಿಗೆ ಎಷ್ಟು ಅನುದಾನ ಕೊಟ್ಟಿದ್ದಾರೆ. ಅಭಿವೃದ್ಧಿ ಹೆಸರಿನಲ್ಲಿ ಕಾಂಗ್ರೆಸ್ ಲೂಟಿ ಹೊಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಮೈತ್ರಿ ಸಮನ್ವಯ ಸಮಿತಿ ಅಗತ್ಯತಾಲೂಕು ಜೆಡಿಎಸ್ ಅಧ್ಯಕ್ಷ ಸಿ.ಮಂಜುನಾಥರೆಡ್ಡಿ ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜೆಡಿಎಸ್‌ ಹೆಚ್ಚು ಪ್ರಾಬಲ್ಯ ಹೊಂದಿದೆ, ಕ್ಷೇತ್ರದಲ್ಲಿ ನಾವು ಗೆಲ್ಲಬೇಕಾದರೆ ಮೊದಲಿಗೆ ಬಿಜೆಪಿ ಮತ್ತು ಜೆಡಿಎಸ್ ನಡುವೆ ಒಂದು ಸಮನ್ವಯ ಸಭೆ ಮಾಡಿ ಜೊತೆಯಲ್ಲಿ ಹೋದಾಗ ಖಂಡಿತ ಈ ಕ್ಷೇತ್ರ ಎನ್‌ಡಿಎ ಪಾಲಾಗುತ್ತದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಜಿಪಂ ಮಾಜಿ ಅಧ್ಯಕ್ಷ ಸಿ.ಆರ್.ನರಸಿಂಹಮೂರ್ತಿ, ಮಾಜಿ ವಿಧಾನ ಪರಿಷತ್ ಸದಸ್ಯ ತೂಪಲ್ಲಿ ಚೌಡರೆಡ್ಡಿ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರೋಶನ್ ಅಬ್ಬಾಸ್, ಯುವ ಜನತಾದಳ ರಾಜ್ಯ ಉಪಾಧ್ಯಕ್ಷ ರವೀಂದ್ರ ರೆಡ್ಡಿ, ಜಿಲ್ಲಾ ಜೆಡಿಎಸ್ ಪಕ್ಷದ ಅಧ್ಯಕ್ಷ ಮುಕ್ತ ಮುನಿಯಪ್ಪ, ತಾಲೂಕು ಜೆಡಿಎಸ್ ಘಟಕದ ಕಾರ್ಯಾಧ್ಯಕ್ಷ ನಟರಾಜ್, ಉಪಾಧ್ಯಕ್ಷ ಶ್ರೀನಿವಾಸರೆಡ್ಡಿ, ಮುಖಂಡರಾದ ವೆಂಕಟರವಣಪ್ಪ, ಸುಬ್ಬಮ್ಮ, ಚಿನ್ನಪ್ಪರೆಡ್ಡಿ, ನಂಜುಂಡಪ್ಪ, ಬಿ.ಎನ್.ರಾಘವೇಂದ್ರ ಇನ್ನಿತರರು ಭಾಗವಹಿಸಿದ್ದರು.

PREV