- ತಪೋವನದಲ್ಲಿ ಅಂತರ ರಾಷ್ಟ್ರೀಯ ಮಾದಕ ವಸ್ತುವಿರೋಧಿ ದಿನಾಚರಣೆಯಲ್ಲಿ ಡಿಸಿ ಡಾ.ವೆಂಕಟೇಶ
ಕನ್ನಡಪ್ರಭ ವಾರ್ತೆ, ದಾವಣಗೆರೆ
ವ್ಯಸನಮುಕ್ತ ಸಮಾಜ ನಿರ್ಮಾಣ ಮೂಲಕ ದೇಶದ ಭದ್ರ ಬುನಾದಿಗೆ, ಸದೃಢ, ಆರೋಗ್ಯವಂತ ರಾಷ್ಟ್ರ ನಿರ್ಮಾಣಕ್ಕೆ ನಾವೆಲ್ಲರೂ ಕಾರಣೀಭೂತರಾಗೋಣ ಎಂದು ಜಿಲ್ಲಾಧಿಕಾರಿ ಡಾ. ಎಂ.ವಿ. ವೆಂಕಟೇಶ ಹೇಳಿದರು.ತಾಲೂಕಿನ ದೊಡ್ಡ ಬಾತಿ ತಪೋವನದಲ್ಲಿ ಬುಧವಾರ ರಾಜ್ಯಮಟ್ಟದ ಸಮನ್ವಯ ಸಂಸ್ಥೆ ಕರ್ನಾಟಕ (ಪ್ರಾಯೋಜಿತ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ-ನವದೆಹಲಿ), ವಿಶೇಷಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ತಪೋವನ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ವೈದ್ಯಕೀಯ ವಿದ್ಯಾಲಯ ಮತ್ತು ಆಸ್ಪತ್ರೆ, ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು, ಆಸ್ಪತ್ರೆ, ತಪೋವನ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ದಾವಣಗೆರೆಯಿಂದ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಮಾದಕ ವಸ್ತುವಿನ ವಿರೋಧಿ ದಿನಾಚರಣೆ ಅಂಗವಾಗಿ ಮಾದಕ ವಸ್ತುವಿನ ವ್ಯಸನ ತಡೆಗಟ್ಟುವ ಕುರಿತ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಹೆಚ್ಚಿನ ಯುವಜನರು ಸಿನಿಮಾ, ಟಿವಿ, ಇಂಟರ್ನೆಟ್, ಜಾಹೀರಾತುಗಳಿಂದ ಹೆಚ್ಚಾಗಿ ಪ್ರಭಾವಿತರಾಗುತ್ತಿದ್ದಾರೆ. ಮತ್ತೆ ಕೆಲವರು ಸ್ನೇಹಿತರಿಂದ ಪ್ರಭಾವಿತರಾಗಿ, ತಂಬಾಕು ಉತ್ಪನ್ನಗಳಿಗೆ ದಾಸರಾಗುತ್ತಿದ್ದಾರೆ. ಇದು ಆತಂಕಕಾರಿ ಬೆಳವಣಿಗೆ. ಆದ್ದರಿಂದ ಶಾಲಾ, ಕಾಲೇಜು, ಹಾಸ್ಟೆಲ್ ಗಳ ಸುತ್ತಮುತ್ತ ತಂಬಾಕು ಉತ್ಪನ್ನ ಮಾರಾಟ, ಬಳಕೆ ನಿಷೇಧಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಗಳು, ಉಸಿರಾಟದ ಕಾಯಿಲೆಗಳು, ಕ್ಯಾನ್ಸರ್ ಸೇರಿದಂತೆ ಹೆಚ್ಚಿನ ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬೆಳವಣಿಗೆಗೆ ತಂಬಾಕು ವ್ಯಸನ ಕಾರಣವಾಗಬಲ್ಲದು ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ, ಎಎಸ್ಪಿ ಜಿ.ಮಂಜುನಾಥ, ತಪೋವನ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಪ್ರಾಚಾರ್ಯರಾದ ಡಾ.ಕೆ.ಆರ್.ಅಶ್ವಿನಿ, ಡಾ.ಗಂಗಾಧರ ವರ್ಮ, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಯು. ಯೊಗೇಂದ್ರ ಕುಮಾರ, ರಾಜ್ಯಮಟ್ಟದ ಸಮನ್ವಯ ಸಂಸ್ಥೆ ಸಿಬ್ಬಂದಿ, ತವೋವನ ಸಮೂಹ ಸಂಸ್ಥೆಗಳ ಸಿಬ್ಬಂದಿ, ವಿದ್ಯಾರ್ಥಿಗಳು ಇದ್ದರು.
ದಾವಣಗೆರೆ ತಾಲೂಕು ದೊಡ್ಡ ಬಾತಿ ತಪೋವನದಲ್ಲಿ ಬುಧವಾರ ಅಂತಾರಾಷ್ಟ್ರೀಯ ಮಾದಕ ವಸ್ತುವಿನ ವಿರೋಧಿ ದಿನಾಚರಣೆ ಅಂಗವಾಗಿ ನಡೆದ ಕಾರ್ಯಾಗಾರದಲ್ಲಿ ಡಿಸಿ ಡಾ.ವೆಂಕಟೇಶ, ಎಸ್ಪಿ ಉಮಾ ಪ್ರಶಾಂತ, ತಪೋವನದ ಡಾ.ಶಶಿಕುಮಾರ ವಿ.ಮೆಹರವಾಡೆ ಇತರರು ಪಾಲ್ಗೊಂಡರು.