ಸಮಸ್ಯೆಗಳ ಪರಿಹಾರಕ್ಕೆ ಪಕ್ಷಾತೀತವಾಗಿ ಕೆಲಸ ಮಾಡಿ: ಪೂಜಾರಿ

KannadaprabhaNewsNetwork | Published : Sep 18, 2024 1:51 AM

ಸಾರಾಂಶ

ಶೃಂಗೇರಿ, ಜನಪ್ರತಿನಿಧಿಗಳು ಜನಸೇವಕರಾಗಿ, ಜನರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಪಕ್ಷಾತೀತವಾಗಿ ಪ್ರಾಮಾಣಿಕ ಕೆಲಸ ಮಾಡಬೇಕು ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ

ಕನ್ನಡಪ್ರಭ ವಾರ್ತೆ, ಶೃಂಗೇರಿ

ಜನಪ್ರತಿನಿಧಿಗಳು ಜನಸೇವಕರಾಗಿ, ಜನರ ಮೂಲಭೂತ ಸಮಸ್ಯೆಗಳ ಪರಿಹಾರಕ್ಕೆ ಪಕ್ಷಾತೀತವಾಗಿ ಪ್ರಾಮಾಣಿಕ ಕೆಲಸ ಮಾಡಬೇಕು ಎಂದು ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಮಾತನಾಡಿದರು. ಜನರು ನಮ್ಮ ಮೇಲೆ ಭರವಸೆ, ವಿಶ್ವಾಸ, ನಂಬಿಕೆಗಳನ್ನಿಟ್ಟಿರುತ್ತಾರೆ. ಅವರ ನಿರೀಕ್ಷೆಗಳಿಗೆ ತಕ್ಕಂತೆ ನಾವು ಕೆಲಸ ಮಾಡಬೇಕು. ನಡೆದಾಡುವ ದಾರಿ, ಕುಡಿಯುವ ನೀರು, ಸಾವಿನ ವಿಷಯದಲ್ಲಿ ಎಂದಿಗೂ ರಾಜಕಾರಣ ಮಾಡಬಾರದು. ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡದೇ ಎಲ್ಲರೂ ಜತೆಯಾಗಿ ದುಡಿಯ ಬೇಕು ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಬಿಎಸ್ಎನ್ಎಲ್ ಸಮಸ್ಯೆ ಜ್ವಲಂತ ಸಮಸ್ಯೆಯಾಗಿದೆ. 217 ಟವರ್ ಗಳಿದ್ದು ಬಹುತೇಕ ಟವರ್ ಗಳು ಕಾರ್ಯನಿರ್ವಹಿಸದ ಸ್ಥಿತಿ ಯಲ್ಲಿದೆ. ಬ್ಯಾಟರಿ, ಜನರೇಟರ್ ಗಳು ಕೆಟ್ಟು ಹೋಗಿವೆ. ಬಿಎಸ್ಎನ್ಎಲ್ ದೇಶೀಯ ಸಂಸ್ಥೆಯಾಗಿದ್ದು ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುವುದು ಅದರ ಉದ್ದೇಶ ಎಂದರು.

ಎರಡು ತಿಂಗಳಲ್ಲಿ ಬಿಎಸ್ಎನ್ಎಲ್ ಗ್ರಾಹಕರ ಸಭೆ ಕರೆಯುತ್ತೇನೆ. ಗುಣಮಟ್ಟದ ಟವರ್ ಗಳನ್ನು ನಿರ್ಮಿಸಿ ಗ್ರಾಮೀಣ ಪ್ರದೇಶಗಳಲ್ಲಿ ಜನರಿಗೆ ಸುವ್ಯವಸ್ಥಿತ ಮೊಬೈಲ್ ಸಂಪರ್ಕ ಸೇವೆ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಉತ್ತಮ ಜನಪರ ಯೋಜನೆ ಜಾರಿಗೊಳಿಸುತ್ತಿದೆ. ಕೇಂದ್ರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕಿದೆ ಎಂದರು. ಮಾಜಿ ಸಚಿವ ಡಿ.ಎನ್. ಜೀವರಾಜ್, ಪಪಂ ಅಧ್ಯಕ್ಷ ವೇಣುಗೋಪಾಲ್, ಉಪಾಧ್ಯಕ್ಷ ಎಂ.ಎಲ್.ಪ್ರಕಾಶ್, ಮುಖ್ಯಾಧಿಕಾರಿ ಶ್ರೀಪಾದ್ ಮತ್ತಿತರರು ಇದ್ದರು.17 ಶ್ರೀ ಚಿತ್ರ 2-:

ಶೃಂಗೇರಿ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ - ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಮಾತನಾಡಿದರು.

Share this article