ಪುತ್ತೂರು ತಾಪಂ ತರಬೇತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಯ ಪ್ರಗತಿಪರಿಶೀಲನಾ ಸಭೆಯಲ್ಲಿ ಪುತ್ತೂರು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ಪಾಲ್ಗೊಂಡು ಮಾತನಾಡಿದರು.
ಕನ್ನಡಪ್ರಭ ವಾರ್ತೆ ಪುತ್ತೂರು
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಅರ್ಹತೆ ಇದ್ದ ಯಾವುದೇ ಫಲಾನುಭವಿಗಳು ವಂಚಿತರಾಗಬಾರದು. ಈ ರೀತಿಯಲ್ಲಿ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದ ಇಲಾಖೆಗಳು ಕೆಲಸ ಮಾಡಬೇಕು ಎಂದು ಪುತ್ತೂರು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ಉಮಾನಾಥ ಶೆಟ್ಟಿ ಪೆರ್ನೆ ಹೇಳಿದರು.ಅವರು ಪುತ್ತೂರು ತಾಪಂ ತರಬೇತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಯ ಪ್ರಗತಿಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗೃಹಲಕ್ಷ್ಮೀ ಯೋಜನೆಯಲ್ಲಿ ಫಲಾನುಭವಿಯಾಗಿರುವ ವ್ಯಕ್ತಿ ಮೃತಪಟ್ಟರೆ ಆ ಹಣವನ್ನು ಅವರು ದಾಖಲಿಸಿರುವ ವಾರೀಸುದಾರರು(ನಾಮಿನ್) ಪಡೆದುಕೊಳ್ಳಲು ಅವಕಾಶ ಇದೆ. ಆದರೆ ಮೃತಪಟ್ಟ ಬಳಿಕ ಬಂದ ಹಣ ವಾಪಸ್ ಸರ್ಕಾರಕ್ಕೆ ಸೇರುತ್ತದೆ ಎಂಬ ಸಮಸ್ಯೆಯೊಂದಕ್ಕೆ ಸಂಬಂಧಿಸಿ ಅವರು ಮಾಹಿತಿ ನೀಡಿದರು. ದಾರಿ ಹಾಗೂ ರಸ್ತೆ ಬದಿಗಳಲ್ಲಿ ಹಾಕಲಾಗಿರುವ ಟಿಸಿಗಳು ಮಳೆಗಾಲದಲ್ಲಿ ಜನರಿಗೆ ಅಪಾಯ ಉಂಟು ಮಾಡುವ ಸಾಧ್ಯತೆ ಇದೆ. ಹಾಗಾಗಿ ಈ ಬಗ್ಗೆ ಮೆಸ್ಕಾಂ ಇಲಾಖೆ ಕ್ರಮ ವಹಿಸಬೇಕು. ಇಂತಹ ಅಪಾಯಕಾರಿ ಟಿಸಿಗಳು ಇರುವಲ್ಲಿ ಬೆಳಕಿನ ವ್ಯವಸ್ಥೆ ಮಾಡಬೇಕು ಎಂದು ಸದಸ್ಯ ಸಂತೋಷ್ ಭಂಡಾರಿ ಹೇಳಿದರು. ಅಂತಹ ಕಡೆಗಳಲ್ಲಿ ಬೆಳಕಿನ ವ್ಯವಸ್ಥೆ ಮಾಡುವುದು ಕಷ್ಟಸಾಧ್ಯ. ಆದರೆ ತೊಂದರೆಗಳಾಗದಂತೆ ಕ್ರಮ ಕೈಗೊಳ್ಳುವ ಭರವಸೆಯನ್ನು ಮೆಸ್ಕಾಂ ಇಲಾಖೆಯ ಕುಂಬ್ರಶಾಖೆಯ ಸಹಾಯಕ ಇಂಜಿನಿಯರ್ ಶಿವಕುಮಾರ್ ನೀಡಿದರು.
ವೇದಿಕೆಯಲ್ಲಿ ಸಮಿತಿಯ ಸದಸ್ಯ ಕಾರ್ಯದರ್ಶಿ ತಾಪಂ ಕಾರ್ಯನಿರ್ವಹಣಾಧಿಕಾರಿ ನವೀನ್ಕುಮಾರ್ ಭಂಡಾರಿ ಹಾಗೂ ತಾಪಂ ವ್ಯವಸ್ಥಾಪಕ ಜಯಪ್ರಕಾಶ್ ಉಪಸ್ಥಿತರಿದ್ದರು. ಸಭೆಯಲ್ಲಿ ತಾಪಂ ಮ್ಯಾನೇಜರ್ ಜಯಪ್ರಕಾಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪ್ರಭಾರ ಸಿಡಿಪಿಒ ಪ್ರೀಯಾ ಆಗ್ನೆಸ್ , ಆಹಾರ ಇಲಾಖೆಯ ಶಿರಸ್ತೇದಾರ್ ಸರಸ್ವತಿ ಹಾಗೂ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.