ಕುಷ್ಟಗಿ: ಸರ್ಕಾರಿ ನೌಕರರು ತಾಲೂಕಿನ ಜನರ ಹಿತ ಕಾಪಾಡುವಂತೆ ಕೆಲಸ ಮಾಡಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಹೇಳಿದರು.
ರಾಜಕಾರಣಿ ಹಾಗೂ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ನಿರ್ವಹಿಸಿದಾಗ ಅಭಿವೃದ್ಧಿಗೆ ಅನೂಕೂಲವಾಗಲಿದೆ, ಸದ್ಯ ತಾಲೂಕಿನಲ್ಲಿ ಸರ್ಕಾರಿ ನೌಕರರ ಸಂಖ್ಯೆ ಕಡಿಮೆ ಇದ್ದರೂ ಸಹಿತ ಇಲ್ಲಿನ ಅಧಿಕಾರಿಗಳು ಉತ್ತಮ ಸೇವೆ ನೀಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದರು.
ಕುಷ್ಟಗಿ ಪಟ್ಟಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ತಾಲೂಕು ಘಟಕದ ನೂತನ ಕಟ್ಟಡಕ್ಕೆ ಅನುದಾನ ಕೊಡುತ್ತೇನೆ, ಕಟ್ಟಡ ಕಾರ್ಯ ಪ್ರಾರಂಭ ಮಾಡಲು ಮುಂದಾಗಬೇಕು ಎಂದು ಶಿಕ್ಷಕರ ಬೇಡಿಕೆಗಳ ಕುರಿತು ಸರ್ಕಾರಕ್ಕೆ ಒತ್ತಾಯ ಮಾಡುತ್ತೇನೆ ಎಂದು ಹೇಳಿದರು.ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣನವರು ಮಾತನಾಡಿ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘಟನೆಯು ರಾಷ್ಟ್ರ ಮಟ್ಟದಲ್ಲಿ ಉತ್ತಮ ಹೆಸರು ಪಡೆದುಕೊಂಡಿದೆ, ನಾವೆಲ್ಲರು ಸಾರ್ವಜನಿಕ ಸೇವೆಯಲ್ಲಿ ಕೆಲಸ ಮಾಡುವವರಾಗಿದ್ದು, ಕೆಟ್ಟ ಹೆಸರು ಬಾರದಂತೆ ಕೆಲಸ ಮಾಡಬೇಕು ಎಂದರು.
ಅಭಿನಂದನಾ ಸಮಾರಂಭ: ಕುಷ್ಟಗಿ ತಾಲೂಕಿಗೆ ನೂತನವಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳಿಗೆ ಶಾಸಕ ದೊಡ್ಡನಗೌಡ ಪಾಟೀಲ ಹಾಗೂ ಜಿಲ್ಲಾಧ್ಯಕ್ಷ ನಾಗರಾಜ ಜುಮ್ಮಣ್ಣನವರು ಸನ್ಮಾನಿಸಿ ಅಭಿನಂದನೆ ಸಲ್ಲಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ರಾಜ್ಯ ಸಂಘಟನೆ ಕಾರ್ಯದರ್ಶಿ ಗುರಪ್ಪ ಕುರಿ, ರಾಜ್ಯ ಪರಿಷತ್ ಸದಸ್ಯ ಡಾ. ಸಿದ್ದಲಿಂಗಯ್ಯ ಶಂಕಿನ, ತಾಲೂಕಾಧ್ಯಕ್ಷ ಶ್ರೀನಿವಾಸ ನಾಯಕ, ಜಿಲ್ಲಾ ಕಾರ್ಯದರ್ಶಿ ಶಿವಪ್ಪ ಜೋಗಿ, ಪ್ರೌಢ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನೀಲನಗೌಡ ಹೊಸಗೌಡ್ರು, ಪ್ರಾಥಮಿಕ ಶಿಕ್ಷಕರ ಸಂಘದ ಗೌರವ ಅಧ್ಯಕ್ಷ ಲಕ್ಷ್ಮಣ ಪೂಜಾರ ಸೇರಿದಂತೆ ಸರ್ಕಾರಿ ನೌಕರ ಸಂಘದ ಪದಾಧಿಕಾರಿಗಳು ಹಾಗೂ ನೌಕರರು ಇದ್ದರು.