ಪಟ್ಟಣ ಪಂಚಾಯಿತಿಯಲ್ಲಿ ಅಂತಾರಾಷ್ಟ್ರೀಯ ಕಾರ್ಮಿಕ ದಿನಾಚರಣೆ
ದೇಶದ ಅಭಿವೃದ್ಧಿಯಲ್ಲಿ ಕಾರ್ಮಿಕರ ಕೊಡುಗೆ ಅಪರೂಪವಾಗಿದೆ ಎಂದು ಸಿವಿಲ್ ನ್ಯಾಯಾಧೀಶ ಆರ್.ಎಸ್.ಜೀತು ಅಭಿಪ್ರಾಯಪಟ್ಟರು.ಬುಧವಾರ ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಸಹಾಯಕ ಅಭಿಯೋಜನಾ ಇಲಾಖೆ ಮತ್ತು ಪಟ್ಟಣ ಪಂಚಾಯಿತಿ ಆಶ್ರಯದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಕಾರ್ಮಿಕ ದಿನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಸ್ವಾತಂತ್ರ್ಯ ಬಂದಾಗಿನಿಂದ ಕಾರ್ಮಿಕರ ಹಿತ ಕಾಪಾಡುವ ನಿಟ್ಟಿನಲ್ಲಿ ಕನಿಷ್ಠ ಕೂಲಿ ಕಾಯ್ದೆ, ಸಮಾನ ಕೆಲಸಕ್ಕೆ ಸಮಾನ ವೇತನ, ಕಾರ್ಮಿಕರ ದೌರ್ಜನ್ಯ ತಡೆಗಟ್ಟುವ, ಕಾರ್ಮಿಕರು ಕೆಲಸ ಮಾಡುವ ಸ್ಥಳಗಳಲ್ಲಿ ಮೂಲ ಸೌಲಭ್ಯ ಒದಗಿಸುವ, ಮಹಿಳಾ ಕಾರ್ಮಿಕರಿಗೆ ಹೆರಿಗೆ ರಜೆ ಸೌಲಭ್ಯ, ಮಗುವಿನ ಆರೈಕೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಹಲವು ಕಾನೂನುಗಳನ್ನು ಸರ್ಕಾರ ಜಾರಿಗೆ ತರಲಾಗಿದೆ. ಕಾರ್ಮಿಕರ ರಕ್ಷಣೆಯೇ ಈ ಕಾನೂನುಗಳ ಪ್ರಮುಖ ಉದ್ದೇಶ. ಮೈಸೂರು ಸಂಸ್ಥಾನದ ದಿವಾನರಾಗಿದ್ದ ಸರ್.ಎಂ.ವಿಶ್ವೇಶ್ವರಯ್ಯ ಕೈಗಾರೀಕರಣ ಇಲ್ಲವೇ ವಿನಾಶ ಎಂಬ ಹೇಳಿಕೆ ನೀಡುವ ಮೂಲಕ ಹಲವು ಕೈಗಾರಿಕೆ, ಬ್ಯಾಂಕುಗಳನ್ನು ಸ್ಥಾಪಿಸಿ ದೇಶದ ಅಭಿವೃದ್ಧಿಗೆ ಭದ್ರ ಬುನಾದಿ ಹಾಕಿಕೊಟ್ಟರು. ಭಾರತ ಸ್ವಾತಂತ್ರ್ಯ ಪಡೆದ ನಂತರ ಮೊದಲನೇ ಪಂಚವಾರ್ಷಿಕ ಯೋಜನೆಯಲ್ಲಿ ಕೃಷಿಗೆ ಆದ್ಯತೆ ನೀಡಲಾಯಿತು ಎಂದರು.ಅಂತಾರಾಷ್ಟ್ರೀಯ ಕಾರ್ಮಿಕ ದಿನದ ಕುರಿತು ವಕೀಲ ಎಚ್.ಎಂ.ಬಸವರಾಜ್ ಉಪನ್ಯಾಸ ನೀಡಿ, ಕಾರ್ಮಿಕರ ಹಿತರಕ್ಷಣೆಗೆ 18ನೇ ಶತಮಾನದಿಂದಲೂ ಕಾನೂನು ಜಾರಿಗೆ ತರಲಾಗಿದೆ. ಕಾರ್ಮಿಕರನ್ನು ದುಡಿಸಿಕೊಳ್ಳುವ ಜತೆಗೆ ಅವರನ್ನು ಮನುಷ್ಯರಂತೆ ಕಾಣುವುದು. ಗಂಡು, ಹೆಣ್ಣು ಎಂಬ ತಾರತಮ್ಯ ಮಾಡದೆ ಸಮಾನ ವೇತನ, ದಿನಕ್ಕೆ ಕನಿಷ್ಠ 8 ಗಂಟೆಗಳ ಕೆಲಸ, ಕಾರ್ಮಿಕ ಸಂಘಟನೆ ಒಕ್ಕೂಟಗಳಿಗೆ ರಕ್ಷಣೆ ನೀಡುವುದು, ಮಾಲೀಕ ಮತ್ತು ಕಾರ್ಮಿಕರ ನಡುವೆ ಸಂಬಂಧ ಉತ್ತಮ ಪಡಿಸುವುದು. ಬಾಲಕಾರ್ಮಿಕ ಪದ್ದತಿ ಸಂಪೂರ್ಣ ನಿರ್ಮೂಲನೆ ಮಾಡುವುದು, ಶ್ರಮಕ್ಕೆ ಗೌರವ ಕೊಡುವುದು ಕಾರ್ಮಿಕ ರಕ್ಷಣೆಯ ಕಾನೂನುಗಳ ಉದ್ದೇಶವಾಗಿದೆ ಎಂದರು.
ಪಟ್ಟಣ ಪಂಚಾಯಿತಿ ಲೆಕ್ಕಾಧಿಕಾರಿ ಉಷಾ, ಮಮತಾ ನಾಗರಾಜ್ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಪೌರ ಕಾರ್ಮಿಕರು ಭಾಗಹಿಸಿದ್ದರು.