ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಪಂನಿಂದ ಸಿಐಟಿಯು, ಪ್ರಾಂತ ರೈತ ಸಂಘದ ಮುಖಂಡರು, ಅಂಗನವಾಡಿ, ಬಿಸಿಯೂಟ ನೌಕರರು, ಕಟ್ಟಡ ಕಾರ್ಮಿಕರು, ಎಲ್ಐಸಿ ಸೇರಿದಂತೆ ನೂರಾರು ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪಟ್ಟಣದ ಅನಂತ್ರಾಂ ವೃತ್ತದ ಆವರಣದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.
ಜನವಾದಿ ಮಹಿಳಾ ಸಂಘಟನೆ ರಾಜ್ಯ ಕಾರ್ಯದರ್ಶಿ ದೇವಿ ಮಾತನಾಡಿ, ಹೋರಾಟದ ತ್ಯಾಗ ಬಲಿದಾನದ ಸಂಕೇತವಾಗಿ ಜಾರಿಯಾಗಿರುವ ಕಾರ್ಮಿಕ ಕಾಯ್ದೆಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದು ಕಾರ್ಮಿಕರನ್ನು ಕಾರ್ಪೊರೇಟ್ ಕಂಪನಿಗಳ ಗುಲಾಮರನ್ನಾಗಿ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.ಕಾರ್ಮಿಕರು 8 ಗಂಟೆಗಳ ಕಾಲದ ಕೆಲಸದ ಅವಧಿಯನ್ನು 10 ಗಂಟೆಗೆ ಏರಿಕೆ ಮಾಡಿರುವುದು ಕಾರ್ಮಿಕ ವಿರೋಧಿ ನೀತಿಯಾಗಿದೆ. ಹಲವು ತಿದ್ದುಪಡಿಗಳ ಮೂಲಕ ಕೇಂದ್ರ ಸರ್ಕಾರ ಕಾರ್ಮಿಕರ ಧಮನಕಾರಿ ಕಾನೂನು ಜಾರಿಗೆ ಮುಂದಾಗಿರುವುದು ಸರಿಯಲ್ಲ. ರಾಜ್ಯ ಸರ್ಕಾರ ದೇವನಹಳ್ಳಿ ಸುತ್ತಮುತ್ತ 1700 ಎಕರೆ ರೈತರ ಕೃಷಿ ಜಮೀನನ್ನು ಕಿತ್ತು ಕಾರ್ಪೊರೇಟ್ ಕಂಪನಿಗಳಿಗೆ ನೀಡಲು ಮುಂದಾಗಿರುವುದನ್ನು ತೀವ್ರವಾಗಿ ಖಂಡಿಸಿದರು.
ಪ್ರತಿಭಟನೆಗೆ ತೆಗೆದುಕೊಂಡಿದ್ದ ಕಾಲಮಿತಿ ಮುಗಿದ ಹಿನ್ನೆಲೆಯಲ್ಲಿ ಪ್ರತಿಭಟನೆ ತೆರವುಗೊಳಿಸುವಂತೆ ಪೊಲೀಸರು ಸೂಚಿಸಿದರೂ ಪ್ರತಿಭಟನೆ ಮುಂದುವರೆಸಿದಾಗ ಪೊಲಿಸರು ಹಾಗೂ ಪ್ರತಿಭಟನಾಕಾರರ ನಡುವೆ ತಳ್ಳಾಟ ನೂಕಾಟ ಹಾಗೂ ಮಾತಿನ ಚಕಾಮಕಿ ನಡೆಯಿತು. ನಂತರ ಎಲ್ಲಾ ಪ್ರತಿಭಟನಾಕಾರರನ್ನು ಬಂಧಿಸಿ ನಂತರ ಬಿಡುಗಡೆಗೊಳಿಸಲಾಯಿತು.ಪ್ರತಿಭಟನೆಯಲ್ಲಿ ಮುಖಂಡರಾದ ಪ್ರಾಂತ ರೈತ ಸಂಘದ ಭರತ್ ರಾಜ್, ಕೃಷಿ ಕೂಲಿಕಾರರ ಸಂಘದ ಶಿವಮಲ್ಲಯ್ಯ, ರಾಮಣ್ಣ, ಆನಂದ್, ಸಿಐಟಿಯುನ ಶೀಲಾ ಮಂಜುಳ, ಜಿ ರಾಮಕೃಷ್ಣ, ಮಹಾದೇವಮ್ಮ, ಪ್ರಾಂತ ರೈತ ಸಂಘದ ಲಿಂಗರಾಜ ಮೂರ್ತಿ, ಅಂಗನವಾಡಿ ನೌಕರರ ಸಂಘದ ಲತಾ, ಸೇರಿದಂತೆ ಹಲವಾರು ಮುಖಂಡರು ಪಾಲ್ಗೊಂಡಿದ್ದರು.