ಶೆಟ್ಟಿಕೊಪ್ಪ ಸಮೀಪದ ಕರುಗುಂದದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ
ಮುಂಬರುವ ಜಿಲ್ಲಾ ಪಂ, ತಾಲೂಕು ಪಂ ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗೆ ಕಾರ್ಯಕರ್ತರು ಸಿದ್ದರಾಗಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಶಿವಮೊಗ್ಗ ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಕರೆ ನೀಡಿದರು.
ಸೋಮವಾರ ರಾತ್ರಿ ತಾಲೂಕಿನ ಕಡಹಿನಬೈಲು ಗ್ರಾಪಂ ಘಟಕದ ಅಧ್ಯಕ್ಷ ಕರುಗುಂದ ನಂದೀಶ್ ಮನೆಯಂಗಳದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ನಿಷ್ಟಾವಂತ ಕಾರ್ಯಕರ್ತರಿಂದ ಕಾಂಗ್ರೆಸ್ ಪಕ್ಷ ಸಧೃಢವಾಗಿದೆ. ಪಕ್ಷದ ಸಂಘಟನೆಗೆ ಆರೋಗ್ಯಕರ ಚರ್ಚೆಗಳಾಗಬೇಕು. ಕಾಂಗ್ರೆಸ್ ಸರ್ಕಾರದ ಜನಪ್ರಿಯ ಕಾರ್ಯಕ್ರಮ, ಯೋಜನೆಗಳನ್ನು ಜನರಿಗೆ ತಲುಪಿಸುವ ಕಾರ್ಯ ಮಾಡಬೇಕು. ಕೇಂದ್ರದ ಬಿಜೆಪಿ ಸರ್ಕಾರದ ಜನ ವಿರೋಧಿ ನೀತಿಗಳ ಬಗ್ಗೆ ಜನರಲ್ಲಿ ಜನಜಾಗೃತಿ ಮೂಡಿಸಬೇಕು. ರಾಜ್ಯದ ಜನತೆಗೆ ಪಂಚ ಗ್ಯಾರಂಟಿ ನೀಡುವ ಮೂಲಕ ಕಾಂಗ್ರೆಸ್ ನುಡಿದಂತೆ ನಡೆದಿದೆ. ಗ್ಯಾರಂಟಿಗಳು ಬಡ ಜನರಿಗೆ ಆರ್ಥಿಕ ಶಕ್ತಿ ತುಂಬಿದೆ. ಮುಂಬರುವ ಜಿಪಂ. ತಾಪಂ. ಹಾಗೂ ಗ್ರಾಪಂ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆದ್ದು ಬರುವಂತೆ ಕಾರ್ಯಕರ್ತರೆಲ್ಲರೂ ಒಗ್ಗೂಡಿ, ಸಂಘಟಿತ ರಾಗಬೇಕು. ಈಗಾಗಲೇ ಮತದಾರರ ಪಟ್ಟಿ ಮ್ಯಾಪಿಂಗ್ ಕಾರ್ಯ ನಡೆಯುತ್ತಿದೆ. ಇದರ ಬಗ್ಗೆ ಪಕ್ಷದ ಮುಖಂಡರು ನಿಗಾವಹಿಸಬೇಕು ಎಂದರು.ಮುಖ್ಯ ಅತಿಥಿಯಾಗಿದ್ದ ಶಾಸಕ ಟಿ.ಡಿ.ರಾಜೇಗೌಡ ಮಾತನಾಡಿ, ಹಿಂದೆ ರಾಜ್ಯದಲ್ಲಿ ಯಾವುದೇ ಭಾಗ್ಯಗಳಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಗ್ಯಾರಂಟಿ ಯೋಜನೆಗಳ ಮೂಲಕ ಜನರಿಗೆ ಭಾಗ್ಯಗಳನ್ನು ನೀಡಿದೆ. ಈ ಯೋಜನೆಗಳಿಗೆ ಪ್ರತೀ ವರ್ಷ 60 ಸಾವಿರ ಕೋಟಿ ವ್ಯಯಿಸಲಾಗುತ್ತಿದೆ. ರಾಜ್ಯಕ್ಕೆ ಭಾಗ್ಯಗಳನ್ನು ನೀಡದಿದ್ದರೆ ಪ್ರತೀ ಶಾಸಕರಿಗೆ ₹250 ರಿಂದಾ ₹300 ಕೋಟಿ ಹೆಚ್ಚುವರಿ ಅನುದಾನ ಲಭಿಸುತ್ತಿತ್ತು. ಆದರೆ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನತೆ ಬಲಿಷ್ಠರಾಗಿದ್ದಾರೆ. ಕೊರೋನಾ ಸಂದರ್ಭದಲ್ಲಿ ಅನೇಕರು ತಮ್ಮ ಜೀವ ಹಾಗೂ ಜೀವನ ಕಳೆದುಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆ ಜಾರಿ ಮಾಡಿ, ಸವಲತ್ತು ಉಚಿತವಾಗಿ ನೀಡುವ ಮೂಲಕ ಜನ ಜೀವನ ಸುಧಾರಿ ಸಲು ಕಾರಣವಾಗಿದೆ. ಕ್ಷೇತ್ರದಲ್ಲಿ ವಿರೋಧ ಪಕ್ಷದವರು ನನಗೆ ತೊಂದರೆ ಕೊಟ್ಟಷ್ಟು ಬೇರೆ ಯಾವ ಶಾಸಕರಿಗೂ ಕೊಟ್ಟಿಲ್ಲ. ಆದರೂ ಕಾರ್ಯಕರ್ತರ ಬೆಂಬಲದಿಂದ ಎಲ್ಲಾ ಅವಮಾನ ಸಹಿಸಿ ಎದೆಗುಂದದೆ ಮುನ್ನುಗ್ಗುತ್ತಿದ್ದೇನೆ. ಪಕ್ಷದ ಕಾರ್ಯಕರ್ತರು ಸದಾ ನನಗೆ ಬೆನ್ನೆಲುಬಾಗಿ ನಿಂತು ಸಹಕಾರ ನೀಡಿದ್ದಾರೆ. ಅವರಿಗೆ ನಾನು ಸದಾ ಚಿರಋಣಿ ಎಂದರು. ಕೆಪಿಸಿಸಿ ಸದಸ್ಯ ಪಿ.ಆರ್. ಸದಾಶಿವ ಮಾತನಾಡಿ, ಶೃಂಗೇರಿ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತರುವಲ್ಲಿ ನಮ್ಮ ಶಾಸಕರು ವಿಶೇಷ ಕಾಳಜಿ ವಹಿಸಿದ್ದಾರೆ. ಬಿಜೆಪಿಯವರು ಕೇವಲ ರಾಜಕಾರಣಕ್ಕಾಗಿ ಇಲ್ಲ ಸಲ್ಲದ ಟೀಕೆ ಮಾಡುತ್ತಿದ್ದಾರೆ ಎಂದರು.ಅಧ್ಯಕ್ಷತೆಯನ್ನು ಕಡಹಿನಬೈಲು ಗ್ರಾ.ಪಂ. ಘಟಕದ ಅಧ್ಯಕ್ಷ ಕುರಗುಂದ ನಂದೀಶ್ ವಹಿಸಿದ್ದರು.ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳನ್ನು ಸನ್ಮಾನಿಸಲಾಯಿತು. ಬಾಳೆಹೊನ್ನೂರು ಬ್ಲಾಕ್ ಕಾಂಗ್ರೆಸ್ ಘಟಕದ ಅಧ್ಯಕ್ಷ ಗೇರ್ಬೈಲ್ನಟರಾಜ್, ಪ್ರಧಾನ ಕಾರ್ಯದರ್ಶಿ ಸುನೀಲ್ಕುಮಾರ್, ಬಗರ್ ಹುಕುಂ ಸಮಿತಿ ಅಧ್ಯಕ್ಷ ಈ.ಸಿ.ಜೋಯಿ, ಜಿಲ್ಲಾ ಸಮಿತಿ ಕಾರ್ಯದರ್ಶಿ ಕೆ.ಎಂ.ಸುಂದರೇಶ್, ಕೊಪ್ಪ ಎಪಿಎಂಸಿ ಅಧ್ಯಕ್ಷ ಎಸ್.ಡಿ. ರಾಜೇಂದ್ರ, ಕಾಂಗ್ರೆಸ್ ಪಕ್ಷದ ಮುಖಂಡರಾದ ಅಭಿಲಾಷ್,ಸಜಿ, ಎಲ್ದೋ,ಪತ್ರೋಸ್,ಜೇಮ್ಸ್, ಅಬ್ದುಲ್ರೆಹಮಾನ್ ಮತ್ತಿತರರು ಇದ್ದರು.