ಕನ್ನಡಪ್ರಭ ವಾರ್ತೆ ಹನೂರುಕಾರ್ಮಿಕರು ಸಂಘಟಿತರಾಗುವ ಮೂಲಕ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗಾಗಿ ಸಿಗುವ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.ತಾಲೂಕಿನ ಒಡೆಯರ ಪಾಳ್ಯ ಗ್ರಾಮದಲ್ಲಿ ರಾಜ್ಯ ಭಾರತಮಾತಾ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘ, ಒಡೆಯರ ಪಾಳ್ಯ ಶಾಖೆ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಕಾರ್ಮಿಕರು ಶ್ರಮಕ್ಕೆ ತಕ್ಕಂತಹ ಸೌಲಭ್ಯಗಳನ್ನು ಪಡೆಯಲು ಸಂಘಟನೆ ಬಹಳ ಮುಖ್ಯವಾಗಿದೆ. ಇದಕ್ಕಾಗಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ಕ್ರಿಯಾಶೀಲ ಮಂತ್ರಿಯಾಗಿ ಕಾರ್ಮಿಕರಿಗೆ ಹಲವಾರು ಸೌಲಭ್ಯಗಳನ್ನು ಒದಗಿಸಿಕೊಡುವಲ್ಲಿ ಶ್ರಮವಹಿಸಿ ಕೆಲಸ ಮಾಡುತ್ತಿದ್ದಾರೆ. ಇದಕ್ಕಾಗಿ ಕೆಲವು ನಿಯಮಗಳನ್ನು ತಿದ್ದುಪಡಿ ಮಾಡಿಸಿದ್ದಾರೆ.
ಅಧಿಕಾರಿಗಳು ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗಾಗಿ ಸಿಗುವಂತಹ ಸೌಲಭ್ಯಗಳ ಬಗ್ಗೆ ಮಾಹಿತಿ ಇರುವ ಕರಪತ್ರಗಳನ್ನು ಮುದ್ರಿಸಿ, ಕಾರ್ಮಿಕರಿಗೆ ನೀಡುವ ಮೂಲಕ ಮಾಹಿತಿ ಮತ್ತು ಜಾಗೃತಿ ಮೂಡಿಸಬೇಕು. ಶೀಘ್ರದಲ್ಲೇ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಬಗ್ಗೆ ತಾಲೂಕು ಹಂತದಲ್ಲಿ ಮಾಹಿತಿ ಕಾರ್ಯಾಗಾರವನ್ನು ನಡೆಸುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಾನಸ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಡಾ.ದತ್ತೇಶ್ ಮಾತನಾಡಿ, ಕಟ್ಟಡ ಕಾರ್ಮಿಕ ವರ್ಗ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ಕಾರ್ಮಿಕರು ಸಂಘಟಿತರಾಗಿ ಸೌಲಭ್ಯ ಪಡೆದುಕೊಳ್ಳಿ. ಕಟ್ಟಡ ನಿರ್ಮಾಣ ಸಂದರ್ಭದಲ್ಲಿ ಸರ್ಕಾರಕ್ಕೆ ನೀಡುವ ಶೇ.1ರಷ್ಟು ತೆರಿಗೆಯನ್ನು ಕಾರ್ಮಿಕರಿಗಾಗಿ ಮೀಸಲಿಡಲಾಗುವುದು ಎಂದು ತಿಳಿಸಿದರು. ಕಾರ್ಮಿಕರಿಗಾಗಿ ಕಾರ್ಮಿಕ ಇಲಾಖೆಯಿಂದ ಸಿಗುವಂತ ಸೌಲಭ್ಯಗಳ ಬಗ್ಗೆ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಕಾರ್ಮಿಕರಿಗೆ ಕಿಟ್ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಭಾರತಮಾತಾ ಕಾರ್ಮಿಕ ಸಂಘದ ರಾಜ್ಯಾಧ್ಯಕ್ಷ ಸಿದ್ದರಾಜು ಜಿ, ಪ್ರಧಾನ ಕಾರ್ಯದರ್ಶಿ ನೂರ್ ಅಹಮದ್ ಮರ್ಚೆಂಟ್, ಟಿ.ನರಸೀಪುರ ತಾಲೂಕು ಅಧ್ಯಕ್ಷ ರಾಜೇಶ್, ಎಇಇ ರಂಗಸ್ವಾಮಿ, ಕಾರ್ಮಿಕ ನಿರೀಕ್ಷಕ ವಿ.ಎಲ್.ಪ್ರಸಾದ್, ಮುಖಂಡರಾದ ಮಂಜೇಶ್, ಷಡಕ್ಷರಿ, ಸಂಘದ ಅಧ್ಯಕ್ಷ ನಾಗೇಂದ್ರ ಸ್ವಾಮಿ ಸೇರಿದಂತೆ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.