ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ದ್ವಿತೀಯ ಪಿಯು ಪರೀಕ್ಷೆ ವಿದ್ಯಾರ್ಥಿಗಳ ಜೀವನದ ಅತ್ಯಂತ ನಿರ್ಣಾಯಕ ಘಟ್ಟವಾಗಿದೆ. ಭವಿಷ್ಯ ರೂಪಿಸಿಕೊಳ್ಳುವ ಪ್ರಮುಖ ಹಂತ. ಈ ಬಾರಿ ಚಿತ್ರದುರ್ಗ ಜಿಲ್ಲೆ ರಾಜ್ಯಮಟ್ಟದ ಫಲಿತಾಂಶದಲ್ಲಿ ಮೊದಲ ಮೂರು ಸ್ಥಾನಗಳಲ್ಲಿ ಒಂದನ್ನು ಅಲಂಕರಿಸುವಂತಾಗಬೇಕು ಎಂದು ಸಂಸದ ಗೋವಿಂದ ಎಂ.ಕಾರಜೋಳ ಆಶಯ ವ್ಯಕ್ತಪಡಿಸಿದರು.
ಶಿಕ್ಷಣ ಕ್ಷೇತ್ರದಲ್ಲಿ ಇಂದು ಹೆಣ್ಣುಮಕ್ಕಳು ಗಂಡುಮಕ್ಕಳಿಗಿಂತಲೂ ಹೆಚ್ಚಿನ ಶ್ರಮವಹಿಸಿ ಅದ್ಭುತ ಪೈಪೋಟಿ ನೀಡುತ್ತಿರುವುದು ಹೆಮ್ಮೆಯ ಸಂಗತಿ. ಪದವಿ ಹಾಗೂ ಉನ್ನತ ಶಿಕ್ಷಣದಲ್ಲಿಯೂ ಮಹಿಳೆಯರು ಮುಂಚೂಣಿಯಲ್ಲಿದ್ದಾರೆ. ಲಭ್ಯವಾಗುವ ಅವಕಾಶಗಳ ಸಮರ್ಥವಾಗಿ ಬಳಕೆ ಮಾಡಿಕೊಂಡು ಶೈಕ್ಷಣಿಕ ಉನ್ನತಿ ಸಾಧಿಸುವಂತೆ ಕಾರಜೋಳ ಮನವಿ ಮಾಡಿದರು.ಕಳೆದ 2023ರಲ್ಲಿ ಜಿಲ್ಲೆಯು ಪಿಯು ಫಲಿತಾಂಶದಲ್ಲಿ ಶೇ.59ರಷ್ಟು ಫಲಿತಾಂಶದೊಂದಿಗೆ 28ನೇ ಸ್ಥಾನದಲ್ಲಿತ್ತು. ಮತ್ತು 2024ರಲ್ಲಿ ಫಲಿತಾಂಶ ಶೇ.72ಕ್ಕೆ ಏರಿಕೆಯಾದರೂ ಸ್ಥಾನ 31ಕ್ಕೆ ಕುಸಿದಿತ್ತು. ಈ ಬಾರಿ ಜಿಲ್ಲೆಯ ಶೈಕ್ಷಣಿಕ ಗೌರವವನ್ನು ಹೆಚ್ಚಿಸಲು ವಿದ್ಯಾರ್ಥಿಗಳು ಶ್ರಮಿಸಬೇಕು ಎಂದು ಕರೆ ನೀಡಿದರು.
291 ವಿದ್ಯಾರ್ಥಿಗಳು ಗೈರು
ಫೆ.28ರಂದು ನಡೆದ ದ್ವಿತೀಯ ಪಿಯುಸಿ ಪರೀಕ್ಷೆ-1 ಕನ್ನಡ ವಿಷಯದಲ್ಲಿ 291 ವಿದ್ಯಾರ್ಥಿಗಳು ಗೈರಾಗಿದ್ದಾರೆ. ಕನ್ನಡ ವಿಷಯದಲ್ಲಿ 11,994 ವಿದ್ಯಾರ್ಥಿಗಳು ನೋಂದಣಿಯಾಗಿದ್ದು, 11,703 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, 291 ವಿದ್ಯಾರ್ಥಿಗಳು ಗೈರಾಗಿದ್ದಾರೆ.ಜಿಲ್ಲೆಯ 26 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು ಎಂದು ಡಿಡಿಪಿಯು ಕೆ.ತಿಮ್ಮಪ್ಪ ತಿಳಿಸಿದ್ದಾರೆ.