ಕನ್ನಡಪ್ರಭ ವಾರ್ತೆ ಶಹಾಪುರ
ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಚನ್ನಪ್ಪ ಆನೆಗುಂದಿ ಅವರು, ಶತಮಾನಗಳಲ್ಲೆ ಎಂದೂ ಕಾಣದ ಬರಗಾಲಕ್ಕೆ ರಾಜ್ಯ ತತ್ತರಿಸಿದೆ. ಕೇಂದ್ರ ಸರ್ಕಾರ ಕೂಡಲೇ ಅನುದಾನ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರವೇ 236 ತಾಲೂಕುಗಳ ಪೈಕಿ 223 ತಾಲೂಕುಗಳು ತೀವ್ರ ಬರಪೀಡಿತವೆಂದು ಘೋಷಿಸಿದೆ. ಬೆಳೆ ನಷ್ಟದಿಂದ ಪ್ರತಿಯೊಬ್ಬ ರೈತನಿಗೆ ಲಕ್ಷಾಂತರ ರುಪಾಯಿ ನಷ್ಟವಾಗಿದ್ದು, ಬಿತ್ತಿದ ಬೆಳೆ ಕೈಗೆ ಬಾರದೆ ರೈತ ಕಂಗಲಾಗಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಯಲ್ಲಿದ್ದಾರೆ. ರೈತರ ಹಿತ ಕಾಪಾಡಬೇಕಾದ ಸರ್ಕಾರ ರೈತರ ನೆರವಿಗೆ ಬಾರದೆ ರೈತರನ್ನು ಸಾವಿನ ದವಡಿಗೆ ತಳ್ಳುತ್ತಿದೆ. ಬರಪೀಡಿತ ಜನರ ಅಗತ್ಯಗಳನ್ನು ಪೂರೈಸಬೇಕಾಗಿದ್ದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅತೀವ ನಿರ್ಲಕ್ಷ್ಯ ವಹಿಸಿವೆ ಎಂದು ದೂರಿದರು.ಬರಗಾಲದ ಪರಿಹಾರಕ್ಕಾಗಿ ಕೇಂದ್ರದಿಂದ 18,177 ಕೋಟಿ ರು. ಒದಗಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಕೋರಿಕೆ ಸಲ್ಲಿಸಿ ಹಲವಾರು ನಿಯೋಗಗಳ ಮೂಲಕ ಒತ್ತಾಯಿಸಿದ್ದರೂ ಒಂದು ನಯಾ ಪೈಸೆ ಕೊಟ್ಟಿಲ್ಲ. ಬೇಸಿಗೆಯಲ್ಲಿ ನೀರು, ಮೇವು, ಆಹಾರ, ಉದ್ಯೋಗಕ್ಕೆ ಹಾಹಾಕಾರ ಇರುವಾಗ ಈ ದೇಶದ ರೈತರ ಕಾರ್ಮಿಕರ ಬಗ್ಗೆ ಚಿಂತಿಸದ ಸರ್ಕಾರ, ಒಬ್ಬರ ಮೇಲೊಬ್ಬರು ಕೆಸರು ಎರಚಾಟ ನಡೆಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಬರ ಪರಿಹಾರವನ್ನು ಒದಗಿಸಬೇಕು. ಒಂದು ಎಕರೆಗೆ ಬೆಳೆನಷ್ಟ ಪರಿಹಾರವಾಗಿ 1 ಲಕ್ಷ ನೀಡಬೇಕು. ಪ್ರತಿಯೊಬ್ಬ ಕೂಲಿ ಕಾರ್ಮಿಕನಿಗೆ 200 ದಿನ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೆಲಸ 600 ರು. ಗಳ ಕೂಲಿ ಕೊಡಬೇಕು. ಸರ್ಕಾರ ಜಾನುವಾರುಗಳಿಗೆ ಮೇವಿನ ಕೊರತೆ ಉಂಟಾಗದಂತೆ ಕ್ರಮ ವಹಿಸಬೇಕು. ಕೂಡಲೇ ಕೇಂದ್ರ ಸರ್ಕಾರವು ಎಲ್ಲ ರೈತರ, ಕೃಷಿ ಕೂಲಿಕಾರರ, ಗ್ರಾಮೀಣ ಮಹಿಳೆಯರ ಸಾಲ ಮನ್ನಾ ಹಾಗೂ ಬಡ್ಡಿ ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.