ಏ.3ರಂದು ಯದುವೀರ್‌ ನಾಮಪತ್ರ ಸಲ್ಲಿಕೆ: ನಾಪಂಡ ರವಿ ಕಾಳಪ್ಪ

KannadaprabhaNewsNetwork |  
Published : Mar 27, 2024, 01:03 AM IST
ಚಿತ್ರ : 26ಎಂಡಿಕೆ4 : ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ  | Kannada Prabha

ಸಾರಾಂಶ

ಮಡಿಕೇರಿ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ. ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಹಿತ ಪ್ರಮುಖರು ಪಾಲ್ಗೊಳ್ಳಲಿದ್ದಾರೆ. ಕೊಡಗು ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಏ.3 ರಂದು ನಾಮಪತ್ರ ಸಲ್ಲಿಸಲಿದ್ದು, ಕೊಡಗು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮೈಸೂರಿಗೆ ತೆರಳಲಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಮೈಸೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್ ಅವರು ಏ.3 ರಂದು ನಾಮಪತ್ರ ಸಲ್ಲಿಸಲಿದ್ದು, ಕೊಡಗು ಜಿಲ್ಲೆಯಿಂದ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಮೈಸೂರಿಗೆ ತೆರಳಲಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ತಿಳಿಸಿದ್ದಾರೆ.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಡಿಕೇರಿ ಕ್ರಿಸ್ಟಲ್ ಕೋರ್ಟ್ ಸಭಾಂಗಣದಲ್ಲಿ ಬುಧವಾರ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಲಿದೆ ಎಂದು ಮಾಹಿತಿ ನೀಡಿದರು.ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೊಡಗು ಉಸ್ತುವಾರಿ ಅಶ್ವತ್ಥ್ ನಾರಾಯಣ, ಅಭ್ಯರ್ಥಿ ಯದುವೀರ್, ಮಾಜಿ ಶಾಸಕ ರಾಮದಾಸ್, ಸಂಚಾಲಕ ರವಿ ಶಂಕರ್, ಸಂಸದ ಪ್ರತಾಪ್ ಸಿಂಹ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚು ರಂಜನ್, ಬಿಜೆಪಿಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಮಾಜಿ ಪ್ರತಿನಿಧಿಗಳು, ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನಾಲ್ಕು ಸಾವಿರಕ್ಕೂ ಅಧಿಕ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ವಿವರಿಸಿದರು.

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ಭಾರತೀಯ ಜನತಾ ಪಾರ್ಟಿಗೆ ಪ್ರತಿಷ್ಠೆಯ ಕಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದಾರೆ. ಅತ್ಯಧಿಕ ಮತಗಳ ಅಂತರದಿಂದ ಯದುವೀರ್ ಅವರನ್ನು ಗೆಲ್ಲಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಕ್ಕ ಉತ್ತರ ನೀಡಲು ಮುಂದಾಗಿದ್ದಾರೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯಗಳನ್ನು ಜನ ಮೆಚ್ಚಿದ್ದಾರೆ. ಯದುವೀರ್ ಅವರು ರಾಜ ವಂಶಸ್ಥ, ಯಾರ ಕೈಗೂ ಸಿಗುವುದಿಲ್ಲ ಎಂದು ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ ಯದುವೀರ್ ಅವರು ಅತ್ಯಂತ ಸರಳ ಜೀವಿ ಮತ್ತು ಅಭಿವೃದ್ಧಿಪರ ಚಿಂತನೆ ಇರುವ ವ್ಯಕ್ತಿ ಎನ್ನುವುದು ಈಗಾಗಲೇ ಸಾಬೀತಾಗಿದೆ ಎಂದು ಹೇಳಿದರು.

ಚುನಾವಣೆಯಲ್ಲಿ ಸ್ಪರ್ಧೆ ಸಹಜವಾಗಿರುತ್ತದೆ, ಪ್ರತಿಸ್ಪರ್ಧಿಯನ್ನು ನಿರ್ಲಕ್ಷಿಸಿ ನಾವು ಮೈಮರೆಯುವುದಿಲ್ಲ, ಯದುವೀರ್ ಅವರ ಗೆಲುವಿಗಾಗಿ ನಿರಂತರ ಶ್ರಮ ವಹಿಸುತ್ತೇವೆ. ಈಗಾಗಲೇ ಬೂತ್ ಮಟ್ಟದಿಂದ ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ವರೆಗೂ ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಕಾಂಗ್ರೆಸ್‌ ಅಭಿವೃದ್ಧಿ ಮಾಡಿಲ್ಲ:

ಕಳೆದ 10 ತಿಂಗಳ ಅಭಿವೃದ್ಧಿ ಕಾರ್ಯಗಳೇ ಲೋಕಸಭಾ ಚುನಾವಣೆಯಲ್ಲಿ ತಮಗೆ ಶ್ರೀರಕ್ಷೆಯಾಗಲಿದೆ ಎಂದು ಕಾಂಗ್ರೆಸಿಗರು ಹೇಳಿಕೊಳ್ಳುತ್ತಿದ್ದಾರೆ. ಆದರೆ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ ಮತ್ತು ಈ ಹಿಂದಿನ ಸರ್ಕಾರದ ಅನುದಾನದ ಕಾಮಗಾರಿಗಳು ಎನ್ನುವುದು ಜನರಿಗೆ ಈಗಾಗಲೇ ಅರ್ಥವಾಗಿದೆ. ನೂತನ ಶಾಸಕರು ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದಿರುವುದು ಮತ್ತು ಈ ಹಿಂದಿನ ಬಿಜೆಪಿ ಶಾಸಕರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿಗೆ ಶ್ರೀರಕ್ಷೆಯಾಗಲಿದೆ ಎಂದು ರವಿ ಕಾಳಪ್ಪ ತಿಳಿಸಿದರು.

ಮುಖ್ಯಮಂತ್ರಿಗೆ ಆತಂಕ:

ರಾಜ್ಯದಲ್ಲಿ ಕಡಿಮೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲವು ಸಾಧಿಸಿದರೆ ಸರ್ಕಾರ ಪತನವಾಗುತ್ತದೆ ಎನ್ನುವ ಆತಂಕದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದಾರೆ. ಇದೇ ಕಾರಣಕ್ಕೆ ಮೈಸೂರು- ಕೊಡಗು ಕ್ಷೇತ್ರ ಸೇರಿದಂತೆ 20 ಕ್ಕೂ ಹೆಚ್ಚು ಕ್ಷೇತ್ರಗಳನ್ನು ಗೆಲ್ಲುವ ಪ್ರಯತ್ನದಲ್ಲಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಈ ಪ್ರಯತ್ನ ಫಲ ನೀಡುವುದಿಲ್ಲ ಎಂದು ಭವಿಷ್ಯ ನುಡಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್ ಜೈನಿ, ವಿ.ಕೆ.ಲೋಕೇಶ್, ಜಿಲ್ಲಾ ವಕ್ತಾರ ಅರುಣ್ ಕುಮಾರ್ ಹಾಗೂ ನಗರಾಧ್ಯಕ್ಷ ಉಮೇಶ್ ಸುಬ್ರಮಣಿ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''