ಅಂಶಿ ಪ್ರಸನ್ನ ಕುಮಾರ್
ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಮತ್ತೆ ಕಮಲ ಅರಳಿದೆ. ಬಿಜೆಪಿ- ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ. ಲಕ್ಷ್ಮಣ ಹೀನಾಯವಾಗಿ ಸೋತಿದ್ದಾರೆ.
ಇವತ್ತು ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಜಯಂತಿ. ಅದೇ ದಿನ ಯದುವೀರ್ ಅವರು ಲೋಕಸಭೆಗೆ ಆಯ್ಕೆಯಾಗುವ ಮೂಲಕ ಭರ್ಜರಿ ಉಡುಗೊರೆ ಸಿಕ್ಕಿದೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರತಾಪ್ ಸಿಂಹ ಅವರು ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟದ ಸಿ.ಎಚ್. ವಿಜಯಶಂಕರ್ ಅವರನ್ನು ಸೋಲಿಸಿದ್ದರು. ಕಳೆದ ಎರಡು ಬಾರಿಯೂ ಜೆಡಿಎಸ್ನ ಪರೋಕ್ಷ ಬೆಂಬಲದಿಂದ ಬಿಜೆಪಿಯ ಪ್ರತಾಪ್ ಸಿಂಹ ಗೆದ್ದಿದ್ದರು. ಈ ಬಾರಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರಿಂದ ಲಾಭ ಬಿಜೆಪಿಗೆ ನೇರವಾಗಿ ಆಗಿದೆ.
ಮೈಸೂರು ರಾಜವಂಶಸ್ಥರಾಗಿದ್ದ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರು ನಾಲ್ಕು ಬಾರಿ ಮೈಸೂರು ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. ಎರಡು ಬಾರಿ ಸೋತಿದ್ದರು. ಅವರ ನಿಧನಾನಂತರ ಅವರ ಪತ್ನಿ ಪ್ರಮೋದಾದೇವಿ ಒಡೆಯರ್ ಅವರು ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ದತ್ತು ತೆಗೆದುಕೊಂಡಿದ್ದರು. ಇದೀಗ ಯದುವೀರ್ ಅವರು ಒಡೆಯರ್ ಅವರಂತೆ ಮೊದಲ ಯತ್ನದಲ್ಲಿಯೇ ಲೋಕಸಭೆ ಪ್ರವೇಶಿಸಿದ್ದಾರೆ.
ಮೈಸೂರು ಒಕ್ಕಲಿಗ ಪ್ರಾಬಲ್ಯದ ಕ್ಷೇತ್ರ. ನಂತರದ ಸ್ಥಾನದಲ್ಲಿ ಇತರೆ ಹಿಂದುಳಿದವರು, ಮುಸ್ಲಿಮರು, ವೀರಶೈವ- ಲಿಂಗಾಯತರು, ಕುರುಬರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಬ್ರಾಹ್ಮಣರು ಬರುತ್ತಾರೆ.
ಈ ಬಾರಿ ಮಂಡ್ಯದಲ್ಲಿ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಕಣದಲ್ಲಿದ್ದುದು, ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಜಂಟಿ ಸಾರ್ವಜನಿಕ ಸಭೆ ನಡೆಸಿದ್ದು, ಜೆಡಿಎಸ್ ಕೋರ್ ಕಮಿಟಿಯ ಅಧ್ಯಕ್ಷರೂ ಆದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡರು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ, ಯದುವೀರ್ ಪರ ಪ್ರಚಾರ ಮಾಡಿದ್ದು ಅನುಕೂಲವಾಗಿದೆ.