ಉಡುಪಿ: ನಗರದ ಹಾಜಿ ಅಬ್ದುಲ್ಲಾ ಸ್ಮಾರಕ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಅಗತ್ಯವಿರುವ ವೈದ್ಯಕೀಯ ಸಲಕರಣೆಗಳು, ಸಿಬ್ಬಂದಿಗಳ ನೇಮಕಾತಿ ಸೇರಿದಂತೆ ಸಮಗ್ರ ಅಭಿವೃದ್ಧಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.ಆಸ್ಪತ್ರೆಯಲ್ಲಿ ನಿರ್ವಹಣೆಯ ಕೊರತೆ ಇರುವ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಅವರು ಬುಧವಾರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ರೋಗಿಯ ಸಂಬಂಧಿಕರೊಬ್ಬರು ಅಧಿಕಾರಿಗಳ ಸಮ್ಮುಖದಲ್ಲೇ ಶಾಸಕರ ಗಮನಕ್ಕೆ ತಂದರು. ಆಸ್ಪತ್ರೆಯಲ್ಲಿ ಇಲಿ, ಜಿರಳೆ, ಸೊಳ್ಳೆ ಕಾಟದಿಂದ ರೋಗ ಹರಡುವ ಭೀತಿ ಎದುರಾಗಿದೆ ಎಂದವರು ದೂರಿದರು.ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, ತಾಯಿ ಮತ್ತು ಮಕ್ಕಳಿಗೆ ಆರೋಗ್ಯಕರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಪರಿಣಿತ ಇಂಜಿನಿಯರ್ರನ್ನು ಕರೆಸಿ ಆಸ್ಪತ್ರೆ ಕಟ್ಟಡದ ವಿನ್ಯಾಸ ಬದಲಾವಣೆಗೆ ನೀಲಾನಕ್ಷೆ ಸಿದ್ಧಪಡಿಸಲಾಗುವುದು ಎಂದು ತಿಳಿಸಿದರು.ಉಡುಪಿ ಹಾಗೂ ಸುತ್ತಮುತ್ತಲಿನ ಬಡಜನರು ಈ ಆಸ್ಪತ್ರೆಯನ್ನೇ ಅವಲಂಬಿಸಿದ್ದು, ಇಲ್ಲಿನ ಸಮಸ್ಯೆಗಳಿಂದ ಆರೋಗ್ಯ ಸೇವೆ ಪಡೆಯಲು ತೊಂದರೆಯಾಗುತ್ತಿದೆ. ರೋಗಿಗಳಿಗೆ ಗುಣಮಟ್ಟದ ಹಾಗೂ ನುರಿತ ಸೇವೆ ಸಮರ್ಪಕವಾಗಿ ದೊರೆಯುತ್ತಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.