ಹೊಸಪೇಟೆ: ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯ ಮುಖ್ಯವಾದುದು, ಯೋಗ ಮತ್ತು ಧ್ಯಾನದಿಂದ ಎಲ್ಲರಿಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲಿದೆ ಎಂದು ಸ್ಥಳೀಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಎನ್. ಸುಬ್ರಮಣ್ಯ ಹೇಳಿದರು.ನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಆವರಣದಲ್ಲಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ತಾಲೂಕು ಕಾನೂನು ಸೇವಾ ಸಮಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಕಚೇರಿ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮತ್ತು ಟಿಎಂಎಇಎಸ್ ನರ್ಸಿಂಗ್ ಆಫ್ ಸ್ಕೂಲ್ ಸಹಭಾಗಿತ್ವದಲ್ಲಿ ಬುಧವಾರ ಏರ್ಪಡಿಸಿದ್ದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಮತ್ತು ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಿವಿಲ್ ನ್ಯಾಯಾಧೀಶ ಪ್ರಶಾಂತ್ ನಾಗಲಾಪುರ ಮಾತನಾಡಿ, ಅಂತಾರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಹಿನ್ನೆಲೆಯಲ್ಲಿ ಸಾಮಾಜಿಕವಾಗಿ ಹೆಣ್ಣುಮಕ್ಕಳನ್ನು ಅತ್ಯಂತ ಗೌರವಯುತವಾಗಿ ನಡೆಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ದೌರ್ಜನ್ಯದಂತಹ ಪ್ರಕರಣಗಳನ್ನು ನಿಯಂತ್ರಿಸಲು ಇಲಾಖೆಗಳೊಂದಿಗೆ ಸಾರ್ವಜನಿಕರು ಕೈಜೋಡಿಸಬೇಕು. ಗ್ರಾಮೀಣ ಭಾಗದ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದು, ಶಿಕ್ಷಣ ಮಹತ್ವ ತಿಳಿಸಬೇಕಿದೆ. ಬಾಲ್ಯವಿವಾಹ ಸೇರಿ ಮಹಿಳೆಯರ ಮೇಲಿನ ದೌರ್ಜನ್ಯ ಕಂಡರೆ ಪೊಲೀಸ್ ಇಲಾಖೆಗೆ ದೂರು ಸಲ್ಲಿಸಬೇಕು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಲ್.ಆರ್. ಶಂಕರ್ ನಾಯ್ಕ ಮಾತನಾಡಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ರತಿ ತಿಂಗಳ ಮಂಗಳವಾರದಂದು ಮನೋಚೈತನ್ಯ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತದೆ. ಆಪ್ತ ಸಮಾಲೋಚನೆ ಪಡೆಯಲು ಉಚಿತ ಸಹಾಯವಾಣಿ 14416 ಸಂಖ್ಯೆಗೆ ಕರೆ ಮಾಡಬಹುದು ಎಂದರು.ನಗರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ರಾಜಶೇಖರ ಮಾತನಾಡಿದರು.