ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣಪರಿಸರವು ಉತ್ತಮವಾಗಿದ್ದಲ್ಲಿ ಮಾತ್ರ ಸಕಲ ಜೀವ ಸಂಕುಲವು ಭೂಮಿಯ ಮೇಲೆ ಸುರಕ್ಷಿತವಾಗಿ ಬದುಕುಳಿಯಲು ಸಾಧ್ಯ ಎಂದು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್. ಕೆ. ಯೋಗೇಶ್ ಹೇಳಿದರು.ತಾಲೂಕಿನ ದಿಡಗ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಹಸಿರೇ ಉಸಿರು ಕಾರ್ಯಕ್ರಮದಲ್ಲಿ ಮಾತನಾಡಿ, ಪರಿಸರವನ್ನು ಸಂರಕ್ಷಣೆ ಮಾಡುವುದು ನಮ್ಮೆಲ್ಲರ ಆಧ್ಯ ಕರ್ತವ್ಯ ಎಂದರು. ರಸ್ತೆ ಅಗಲೀಕರಣ, ಕೃಷಿ, ರೆಸಾರ್ಟ್ ಉದ್ಯಮ ಹಾಗೂ ನಗರೀಕರಣ ಸೇರಿದಂತೆ ವಿವಿಧ ಉದ್ದೇಶಗಳಿಂದಾಗಿ ದಿನದಿಂದ ದಿನಕ್ಕೆ ಅರಣ್ಯ ಪ್ರದೇಶ ಕಡಿಮೆಯಾಗುತ್ತಿದ್ದು ಪರಿಸರವು ಸಮತೋಲನ ಕಳೆದುಕೊಳ್ಳುತ್ತಿದೆ. ಇದರಿಂದ ಪ್ರಕೃತಿಯಲ್ಲಿನ ವಿಕೋಪಗಳು ಅಪಾಯಕಾರಿ ಪರಿಣಾಮ ಬೀರುತ್ತಿರುವುದನ್ನು ಕಾಣಬಹುದು ಎಂದು ಆತಂಕ ವ್ಯಕ್ತಪಡಿಸಿದ್ದರು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕೆ.ಎಸ್.ಪ್ರಕಾಶ್ ಮಾತನಾಡಿ, ಭೂಮಿಯ ಮೇಲೆ ಅತಿ ಬುದ್ಧಿವಂತ ಪ್ರಾಣಿ ಎಂದರೆ ಮನುಷ್ಯ. ಆದರೆ ಬುದ್ಧಿವಂತ ಜೀವಿ ಮನು?ನು ತನ್ನ ಸ್ವಾರ್ಥದ ಬದುಕಿಗೆ ದುರಾಸೆಯಿಂದ ಪ್ರಕೃತಿಯ ಮೇಲೆ ಮನಬಂದಂತೆ ದಾಳಿ ಮಾಡುತ್ತಿದ್ದಾನೆ. ಇದರ ಪರಿಣಾಮವಾಗಿ ಮುಂದೊಂದು ದಿನ ಸಾಕಷ್ಟು ಅಪಾಯಗಳನ್ನು ಎದುರಿಸಬೇಕಾಗುತ್ತದೆ ಎಂದರು. ಹಳ್ಳಕೊಳ್ಳದ ಪ್ರದೇಶ, ಗುಂಡುದೋಪು, ಶಾಲೆ ಹಾಗೂ ದೇಗುಲದ ಆವರಣ ಸೇರಿದಂತೆ ಗ್ರಾಮದ ರಸ್ತೆ ಬದಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ಪರಿಸರವನ್ನು ಅಭಿವೃದ್ಧಿಗೊಳಿಸುವಲ್ಲಿ ಪ್ರತಿಯೊಬ್ಬರು ಮುಂದಾಗಬೇಕು. ಇದರಿಂದ ಮುಂದಿನ ಪೀಳಿಗೆ ಉತ್ತಮ ಪರಿಸರವನ್ನು ಕೊಡುಗೆಯಾಗಿ ನೀಡಿದಂತಾಗುತ್ತದೆ ಎಂದು ಸಲಹೆ ನೀಡಿದರು.ಶಾಲೆಯ ಆವರಣದಲ್ಲಿ ನೂರಕ್ಕೂ ಹೆಚ್ಚು ಸಸಿಗಳನ್ನು ನೆಟ್ಟು ನೀರುಣಿಸಲಾಯಿತು. ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ಮಧು ಗೌಡ, ಆರ್. ಕೆ ಗ್ರಾಮೀಣಾಭಿವೃದ್ಧಿ ಸೇವಾಸಂಸ್ಥೆಯ ಮುಖ್ಯಸ್ಥ ಮೋಹನ್ ಕುಮಾರ್, ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಿ. ಆರ್. ಮಂಜುನಾಥ್, ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕ ನೀಲಿಸಿದ್ದು, ಶಿಕ್ಷಕರಿಂದ ಹಾಗೂ ವಿದ್ಯಾರ್ಥಿಗಳು ಇದ್ದರು.