ಉಡುಪಿ: ನಗರದ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ಯುವಕನ ವಾರಸುದಾರರನ್ನು ಪತ್ತೆಹಚ್ಚಿ ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಕೆಲವು ತಿಂಗಳ ಹಿಂದೆ ರೈಲ್ವೇ ರಕ್ಷಣಾ ಪಡೆಯ ಸಿಬ್ಬಂದಿ ವಿಶ್ರಾಮ್ ದೇಸಾಯಿ ಅವರು ಉಡುಪಿ ರೈಲ್ವೆ ನಿಲ್ದಾಣದ ಪ್ಲಾಟ್ಫಾರ್ಮ್ನಲ್ಲಿ ಗಸ್ತು ಕರ್ತವ್ಯದಲ್ಲಿದ್ದ ವೇಳೆ ಅಸಹಾಯಕ ಸ್ಥಿತಿಯಲ್ಲಿದ್ದ ಯುವಕನನ್ನು ಗಮನಿಸಿ, ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ನೆರವು ಪಡೆದು, ಮಾನಸಿಕವಾಗಿ ನೊಂದಿದ್ದ ಯುವಕನನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ವ್ಯವಸ್ಥೆ ಮಾಡಿದ್ದರು.
ಜಿಲ್ಲಾಸ್ಪತ್ರೆಯಲ್ಲಿ ವೈದ್ಯರಾದ ಡಾ. ವಾಸುದೇವ್ ಅವರ ವಿಶೇಷ ಕಾಳಜಿ ಹಾಗೂ ಸಮರ್ಪಕ ಚಿಕಿತ್ಸೆಯಿಂದ ಯುವಕನ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿತ್ತು. ಯುವಕನನ್ನು ಆಂಧ್ರ ಪ್ರದೇಶ ಮೂಲದ ದಿಲೀಪ್ ಎಂದು ಪತ್ತೆ ಮಾಡಲಾಯಿತು.ಆತನ ಕುಟುಂಬದವರ ಪತ್ತೆಗೆ ಸಮಾಜಸೇವಕ ನಿತ್ಯಾನಂದ ಒಳಕಾಡು ಮತ್ತು ಆಸ್ಪತ್ರೆಯ ಸಿಬ್ಬಂದಿ ಸುರೇಶ್ ನಾವೂರು ನಿರಂತರ ಪ್ರಯತ್ನ ನಡೆಸಿದರು. ಫಲವಾಗಿ ಯುವಕನ ಕುಟುಂಬದವರನ್ನು ಸಂಪರ್ಕಿಸಲು ಸಾಧ್ಯವಾಗಿದೆ.ದಿಲೀಪ್ ಒಂಬತ್ತು ತಿಂಗಳ ಹಿಂದೆ ನಾಪತ್ತೆಯಾಗಿದ್ದು, ಅವರ ಪೋಷಕರು ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದರು. ಇದೀಗ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕನೇ ತಮ್ಮ ಮಗ ಎಂಬುದು ದೃಢಪಟ್ಟ ಹಿನ್ನೆಲೆಯಲ್ಲಿ ತಾಯಿ ಹಾಗೂ ಸಹೋದರ ಉಡುಪಿಗೆ ಆಗಮಿಸಿ, ದಿಲೀಪ್ ಅವರನ್ನು ಸ್ವಗ್ರಾಮಕ್ಕೆ ಕರೆದೊಯ್ದಿದ್ದಾರೆ.