ಯುವಜನರೇ ದೇಶದ ಆಸ್ತಿ, ಶಕ್ತಿ: ರೇಣುಕಾಚಾರ್ಯ

KannadaprabhaNewsNetwork | Published : May 13, 2025 11:58 PM
ಕ್ರೀಡೆ ಎಂದರೆ ಕೇವಲ ದೈಹಿಕ ಶಕ್ತಿ ಪ್ರದರ್ಶಿಸುವುದಲ್ಲ. ಇದರ ಜೊತೆಗೆ ಸಹೋದರತ್ವ, ಸಹಬಾಳ್ವೆ, ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳುವುದಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
Follow Us

- ಮೃತ್ಯುಂಜಯ ಕಾಲೇಜು ಕ್ರೀಡಾಂಗಣದಲ್ಲಿ ಮಹಿಳಾ ಕ್ರೀಡಾಕೂಟಕ್ಕೆ ಚಾಲನೆ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಕ್ರೀಡೆ ಎಂದರೆ ಕೇವಲ ದೈಹಿಕ ಶಕ್ತಿ ಪ್ರದರ್ಶಿಸುವುದಲ್ಲ. ಇದರ ಜೊತೆಗೆ ಸಹೋದರತ್ವ, ಸಹಬಾಳ್ವೆ, ನಾಯಕತ್ವ ಗುಣಗಳನ್ನು ಅಳವಡಿಸಿಕೊಳ್ಳುವುದಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಪಟ್ಟಣದ ಶ್ರೀ ಮೃತ್ಯುಂಜಯ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಸೋಮವಾರ ಕಾಲೇಜಿನ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ದಾವಣಗೆರೆ ವಿಶ್ವವಿದ್ಯಾಲಯ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಯುವಪೀಳಿಗೆಯ ದೈಹಿಕ ಮತ್ತು ಮಾನಸಿಕ ಆರೋಗ್ಯ ಸಂರಕ್ಷಣೆಗೆ ಕ್ರೀಡೆಗಳು ಅಗತ್ಯವಾಗಿ ಬೇಕು. ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಕ್ರೀಡಾ ಚಟುವಟಿಕೆ ಹಾಗೂ ಅಭ್ಯಾಸದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕು. ದುಶ್ಟಟಗಳಿಂದ ದೂರವಿರಬೇಕು. ಯುವಜನರೇ ದೇಶದ ಆಸ್ತಿ ಮತ್ತು ಶಕ್ತಿಯಾಗಿದ್ದಾರೆ ಎಂದು ಹೇಳಿದರು.

ಕಾಲೇಜಿನ ಆಡಳಿತ ಮಂಡಳಿ ಕಾರ್ಯದರ್ಶಿ ಚನ್ನಯ್ಯ ಬೆನ್ನೂರುಮಠ್ ಮಾತನಾಡಿ, ಪ್ರಸ್ತುತ ಹೊನ್ನಾಳಿಯ ಹಿರೇಕಲ್ಮಠದ ಗುರುಗಳಾದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಕೀಡಾಪ್ರೇಮಿಗಳಾಗಿದ್ದಾರೆ. ಯಾವುದೇ ಕ್ರೀಡಾಕೂಟಗಳು ನಡೆಯಲಿ, ಅವುಗಳಿಗೆ ಶ್ರೀಮಠ ವತಿಯಿಂದ ಎಲ್ಲ ರೀತಿಯ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ.ಪ್ರವೀಣ ದೊಡ್ಡಗೌಡ ಮಾತನಾಡಿ, ದಾವಣಗೆರೆ ಜಿಲ್ಲೆಯ 14 ಕಾಲೇಜುಗಳಿಂದ ಸುಮಾರು 300ಕ್ಕೂ ಹೆಚ್ಚು ಮಹಿಳಾ ಕ್ರೀಡಾಪಟುಗಳು ಭಾಗವಹಿಸಿದ್ದರು. ಈ ಕ್ರೀಡಾಕೂಟದಲ್ಲಿ ವಾಲಿಬಾಲ್, ಟಿನಿಕಾಯ್ಟ್‌, ಥ್ರೋಬಾಲ್, ಕಬಡ್ಡಿ, ಖೋ ಖೋ, ಬಾಲ್ ಬ್ಯಾಡ್ಮಿಂಟನ್ ಹೀಗೆ ಒಟ್ಟು 6 ಕ್ರೀಡೆಗಳು ನಡೆಯಲಿವೆ ಎಂದು ಮಾಹಿತಿ ನೀಡಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಹಾಗೂ ಕ್ರೀಡಾಕೂಟದ ಸಂಘಟನಾ ಕಾರ್ಯದರ್ಶಿ ಪ್ರಕಾಶ್ ಎಲ್. ನರಗಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಚಿತ್ರದುರ್ಗ ಸರ್ಕಾರಿ ವಿಜ್ಞಾನ ಮಹಾವಿದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಘವೇಂದ್ರ ಕೆ., ದೈಹಿಕ ಶಿಕ್ಷಣ ನಿರ್ದೇಶಕರ ಸಂಘದ ಅಧ್ಯಕ್ಷ ಡಾ.ಶಂಕರಪ್ಪ, ಶ್ರೀ ಚನ್ನಪ್ಪಸ್ವಾಮಿ ವಿದ್ಯಾಪೀಠದ ನಿರ್ದೇಶಕ ಎಂ.ಪಿ.ಎಂ. ಚನ್ನಬಸಯ್ಯ, ಶಿವಮೊಗ್ಗದ ಪತ್ರಕರ್ತ ಹೊನ್ನಾಳಿ ಚಂದ್ರಶೇಖರ, ಉಪನ್ಯಾಸಕ ನಾಗೇಶ ಹಾಗೂ ಕಾಲೇಜಿನ ಸಿಬ್ಬಂದಿ ಇದ್ದರು.

- - -

-12ಎಚ್.ಎಲ್.ಐ1.ಜೆಪಿಜಿ:

ದಾವಿವಿ ಮಟ್ಟದ ಮಹಿಳಾ ಕ್ರೀಡಾಕೂಟವನ್ನು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಗಿಡಕ್ಕೆ ನೀರೆರೆಯುವ ಮೂಲಕ ಉದ್ಘಾಟಿಸಿದರು.