ಕನ್ನಡಪ್ರಭ ವಾರ್ತೆ ಹೊಸಪೇಟೆ
ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಭೀಮಾನಾಯ್ಕ ಮಾತನಾಡಿ, ಕೇಂದ್ರ ಸರ್ಕಾರದ ಬೆಲೆ ಏರಿಕೆ ಮಧ್ಯೆ ರಾಜ್ಯದಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ ಮಾಡುತ್ತಿರುವುದು ಹಾಸ್ಯಾಸ್ಪಾದ. ಕೇಂದ್ರ ಸರ್ಕಾರದ ಆಡಳಿತ ವೈಫಲ್ಯ ಹಾಗೂ ಆರ್ಥಿಕ ನೀತಿಯಿಂದ ಆರ್ಥಿಕ ವ್ಯವಸ್ಥೆ ನಿಯಂತ್ರಣ ತಪ್ಪಿದೆ. ಇದರಿಂದ ಜನಸಾಮಾನ್ಯರ ಬದುಕು ತತ್ತರಿಸಿದೆ. ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಬಂದ ನಂತರ ಜನರ ಹಣವನ್ನು ಬೇರೆ ಬೇರೆ ರೂಪದಲ್ಲಿ ಲೂಟಿ ಮಾಡಲಾಗುತ್ತಿದೆ ಎಂದು ಆರೋಪಿಸಿದರು.
ಈ ದೇಶದ ಜನರ ಹಿತ ಕಾಪಾಡಬೇಕಾದ ಪ್ರಧಾನಿ ನರೇಂದ್ರ ಮೋದಿ ಹಾಗು ಕೇಂದ್ರದ ಗೃಹಮಂತ್ರಿ ಅಮಿತ್ ಶಾ ಅವರು ಅಂಬಾನಿ, ಅದಾನಿ ಅವರ ಹಿತ ಕಾಪಾಡುತ್ತಿದ್ದಾರೆ. ಕಾರ್ಪೋರೇಟ್ ಕಂಪನಿಗಳನ್ನು ಉದ್ಧಾರ ಮಾಡುತ್ತಿದ್ದಾರೆ. ರೈತರ ಆದಾಯ ದುಪ್ಪಟ್ಟು ಮಾಡುತ್ತೇವೆ ಎಂದು ಅಧಿಕಾರಕ್ಕೆ ಬಂದು, ಈಗ ರೈತರ ಬದುಕು ಮೂರಾಬಟ್ಟೆ ಮಾಡಿದ್ದಾರೆ. ಕಪ್ಪು ಹಣ ತರುತ್ತೇವೆ ಎಂದು ಹೇಳಿದವರು ತರಲೇ ಇಲ್ಲ. ಚುನಾವಣಾ ಬಾಂಡ್ ಮೂಲಕ ದೇಶದ ಜನರನ್ನು ಮೋಸ ಮಾಡಿದ್ದಾರೆ. ಸಂಸತ್ನಲ್ಲಿ ವಿರೋಧಪಕ್ಷದ ನಾಯಕರನ್ನು ಮಾತನಾಡಲು ಬಿಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಕೇಂದ್ರ ಸರ್ಕಾರದ ಆರ್ಥಿಕ ನೀತಿಯಿಂದ ಸಣ್ಣ ಸಣ್ಣ ಕೈಗಾರಿಕೆಗಳು ನಾಶವಾಗಿ ಸುಮಾರು 11 ಕೋಟಿ ಉದ್ಯೋಗ ಕಳೆದುಕೊಂಡಿದ್ದಾರೆ. ಈ ಮೂಲಕ ಜನರ ಆದಾಯವನ್ನು ಕಸಿದುಕೊಂಡಿದೆ ಎಂದು ದೂರಿದರು.
ಈ ಸಂದರ್ಭ ಪ್ರತಿಭಟನಾನಿರತರು ತಳ್ಳು ಗಾಡಿಯ ಮೇಲೆ ಗ್ಯಾಸ್ ಸಿಲಿಂಡರ್ ಅನ್ನು ಪ್ರದರ್ಶಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಕಲ್ಲಹಳ್ಳಿ ಗ್ರಾಪಂ ಅಧ್ಯಕ್ಷೆ ಶಕುಂತಲಾ, ಮುಖಂಡರಾದ ಭರತ್ ಕುಮಾರ, ಷಣ್ಮುಖ ನಾಯಕ, ಜಿಶಾನ್ ಹ್ಯಾರಿಸ್, ಹಾರೂನ್ ಶೇಕ್, ಪ್ರದೀಪ್ ನಾಯ್ಕ, ಬಿ.ಗಣೇಶ್ ಮತ್ತಿತರರಿದ್ದರು.