ಮಾಜಿ ಪ್ರಧಾನಿ ಇಂದಿರಾಗಾಂಧಿ ಬಗ್ಗೆ ಹಗುರ ಹೇಳಿಕೆ । ಬಿಜೆಪಿ ನಾಯಕರ ವಿರುದ್ಧ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ,
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಭಾರತ ದೇಶದಲ್ಲಿ ಸುಧೀರ್ಘ ಆಡಳಿತ ನಡೆಸಿದ ಉಕ್ಕಿನ ಮಹಿಳೆ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಬಗ್ಗೆ ಹಗುರವಾಗಿ ಮಾತನಾಡಿರುವ ಬಿಜೆಪಿ ಮುಖಂಡರ ನಡೆಯನ್ನು ಖಂಡಿಸಿ ಶನಿವಾರ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಸಮಿತಿ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಸಮಾವೇಶಗೊಂಡ ಪ್ರತಿಭಟನಾಕಾರರು ಕೇಂದ್ರ ಸರ್ಕಾರ ಮತ್ತು ಬಿಜೆಪಿ ಮುಖಂಡರ ನಡೆ ಖಂಡಿಸಿ ಘೋಷಣೆ ಹಾಕಿದರು. ಹಿಟ್ಲರ್ ಎಂದು ಇಂದಿರಾಗಾಂಧಿಯವರನ್ನು ಬಿಜೆಪಿ ಸಾಮಾಜಿಕ ಜಾಲತಾಣದಲ್ಲಿ ಅವಮಾನಿಸಿರುವುದನ್ನು ಖಂಡಿಸಿದರು.ಇದೇ ಸಂದರ್ಭದಲ್ಲಿ ಮಾತನಾಡಿದ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ. ಮಂಜೇಗೌಡ, ದೇಶದ ಅಭಿವೃದ್ಧಿಗೆ ಇಂದಿರಾಗಾಂಧಿಯವರು ಪ್ರಧಾನಿಯಾಗಿದ್ದಾಗ 20 ಅಂಶಗಳ ಕಾರ್ಯಕ್ರಮಗಳನ್ನು ಜಾರಿಗೆ ತಂದು ದೇಶದ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದರು. ಅವರ ಬಗ್ಗೆ ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರ ಅವಹೇಳನವಾಗಿ ಮಾತನಾಡಿದ್ದಾರೆ ಎಂದರು.ಬ್ರಿಟೀಷ್ ಆಡಳಿತದಿಂದ ಖಾಲಿ ಖಜಾನೆಯಾಗಿದ್ದ ಭಾರತ ದೇಶದಲ್ಲಿ ಸರ್ವರಿಗೂ ಸಮಾನತೆ ತಂದುಕೊಟ್ಟ ಧೀಮಂತ ನಾಯಕಿಯಾಗಿದ್ದಾರೆ. ಇಂತಹವರ ಬಗ್ಗೆ ಕ್ಷುಲ್ಲಕ ರಾಜಕೀಯಕ್ಕಾಗಿ ಅವಹೇಳನ ಮಾಡಿರುವುದನ್ನು ಖಂಡನೀಯ ಎಂದು ಹೇಳಿದರು.
ಬಿಜೆಪಿ ಸೋಲಿನ ಭೀತಿಯಿಂದ ಹತಾಶೆಗೊಂಡು ಸಿ.ಟಿ. ರವಿ ಅವರು ಮನಬಂದಂತೆ ಮಾತನಾಡುತ್ತಿದ್ದಾರೆ, ಇಂದಿರಾ ಗಾಂಧಿ, ಸೋನಿಯಾಗಾಂಧಿ, ರಾಜೀವ್ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ಗಾಂಧಿ ಇವರನ್ನು ಕೀಳಾಗಿ ಕಾಣುವ ಮೂಲಕ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದ್ದಾರೆಂದು ದೂಷಿಸಿದರು.ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಇಂದಿರಾಗಾಂಧಿ, ರಾಜೀವ್ ಗಾಂಧಿಯವರ ದೇಶಪ್ರೇಮವನ್ನು ಬಿಜೆಪಿ ಮುಖಂಡರಿಗೆ ಸಹಿಸಿಕೊಳ್ಳಲಾಗದೆ ಅವಹೇಳನಕಾರಿ ಹೇಳಿಕೆಯಲ್ಲಿ ತಲ್ಲೀನರಾಗಿದ್ದಾರೆಂದು ಟೀಕಿಸಿದ ಅವರು, ದೇಶಕ್ಕೆ ನಿಮ್ಮ ಕೊಡುಗೆ ಏನು ಎಂದು ಪ್ರಶ್ನಿಸಿದರು.ಸಿ.ಟಿ. ರವಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷ ಹಾಗೂ ನಾಯಕರ ಬಗ್ಗೆ ಅವಾಚ್ಯವಾಗಿ ಮಾತನಾಡಿದರೆ ಅವರ ಎಲ್ಲಾ ಕಾರ್ಯಕ್ರಮಗಳಿಗೆ ಕಪ್ಪು ಬಾವುಟ ಪ್ರದರ್ಶಿಸುವುದಾಗಿ ಎಚ್ಚರಿಸಿದರು.ಕಾಂಗ್ರೆಸ್ ಪಕ್ಷ ಸಂವಿಧಾನ ಶಿಲ್ಪಿ ಡಾ.ಬಿ.ಆರ್ಅಂಬೇಡ್ಕರ್ ಹಾಕಿಕೊಟ್ಟಂತ ಸಂವಿಧಾನದ ಆಶಯದಂತೆ ಸರ್ವರಿಗೂ ಸಮ ಬಾಳು, ಸರ್ವರಿಗೂ ಸಮಪಾಲು ಎಂಬಂತೆ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಮೂರು ಅಂಗಗಳಲ್ಲಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸುತ್ತೇವೆ ಎಂಬ ಹೇಳಿಕೆಯಿಂದ ಚುನಾವಣೆ ಸಂದರ್ಭದಲ್ಲಿ ಜನರಿಂದ ತಿರಸ್ಕಾರಗೊಂಡಿರುವ ಸಿ.ಟಿ. ರವಿ ಸಂವಿಧಾನದ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ. ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಜಾತಿ ಜಾತಿಗಳ ಮಧ್ಯೆ ವಿಷ ಬೀಜ ಬಿತ್ತಿ ಅಧಿಕಾರಕ್ಕಾಗಿ ಆಸೆ ಪಡುತ್ತಿರುವ ನೀವು ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದೀರಿ ಎಂದು ಆರೋಪಿಸಿದರು.
ಸಂವಿಧಾನ ಮತ್ತು ದೇಶದ ಜನರನ್ನು ರಕ್ಷಣೆ ಮಾಡುವುದು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂಬುದನ್ನು ಮನಗಾಣಬೇಕು ಎಂದು ಹೇಳಿದರು.ಪ್ರತಿಭಟನೆಯಲ್ಲಿ ಯುವ ಕಾಂಗ್ರೆಸ್ ಸಮಿತಿ ನಗರಾಧ್ಯಕ್ಷ ಲಾಕೇಶ್, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಹಿರೇಮಗಳೂರು ರಾಮಚಂದ್ರ, ಜಗದೀಶ್, ಮಲ್ಲೇಶ್ ಸ್ವಾಮಿ, ಗಂಗಾಧರ್, ಲಕ್ಯಾ ಸಿದ್ದೇಶ್, ಹಿರೇಗೌಜ ಶಿವು, ನವೀನ್ ಎತ್ತಿನಮನೆ, ಅಭಿಷೇಕ್, ಆದರ್ಶ್ ಬಹುಜನ್, ಮದನ್, ಪವನ್ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.28 ಕೆಸಿಕೆಎಂ 5ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಬಗ್ಗೆ ಹಗುರವಾಗಿ ಮಾತನಾಡಿರುವ ಬಿಜೆಪಿ ಮುಖಂಡರ ನಡೆ ಖಂಡಿಸಿ ಶನಿವಾರ ಯುವ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ನಡೆಸಿತು.