ಹುಬ್ಬಳ್ಳಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಹಾಗೂ ಅನ್ಯಾಯಕ್ಕೊಳಗಾದ ವಿದ್ಯಾರ್ಥಿಗಳಿಗೆ ಶೀಘ್ರ ನ್ಯಾಯ ಒದಗಿಸಲು ಆಗ್ರಹಿಸಿ ಬುಧವಾರ ಹು-ಧಾ ಮಹಾನಗರ ಯುವ ಕಾಂಗ್ರೆಸ್ನಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಈ ವೇಳೆ ಕಾರ್ಯಕರ್ತರು, ವಿದ್ಯಾರ್ಥಿಗಳ ಭವಿಷ್ಯವನ್ನು ಕೇಂದ್ರ ಸರ್ಕಾರ ಹಾಳು ಮಾಡುತ್ತಿದೆ. ಇದು ದೇಶದಲ್ಲಿ ನಡೆದ ಬೃಹತ್ ಹಗರಣವಾಗಿದೆ ಎಂದು ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಹು- ಧಾ ಯುವ ಕಾಂಗ್ರೆಸ್ ಅಧ್ಯಕ್ಷ ಅರ್ಜುನ ಪಾಟೀಲ ಮಾತನಾಡಿ, ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರು ಸಚಿವರಾದ ಬಳಿಕ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಎರಡನೆಯದ್ದಾಗಿದೆ. ದೇಶಾದ್ಯಂತ ಪರೀಕ್ಷೆ ನಡೆಸಿ ಈಗ ಅದನ್ನು ರದ್ದುಗೊಳಿಸಿರುವುದು ಲಕ್ಷಾಂತರ ವಿದ್ಯಾರ್ಥಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಇದೀಗ ಮತ್ತೊಮ್ಮೆ ಮರು ಪರೀಕ್ಷೆ ಕರೆಯಲಾಗುವುದು ಎಂದು ಹೇಳಿದೆ. ವಿದ್ಯಾರ್ಥಿಗಳು ವರ್ಷಪೂರ್ತಿ ಶ್ರಮವಹಿಸಿ ಅಭ್ಯಾಸಿಸಿ ಪರೀಕ್ಷೆ ಬರೆದು ಉತ್ತಮ ಫಲಿತಾಂಶ ಬರಲಿದೆ ಎಂದು ನಿರಾಳರಾಗಿದ್ದರು. ಇದೀಗ ಧಿಡೀರ್ ರದ್ದುಗೊಳಿಸಿರುವುದು ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ಹಲವು ಪರೀಕ್ಷೆಗಳ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರುವುದು ಜಗಜ್ಜಾಹೀರಾಗಿದೆ. ಈ ಕೂಡಲೇ ಕೇಂದ್ರದ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕು. ದೇಶಾದ್ಯಂತ ನೀಟ್ ಪರೀಕ್ಷೆ ನಡೆಸುವುದನ್ನು ಸಂಪೂರ್ಣವಾಗಿ ನಿಷೇಧಿಸಬೇಕು ಎಂದು ಒತ್ತಾಯಿಸಿದರು.ಪೊಲೀಸರೊಂದಿಗೆ ವಾಗ್ವಾದ
ಈ ಸಂದರ್ಭದಲ್ಲಿ ನಾಗರಾಜ ಕೊಟಗಿ, ನಾಗರಾಜ ನೂಲ್ವಿ, ಸಂತೋಷ ನಾಯಕ, ಅಕ್ಷಯ, ಮಂಜುನಾಥ ಉಪ್ಪಾರ, ಸತೀಶ ಬಡಿಗೇರ ಸೇರಿದಂತೆ ಹಲವರಿದ್ದರು.ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ
ಧಾರವಾಡ: ನೀಟ್ ಪರೀಕ್ಷೆ ರದ್ದು ಮತ್ತು ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹಾಗೂ ಬಿಜೆಪಿ ನಾಯಕರು ಮೌನವಾಗಿದ್ದಾರೆ ಎಂದು ಸಚಿವ ಸಂತೋಷ ಲಾಡ್ ಆರೋಪಿಸಿದರು.
ದೇಶಾದ್ಯಂತ ಪರೀಕ್ಷೆ ರದ್ಧತಿಯಿಂದಾಗಿ ಭವಿಷ್ಯದ ಕನಸು ಹೊತ್ತಿದ್ದ ಲಕ್ಷಾಂತರ ವಿದ್ಯಾರ್ಥಿಗಳು ಹಾಗೂ ಪೋಷಕರು ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ. ನೀಟ್ ಪರೀಕ್ಷೆಗಳಲ್ಲಿನ ಹಗರಣಗಳ ಬಗ್ಗೆ ಸೂಕ್ತ ತನಿಖೆ ನಡೆಸಬೇಕು, ವಿದ್ಯಾರ್ಥಿಗಳಿಗೆ ಅನ್ಯಾಯ ಆಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಿಇಟಿ ಆಧಾರದ ಮೇಲೆ ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಕೊಡುವ ಕುರಿತು ಸರ್ಕಾರ ಚಿಂತನೆ ನಡೆಸಿದೆ. ಈ ಕುರಿತು ಸಚಿವರು ಹಾಗೂ ಮುಖ್ಯಮಂತ್ರಿಗಳು ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ಅಭಿಪ್ರಾಯಪಟ್ಟರು.ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಅಲ್ತಾಫ ಹಳ್ಳೂರ, ಅನಿಲಕುಮಾರ ಪಾಟೀಲ, ಗೌರಮ್ಮ ಬಲೋಗಿ, ಅರವಿಂದ ಏಗನಗೌಡರ, ಎಸ್.ಆರ್. ಪಾಟೀಲ ಮೊದಲಾದವರಿದ್ದರು.
ಮೋದಿ ರೋಡ್ ಶೋದಲ್ಲಿ ಆ್ಯಂಬುಲೆನ್ಸ್ ಫಿಕ್ಸ್!!ಪ್ರಧಾನಿ ಮೋದಿ ರೋಡ್ ಶೋ ನಡೆದಲ್ಲೆಲ್ಲ ಆ್ಯಂಬುಲೆನ್ಸ್ ಬರುವುದು ಸಾಮಾನ್ಯ. ಪ್ರಧಾನಿ ಬರುತ್ತಾರೆಂದರೆ ಝೀರೋ ಟ್ರಾಫಿಕ್ ಇರುತ್ತದೆ. ಆದರೂ ಪ್ರಧಾನಿ ಹೋಗುವ ಮಾರ್ಗದಲ್ಲಿ ಆ್ಯಂಬುಲೆನ್ಸ್ ಬರುತ್ತದೆ. ಆ್ಯಂಬುಲೆನ್ಸ್ ಸಾಗಲು ಮೋದಿ ಅನುವು ಮಾಡಿಕೊಡುತ್ತಾರೆ. ಇದನ್ನು ಮಾಧ್ಯಮಗಳು ಅತಿ ರಂಜಿತವಾಗಿ ಪ್ರಸಾರ ಮಾಡುತ್ತವೆ. ದೇಶದ ಅಭಿವೃದ್ಧಿ ಬಗ್ಗೆ ಯಾರಿಗೂ ಕಾಳಜಿ ಇಲ್ಲ. ಮೋದಿಯನ್ನು ಚುನಾವಣೆ ಗೆಲ್ಲಲು ಮಾತ್ರ ಬಿಜೆಪಿ ಬಳಸಿಕೊಳ್ಳುತ್ತಿದೆ ಎಂದು ಲಾಡ್ ಟೀಕಿಸಿದರು.