ಕನ್ನಡಪ್ರಭ ಯುವ ಆವೃತ್ತಿ ಬಿಡುಗಡೆ
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳ ಶೈಕ್ಷಣಿಕ ವಿಕಾಸಕ್ಕೆ ಕನ್ನಡಪ್ರಭದ ಯುವ ಆವೃತ್ತಿ ಸಹಕಾರಿಯಾಗಿದೆ ಎಂದು ವೈದ್ಯ ಡಾ. ಮಲ್ಲಿಕಾರ್ಜುನ ಬೇವಿನಮರದ ಹೇಳಿದರು.
ತಾಲೂಕಿನ ಹಿರೇಖೇಡ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಸೋಮವಾರ ಕನ್ನಡಪ್ರಭ ಯುವ ಆವೃತ್ತಿ ಬಿಡುಗಡೆ ಮಾಡಿ ಅವರು ಮಾತನಾಡಿದರು.ಕನ್ನಡಪ್ರಭ ಸತತ ೫೦ ವರ್ಷಗಳಿಂದ ಸಾಮಾಜಿಕ ಪರಿವರ್ತನೆಯಾಗುವ ನಿಟ್ಟಿನಲ್ಲಿ ನಿರಂತರ ಕಾರ್ಯ ಮಾಡುತ್ತಿದೆ. ಅದೇ ರೀತಿ ಎಸ್ಎಸ್ಎಲ್ಸಿ ಹಾಗೂ ಪಿಯುಸಿ ವಿದ್ಯಾರ್ಥಿ ಶೈಕ್ಷಣಿಕ ಮಾರ್ಗದರ್ಶಿ ಅತ್ಯುತ್ತಮವಾಗಿ ಮೂಡಿ ಬರುತ್ತಿದ್ದು, ಈ ಶಾಲೆಯ ಎಲ್ಲಾ ವಿದ್ಯಾರ್ಥಿಗಳು ತಮ್ಮ ಪಠ್ಯದ ಜತೆಗೆ ಯುವ ಆವೃತ್ತಿಯನ್ನು ಓದುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಮುಂದಿನ ತಿಂಗಳು ನಡೆಯುವ ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಜಿಲ್ಲೆಗೆ ಕೀರ್ತಿ ತರಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.
ಕನ್ನಡಪ್ರಭದ ಯುವ ಆವೃತ್ತಿ ನಮಗೆಲ್ಲ ಸಹಕಾರಿಯಾಗಿದೆ. ರಾಜ್ಯದ ನಾನಾ ಕಡೆಗಳಲ್ಲಿನ ನಡೆದ ವೈವಿಧ್ಯಮಯ ಕಾರ್ಯಕ್ರಮಗಳ ಜತೆಗೆ ಪ್ರಶಸ್ತಿ ಪಡೆದಿರುವ ಹಾಗೂ ವಿವಿಧ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರುವವರ ಕುರಿತು ಪತ್ರಿಕೆಯಲ್ಲಿ ಸುದ್ದಿ ಪ್ರಕಟಿಸಿ ಬೆಳಕಿಗೆ ತರುತ್ತಿದೆ. ಹಳ್ಳಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆ ಅನಾವರಣಕ್ಕೆ ಯುವ ಆವೃತ್ತಿ ಹೆಸರಾಗಿದೆ. ಈ ಬಾರಿ ಪರೀಕ್ಷೆಗೆ ಯುವ ಆವೃತ್ತಿ ಅನುಕೂಲವಾಗಲಿದೆ ಎನ್ನುವ ವಿಶ್ವಾಸ ಹೊಂದಿದ್ದೇವೆ ಎಂದು ನಿತ್ಯ ಆವೃತ್ತಿ ಓದುವ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು.