ಮಡಿಕೇರಿ: ವಿಶ್ವ ಬುಡಕಟ್ಟು ದಿನಾಚರಣೆ ಹಾಗೂ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಂಸ್ಕೃತಿ ಸಿರಿ ಟ್ರಸ್ಟ್ ಕೊಡಗು ವತಿಯಿಂದ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಮಡಿಕೇರಿ ಹಾಗೂ ಭಾರತೀಯ ವೈದ್ಯಕೀಯ ಸಂಘ ಕೊಡಗು ಘಟಕದ ಸಹಯೋಗದಲ್ಲಿ ಬಾಳುಗೋಡು ಏಕಲವ್ಯ ಮಾದರಿ ವಸತಿ ಶಾಲೆಯಲ್ಲಿ ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ ನಡೆಯಿತು.ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಅವರು ಬುಡಕಟ್ಟು ಸಮುದಾಯವು ವಿಶಿಷ್ಟ ಸಂಸ್ಕೃತಿ, ಪರಂಪರೆ, ಆಚಾರ-ವಿಚಾರ ಹಾಗೂ ಜೀವನ ಪದ್ಧತಿಯನ್ನು ಹೊಂದಿದ್ದು, ಅವುಗಳನ್ನು ಉಳಿಸಿ ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ. ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.ಜಿಲ್ಲಾ ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ ಮಾತನಾಡಿ, ಬುಡಕಟ್ಟು ಮಕ್ಕಳ ಶಿಕ್ಷಣ, ಪ್ರತಿಭೆ ಹಾಗೂ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣದ ಜೊತೆಗೆ ಅವರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸುವ ಅಗತ್ಯವಿದೆ ಎಂದರು.ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಿ ಅಭಿನಂದಿಸಲಾಯಿತು. ಸಾಂಸ್ಕೃತಿಕ ಸ್ಪರ್ಧೆಗಳ ವಿಜೇತರಿಗೆ ಸಂಸ್ಕೃತಿ ಸಿರಿ ಟ್ರಸ್ಟ್ ವತಿಯಿಂದ ಬಹುಮಾನ ವಿತರಿಸಲಾಯಿತು. ರಾಷ್ಟ್ರಮಟ್ಟದ ಶೂಟಿಂಗ್ ನಲ್ಲಿ ಪ್ರಥಮ ಸ್ಥಾನ ಪಡೆದ ಶಾಲೆಯ ವಿದ್ಯಾರ್ಥಿ ಉದಂತ್ ಪಿ.ಎಂ ಅವರನ್ನು ಶಾಸಕ ಎ.ಎಸ್.ಪೊನ್ನಣ್ಣ ಅಭಿನಂದಿಸಿದರು.ಸಮಾಜ ಸೇವೆ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸೇವೆ ಸಲ್ಲಿಸಿದ ಡಾ.ವಿಕ್ರಂ ಶೆಟ್ಟಿ, ಡಾ.ಚಿನ್ಮಯಿ, ವತ್ಸಲಾ ರಮೇಶ್ ಹಾಗೂ ಕೊಡಗಿನ ಹೆಸರಾಂತ ಗಾಯಕಿ ಪುತ್ತಮನೆ ವಿದ್ಯಾ ಜಗದೀಶ್ ಅವರನ್ನು ಸಂಸ್ಕೃತಿ ಸಿರಿ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭ ಶಾಸಕ ಎ.ಎಸ್.ಪೊನ್ನಣ್ಣ ಅವರನ್ನು ಕೂಡ ಟ್ರಸ್ಟ್ ವತಿಯಿಂದ ಅಭಿನಂದಿಸಿ ಗೌರವಿಸಲಾಯಿತು.
ಬುಡಕಟ್ಟು ಸಂಸ್ಕೃತಿಯ ವೈವಿಧ್ಯತೆಯನ್ನು ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು.