-ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಡಾ. ಮಹಾಂತ ಶಿವಯೋಗಿಗಳ ಜನ್ಮದಿನ; ವ್ಯಸನಮುಕ್ತ ದಿನಾಚರಣೆ
ಡಾ. ಮಹಾಂತ ಶಿವಯೋಗಿಗಳು ವ್ಯಸನಿಗಳ ಮನಪರಿವರ್ತಿಸುವ ಮೂಲಕ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಶ್ರಮಿಸಿದ್ದರು ಎಂದು ಬೆಂಗಳೂರು ಗ್ರಾಮಾಂತರ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮೋಹನ್ ಕುಮಾರ್ ತಿಳಿಸಿದರು.
ಬೆಂ.ಗ್ರಾ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿಯಿಂದ ಇಲ್ಲಿನ ದೇವರಾಜ ಅರಸು ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ವ್ಯಸನ ಮುಕ್ತ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ದೇಶವು ಉತ್ತಮ ಸಂಸ್ಕಾರ, ಪರಂಪರೆ ಹಾಗೂ ಯುವ ಶಕ್ತಿಯನ್ನು ಹೊಂದಿದೆ. ದೇಶದ ಬಲವಾಗಿರುವ ಯುವಜನತೆಯು ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ. ಯುವ ಸಮೂಹವು ಸ್ವಯಂ ಶಿಸ್ತು, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡೆಗಳಲ್ಲಿ ಪಾಲ್ಗೊಳುವಿಕೆ, ಪುಸ್ತಕ ಓದುವ ಹವ್ಯಾಸವನ್ನು ಮೈಗೂಡಿಸಿಕೊಂಡು ವ್ಯಸನಗಳಿಂದ ದೂರವಿರಬೇಕು. ವಿದ್ಯಾರ್ಥಿ ಜೀವನದಲ್ಲಿ ನಿಖರ ಗುರಿ, ನಿರಂತರ ಅಧ್ಯಯನಶೀಲರಾಗಿ ಸಾಧಕರಾಗಬೇಕು ಎಂದರು.
ಜಿಲ್ಲಾ ಕುಷ್ಠರೋಗ ನಿರ್ಮೂಲನಾ ಅಧಿಕಾರಿ ಡಾ. ನಾಗರಾಜ್ ಮಾತನಾಡಿ, ವಿದ್ಯಾರ್ಥಿಗಳು ಉತ್ತಮ ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ದುಶ್ಚಟಗಳಿಂದ ದೂರವಿದ್ದು ನಶಾಮುಕ್ತ ಸಮಾಜ ನಿರ್ಮಾಣ ಮಾಡುವಲ್ಲಿ ಪಾಲ್ಗೊಳ್ಳಬೇಕು. ದುಶ್ಚಟಗಳಿಗೆ ದಾಸನಾದರೆ ದೇಹದ ಅಂಗಗಳು ಹಾಳಾಗಿ ಆರೋಗ್ಯವು ಹದಗೆಡುತ್ತದೆ ಎಂದರು.
ಇದೇ ಸಂದರ್ಭದಲ್ಲಿ ವ್ಯಸನಮುಕ್ತ ಪ್ರತಿಜ್ಞಾ ವಿಧಿಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲಾಯಿತು.
ಫೋಟೋ-7ಕೆಡಿಬಿಪಿ4- ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಮಟ್ಟದ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಅಂಗವಾಗಿ ವ್ಯಸನಮುಕ್ತ ದಿನಾಚರಣೆ ನಡೆಯಿತು.