ಶಿವಮೊಗ್ಗ: ಸಾಹಿತ್ಯ ಕ್ಷೇತ್ರದಲ್ಲಿ ಯುವಜನತೆ ಆಸಕ್ತಿ ಬೆಳೆಸಿಕೊಳ್ಳಬೇಕು. ಸಾಹಿತ್ಯ ಕೃತಿಗಳನ್ನು ಅಧ್ಯಯನ ಮಾಡುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದು ಪ್ರಾಧ್ಯಾಪಕ, ಬರಹಗಾರ ಡಾ.ಎಂ.ಇ.ಶಿವಕುಮಾರ ಹೊನ್ನಾಳಿ ಹೇಳಿದರು.
ವಿದ್ಯಾರ್ಥಿಗಳು ಸರಿಯಾದ ಆದರ್ಶ ವ್ಯಕ್ತಿತ್ವಗಳನ್ನು ಆಯ್ಕೆ ಮಾಡಿಕೊಳ್ಳುವುದು ಅತ್ಯಂತ ಅವಶ್ಯಕ. ನಿಮ್ಮ ಇಷ್ಟದ ಕ್ಷೇತ್ರದ ಸಾಧಕರ ಬಗ್ಗೆ ಹೆಚ್ಚಿನ ಅಧ್ಯಯನ ನಡೆಸಿ ನೀವು ಕೂಡ ಉನ್ನತ ಸಾಧನೆ ಮಾಡಲು ಸಾಧ್ಯವಿದೆ ಎಂದು ತಿಳಿಸಿದರು.
ವಿದ್ಯಾರ್ಥಿ ಜೀವನವು ಅತ್ಯಂತ ಅಮೂಲ್ಯ ಸಮಯ. ಶಾಲಾ ಕಾಲೇಜಿನ ದಿನಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ನೆರವಾಗುತ್ತದೆ. ಪೋಷಕರು ಹಾಗೂ ಗುರು ಹಿರಿಯರ ಮಾರ್ಗದರ್ಶನದಿಂದ ಉನ್ನತ ಸಾಧನೆ ಮಾಡಬೇಕು ಎಂದು ಕರೆ ನೀಡಿದರು.ಭಾರತೀಯ ನಾಗರಿಕ ಸೇವಾ ಪರೀಕ್ಷೆಯಲ್ಲಿ 421ನೇ ರ್ಯಾಂಕ್ ಪಡೆದ ಬಿ.ಎಂ.ಮೇಘನಾ ಮಾತನಾಡಿ, ನಮ್ಮ ಭಾಷೆ, ಪ್ರಾದೇಶಿಕತೆ, ಸಂಸ್ಕೃತಿಯು ನಮ್ಮನ್ನು ಹೊಸತನದೆಡೆಗೆ ಕೊಂಡೊಯ್ಯುತ್ತದೆ. ವಿದ್ಯಾರ್ಥಿಗಳು ಕೆಟ್ಟ ಆಕರ್ಷಣೆಗಳಿಂದ ದೂರ ಇರಬೇಕು. ಶ್ರದ್ಧೆ, ಸಂಕಲ್ಪ, ಶಿಸ್ತು ಇದ್ದರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಯಶಸ್ಸು ಸಾಧಿಸಬಹುದು ಎಂದರು.
ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿದರು.ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ, ಉಪಾಧ್ಯಕ್ಷ ಎಸ್.ಪಿ.ದಿನೇಶ್, ಸಹ ಕಾರ್ಯದರ್ಶಿ ಡಾ.ಎ.ಸತೀಶ್ಕುಮಾರ್ ಶೆಟ್ಟಿ, ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ಪ್ರಾಚಾರ್ಯ ಡಾ.ಎಂ.ವೆಂಕಟೇಶ್, ಐಕ್ಯೂಎಸಿ ಸಂಯೋಜಕ ಪ್ರೊ.ಎನ್.ಕುಮಾರಸ್ವಾಮಿ, ಪ್ರೊ.ಎಸ್.ಡಿ.ಉಮೇಶ್,
ಪ್ರೊ.ಶಂಕರನಾರಾಯಣ ಶಾಸ್ತ್ರಿ, ವತ್ಸಲಾ ಮತ್ತಿತರರಿದ್ದರು.