ಮಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆ ಸಹಬಾಳ್ವೆ ಮತ್ತು ಸಮಾನ ಅವಕಾಶ ಆಶಯ ಹೊಂದಿದ್ದು, ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಉನ್ನತ ಸ್ಥಾನಕ್ಕೆ ತಲುಪಲು ಅವಕಾಶ ಕಲ್ಪಿಸುವುದು ಪ್ರಜಾಪ್ರಭುತ್ವದ ಉದ್ದೇಶವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ.ಖಾದರ್ ಹೇಳಿದರು. ಅವರು ಮಂಗಳವಾರ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ನಡೆದ ‘ಯುವ ಸಂಸತ್ತು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಪ್ರಮುಖ ಆಧಾರವಾಗಿದ್ದು, ಈ ಹಕ್ಕನ್ನು ಜವಾಬ್ದಾರಿಯುತವಾಗಿ ಚಲಾಯಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದರು.ಜಿಲ್ಲಾಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನರ್ವಾಡೆ ವಿನಾಯಕ್ ಕಾರ್ಭಾರಿ, ಮಹಾನಗರಪಾಲಿಕೆ ಆಯುಕ್ತ ರಾಹುಲ್ ರತ್ನಂ ಪಾಂಡೆ, ಪ್ರೊಬೆಷನರಿ ಐ.ಎ.ಎಸ್. ಅಧಿಕಾರಿ ಅರ್ಚಿತ್ ಡೊಂಗ್ರೆ, ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೋಲಿಸ್ ಅಧೀಕ್ಷಕ ಸೈಮನ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಭರತ್ ಮುಂಡೋಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಡಾ.ಬಿ.ಎಸ್.ಹೇಮಲತಾ ಮತ್ತಿತ್ತರರು ಇದ್ದರು.