ಕುಷ್ಟಗಿ: ಬಿಜೆಪಿ ಯುವ ಮೋರ್ಚಾ ಮಂಡಲದಿಂದ ಹರ್ ಘರ್ ತಿರಂಗಾಅಭಿಯಾನದ ಅಂಗವಾಗಿ ಪಟ್ಟಣದಲ್ಲಿ ಬೈಕ್ ರ್ಯಾಲಿ ನಡೆಯಿತು.
ಪಟ್ಟಣದ ವೀರಯೋಧ ಸಂದೀಪ್ ಉನ್ನಿಕೃಷ್ಣನ್ ವೃತ್ತದಿಂದ ಆರಂಭವಾದ ರ್ಯಾಲಿಯು ಪ್ರಮುಖ ರಸ್ತೆಗಳ ಮೂಲಕ ಸಂಚರಿಸಿ ವೀರಯೋಧ ಮಲ್ಲಯ್ಯ ವೃತ್ತದಲ್ಲಿ ಮುಕ್ತಾಯಗೊಂಡಿತು.ರ್ಯಾಲಿಯುದ್ದಕ್ಕೂ ದೇಶಭಕ್ತಿಯ ಘೋಷಣೆ ಮೊಳಗಿಸಿ ವೀರಯೋಧರಿಗೆ ಜಯಘೋಷ ಕೂಗಲಾಯಿತು.
ಯುವ ಮೋರ್ಚಾ ಅಧ್ಯಕ್ಷ ಉಮೇಶ್ ಯಾದವ್ ಮಾತನಾಡಿ, ಪ್ರಧಾನಮಂತ್ರಿ ನರೇಂದ್ರ ಮೋದಿ ಕರೆಯ ಹಿನ್ನೆಲೆ ದೇಶಾದ್ಯಂತ ಹರ್ ಘರ್ ತಿರಂಗಾ ಅಭಿಯಾನ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಪ್ರತಿಯೊಂದು ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸುವ ಮೂಲಕ ದೇಶದ ಬಗ್ಗೆ ಗೌರವ ಮತ್ತು ಹೆಮ್ಮೆ ವ್ಯಕ್ತಪಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.ಯುವಜನರು ಕೇವಲ ಹಬ್ಬದ ಸಂದರ್ಭಗಳಲ್ಲಿ ಮಾತ್ರವಲ್ಲದೆ ಪ್ರತಿನಿತ್ಯ ದೇಶದ ಪ್ರಗತಿ, ಏಕತೆ ಮತ್ತು ಸಮಗ್ರತೆಯ ಬಗ್ಗೆ ಜಾಗೃತರಾಗಬೇಕು.ಇಂತಹ ದೇಶಭಕ್ತಿ ಕಾರ್ಯಕ್ರಮ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವುದರಿಂದ ಮುಂದಿನ ಪೀಳಿಗೆಗೂ ರಾಷ್ಟ್ರಪ್ರೇಮದ ಸಂದೇಶ ತಲುಪಿಸಲು ಸಾಧ್ಯವಾಗುತ್ತದೆ. ಹರ್ ಘರ್ ತಿರಂಗಾ ಅಭಿಯಾನವು ಪ್ರತಿಯೊಬ್ಬ ನಾಗರಿಕನಲ್ಲೂ ರಾಷ್ಟ್ರಧ್ವಜದ ಬಗ್ಗೆ ಗೌರವ ಹಾಗೂ ದೇಶದ ಬಗ್ಗೆ ಹೆಮ್ಮೆಯ ಭಾವನೆ ಮೂಡಿಸುವಂತಾಗಬೇಕು ಎಂದು ಹೇಳಿದರು.
ಹರ್ ಘರ್ ತಿರಂಗಾ ಯಾತ್ರೆ, ಪಂಜಿನ ಮೆರವಣಿಗೆ, ಬೃಹತ್ ರಾಷ್ಟ್ರಧ್ವಜ ಮೆರವಣಿಗೆ ಹಾಗೂ ಬೈಕ್ ರ್ಯಾಲಿಗಳ ಮೂಲಕ ದೇಶಭಕ್ತಿ ಮತ್ತು ರಾಷ್ಟ್ರೀಯ ಏಕತೆಯ ಸಂದೇಶ ಜನರಿಗೆ ತಲುಪಿಸಲಾಗುತ್ತಿದೆ. ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜ ಹಾರಿಸಿ ಅಭಿಯಾನದಲ್ಲಿ ಭಾಗವಹಿಸಬೇಕು. ರಾಷ್ಟ್ರಧ್ವಜವು ಸ್ವಾತಂತ್ರ್ಯ, ತ್ಯಾಗ, ಏಕತೆ ಮತ್ತು ಸಾರ್ವಭೌಮತ್ವದ ಸಂಕೇತವಾಗಿದ್ದು, ಅದಕ್ಕೆ ಗೌರವ ನೀಡುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆ ಎಂದರು.