29ರಂದು ಬಿಜೆಪಿ ಯುವಮೋರ್ಚಾದಿಂದ ‘ಯುವ ಭಾರತ’ ಕಾರ್ಯಕ್ರಮ

KannadaprabhaNewsNetwork | Published : Mar 17, 2024 2:05 AM

ಸಾರಾಂಶ

ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಪ್ರತಿ ಗ್ರಾಮ ಪಂಚಾಯಿತಿಯಿಂದ ಕನಿಷ್ಠ 25 ಮಂದಿ ಯುವ ಕಾರ್ಯಕರ್ತರು ಭಾಗವಹಿಸಲಿದ್ದಾರೆ.

ಕನ್ನಡಪ್ರಭ ವಾರ್ತೆ ಉಡುಪಿಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ನವ ಭಾರತ ನಿರ್ಮಾಣಕ್ಕಾಗಿ ‘ಯುವ ಭಾರತ’ ಕಾರ್ಯಕ್ರಮ ಮಾ.29ರಂದು ಮಧ್ಯಾಹ್ನ 3 ಗಂಟೆಗೆ ನಗರದ ಅಜ್ಜರಕಾಡು ಪುರಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಯುವ ಮೋರ್ಚಾ ನೂತನ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಹೇಳಿದರು.ಅವರು ಶನಿವಾರ, ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮದಲ್ಲಿ ಪಕ್ಷದ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಪ್ರತಿ ಗ್ರಾಮ ಪಂಚಾಯಿತಿಯಿಂದ ಕನಿಷ್ಠ 25 ಮಂದಿ ಯುವ ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಈಗಾಗಲೇ ಪೂರ್ವಭಾವಿ ಸಭೆ ನಡೆಸಿದ್ದೇವೆ ಎಂದರು.

ರಾಜ್ಯ ಯುವ ಮೋರ್ಚಾ ಕಾರ್ಯದರ್ಶಿ ವಿಖ್ಯಾತ್ ಶೆಟ್ಟಿ ಮಾತನಾಡಿ, ಲೋಕಸಭೆ ಚುನಾವಣೆಗೆ ಯುವಮೋರ್ಚಾ ಸನ್ನದ್ಧವಾಗಿದೆ. ಜಿಲ್ಲೆಯಲ್ಲಿ 1200 ಬೂತ್‌ಗಳಿವೆ. ಪ್ರತಿ ಬೂತ್ ನಲ್ಲಿ ‘ಒನ್ ಬೂತ್ ಟೆನ್ ಯೂತ್’ ಎಂಬ ಅಭಿಯಾನ ನಡೆಯುತ್ತಿದೆ. ಯುವ ಮೋರ್ಚಾದ 5 ತಂಡಗಳನ್ನು ಮಾಡಲಾಗಿದೆ. ಈ ತಂಡಗಳು 5 ದಿನಗಳಲ್ಲಿ 5 ಗ್ರಾ.ಪಂ.ಗಳಿಗೆ ಭೇಟಿ ನೀಡಿ ಸಭೆಗಳನ್ನು ನಡೆಸಲಿದ್ದಾರೆ ಎಂದರು.ಜಿಲ್ಲಾ ವಕ್ತಾರ ವಿಜಯ್ ಕುಮಾರ್ ಉದ್ಯಾವರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಶಾಂಕ್ ಶಿವತ್ತಾಯ ಉಪಸ್ಥಿತರಿದ್ದರು. ‘ಸಂಕಲ್ಪ ಪತ್ರ’ದ ಆಧಾರದಲ್ಲಿ ಬಿಜೆಪಿ ಪ್ರಣಾಳಿಕೆ

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಪ್ರಣಾಳಿಕೆ ತಯಾರಿಕೆಗೆ ದೇಶಾದ್ಯಂತ ಪ್ರಪ್ರಥಮ ಬಾರಿಗೆ ಬಿಜೆಪಿಯಿಂದ ಜನಸಾಮಾನ್ಯರ ಅಭಿಪ್ರಾಯಗಳನ್ನು ಸಂಗ್ರಹಿಸುವ ‘ಸಂಕಲ್ಪ ಪತ್ರ’ ಅಭಿಯಾನ ನಡೆಯುತ್ತಿದೆ. ಜಿಲ್ಲೆಯ ಐದು ಸಾವಿರ ಮಂದಿಯ ಅಭಿಪ್ರಾಯ ಸಂಗ್ರಹ ಮಾಡಲಾಗುವುದು. ಮಾ.18ರೊಳಗೆ ಬರುವ ಸಲಹೆ ಸೂಚನೆಗಳ ಆಧಾರದಲ್ಲಿ ಪ್ರಣಾಳಿಕೆ ಸಿದ್ಧವಾಗಲಿದೆ ಎಂದು ಶಶಾಂಕ್ ಶಿವತ್ತಾಯ ಹೇಳಿದರು.

Share this article