ಅ.15 ಹಾಗೂ ಅ.17ರಿಂದ 21ರವರೆಗೆ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ಶಿವಮೊಗ್ಗ ಶಿವಮೊಗ್ಗ ದಸರಾ ಅಂಗವಾಗಿ ನಡೆಯುತ್ತಿರುವ ಯುವ ದಸರಾ ವತಿಯಿಂದ ಅ.15 ಹಾಗೂ ಅ.17ರಿಂದ 21ರವರೆಗೆ ವಿವಿಧ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಯುವ ದಸರಾ ಸಮಿತಿ ಅಧ್ಯಕ್ಷ ನಾಗರಾಜ ಕಂಕಾರಿ ತಿಳಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಅ.15ರಂದು ಸಂಜೆ 4.30ಕ್ಕೆ ಕುವೆಂಪು ರಂಗಮಂದಿರದಲ್ಲಿ ನಡೆಯುವ ದೇಹದಾರ್ಢ್ಯ ಸ್ಪರ್ಧೆಯನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಸುಂದರೇಶ್ ಉದ್ಘಾಟಿಸಲಿದ್ದಾರೆ. ಅ.17ರಂದು ಬೆಳಗ್ಗೆ 10.30ಕ್ಕೆ ಮಹಾನಗರ ಪಾಲಿಕೆ ಆವರಣದಲ್ಲಿ ನಡೆಯುವ ಟ್ರಸರ್ ಹಂಟ್ ಅನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ಕುಮಾರ್ ಉದ್ಘಾಟಿಸಲಿದ್ದಾರೆ ಎಂದರು. ಅ.18ರಂದು ಸಂಜೆ 5.30 ಗಂಟೆಗೆ ಶಿವಪ್ಪ ನಾಯಕ ಮಾಲ್ನಲ್ಲಿ ನಡೆಯುವ ಟ್ಯಾಲೆಂಟ್ ಹಂಟ್ ಕಾರ್ಯಕ್ರಮವನ್ನು ಮೇಯರ್ ಎಸ್. ಶಿವಕುಮಾರ್ ಉದ್ಘಾಟಿಸಲಿದ್ದಾರೆ. 19ರಂದು ಸಂಜೆ 4 ಗಂಟೆಗೆ ನೆಹರೂ ಕ್ರೀಡಾಂಗಣದಲ್ಲಿ ನಡೆಯುವ ಕಬಡ್ಡಿ ಪಂದ್ಯಾವಳಿಯನ್ನು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಶ್ರೀಕಾಂತ್ ಉದ್ಘಾಟಿಸುವರು ಎಂದರು. ಅ.20ರಂದು ಸಂಜೆ 5 ಗಂಟೆಗೆ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಮ್ಯೂಸಿಕಲ್ ನೈಟ್ ಅನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ಉದ್ಘಾಟಿಸಲಿದ್ದು, ಬಸವ ಕೇಂದ್ರದ ಶ್ರೀ ಬಸವಮರುಳಸಿದ್ದ ಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ತು ಸದಸ್ಯರಾದ ಡಿ.ಎಸ್. ಅರುಣ್, ಎಸ್. ರುದ್ರೇಗೌಡ, ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಇನ್ನಿತರರು ಆಗಮಿಸಲಿದ್ದಾರೆ. ಅನಂತರ ನಡೆಯುವ ಮ್ಯೂಸಿಕಲ್ ನೈಟ್ನಲ್ಲಿ ಖ್ಯಾತ ಪಾಪ್ ಗಾಯಕ್ ಚಂದನ್ ಶೆಟ್ಟಿ, ಅನನ್ಯ ಭಟ್, ಐಶ್ವರ್ಯ, ಅಜಯ್, ದೀಪು ಜಯಶೀಲನ್ ಭಾಗವಹಿಸಲಿದ್ದಾರೆ. ಅ.21ರಂದು ಸಂಜೆ 5.30ಕ್ಕೆ ಫ್ರೀಡಂ ಪಾರ್ಕ್ನಲ್ಲಿ ನಡೆಯುವ ಜಿಲ್ಲಾಮಟ್ಟದ ನೃತ್ಯ ಸ್ಪರ್ಧೆಯನ್ನು ಶಾಸಕಿ ಶಾರದಾ ಪೂರ್ಯಾ ನಾಯ್ಕ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಸ್.ಎನ್. ಚನ್ನಬಸಪ್ಪ, ಉಪ ಮೇಯರ್ ಲಕ್ಷ್ಮೀ ಶಂಕರ ನಾಯ್ಕ, ಎಸ್. ಜ್ಞಾನೇಶ್ವರ್, ಅನಿತಾ ರವಿಶಂಕರ್, ರೇಖಾ ರಂಗನಾಥ್, ಮಂಜುಳಾ ಶಿವಣ್ಣ ಇನ್ನಿತರರಿದ್ದರು. - - -
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.