ಮಹಿಳೆಯರ ರಕ್ಷಣೆಯಲ್ಲಿ ರಾಜ್ಯ ಸರ್ಕಾರದಿಂದ ಶೂನ್ಯ ಸುರಕ್ಷತೆ ಗ್ಯಾರಂಟಿ: ಮಂಗಳ ನವೀನ್‌ಕುಮಾರ್‌

KannadaprabhaNewsNetwork |  
Published : May 21, 2024, 12:30 AM IST
20ಕೆಎಂಎನ್ ಡಿ15 | Kannada Prabha

ಸಾರಾಂಶ

ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹೆಣ್ಣುಮಕ್ಕಳು, ಮಹಿಳೆಯರ ಮೇಲೆ ಕೊಲೆ, ಸುಲಿಗೆಗಳು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಶಾಲಾ-ಕಾಲೇಜುಗಳಿಗೆ ಹೋಗುವ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲ.

ಕನ್ನಡಪ್ರಭ ವಾರ್ತೆ ಪಾಂಡವಪುರ

ಕಾಂಗ್ರೆಸ್ ಸರ್ಕಾರ ಮಹಿಳೆಯರ ರಕ್ಷಣೆ ವಿಚಾರದಲ್ಲಿ ಶೂನ್ಯ ಸುರಕ್ಷತೆ ಗ್ಯಾರಂಟಿ ಕೊಟ್ಟಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಂಗಳ ನವೀನ್ ಕುಮಾರ್ ಆರೋಪಿಸಿದರು.

ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಹೆಣ್ಣುಮಕ್ಕಳು, ಮಹಿಳೆಯರ ಮೇಲೆ ಕೊಲೆ, ಸುಲಿಗೆಗಳು, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿವೆ. ಮಹಿಳೆಯರಿಗೆ ರಕ್ಷಣೆ ನೀಡುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದರು.

ಶಾಲಾ-ಕಾಲೇಜುಗಳಿಗೆ ಹೋಗುವ ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ಇಲ್ಲ. ಇದಕ್ಕೆ ನೇಹಾ, ಅಂಜಲಿ ಕೊಲೆ ಪ್ರಕರಣಗಳೇ ಸಾಕ್ಷಿ. ಈ ಘಟನೆಗಳು ರಾಜ್ಯದ ಮಹಿಳಾ ಸಮೂಹವನ್ನು ಬೆಚ್ಚಿಬೀಳಿಸುವಂತೆ ಮಾಡಿದೆ ಎಂದು ಹರಿಹಾಯ್ದರು.

ಬೆಳಗಾವಿಯ ವೆಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ, ರಾಣೇಬೆನ್ನೂರಿನ ಅರೆಮಲ್ಲಾಪುರದಲ್ಲಿ ಯುವತಿ ಜೊತೆ ಮಗ ಓಡಿ ಹೋಗಿದ್ದಾನೆಂದು 50 ವರ್ಷದ ಮಹಿಳೆಯನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ವಿವಸ್ತ್ರಗೊಳಿಸಿ ತಳಿಸಿದ ಪ್ರಕರಣ, ಹಾವೇರಿಯಲ್ಲಿ 7 ಮಂದಿ ಮುಸ್ಲಿಂ ಪುರುಷರಿಂದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಗಳಿಂದ ತಲೆ ತಗ್ಗಿಸುವಂತಾಗಿದೆ ಎಂದರು.

ಕಳೆದ ಏಪ್ರಿಲ್ 18ರಂದು ಹುಬ್ಬಳ್ಳಿಯ ಕಾಲೇಜು ಕ್ಯಾಂಪಸ್‌ನಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಮಗಳು ನೀಹಾಳನ್ನು 11 ಬಾರಿ ಚಾಕುವಿನಿಂದ ಚುಚ್ಚಿ ಚುಚ್ಚಿ ಕೊಲೆ ಮಾಡಿದ ಪ್ರಕರಣ, ಮೇ 9 ರಂದು ಕೊಡಗಿನ ಸೂರ್ಲಬ್ಬಿ ಗ್ರಾಮದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಯು.ಎಸ್.ಮೀನಳ ರುಂಡವನ್ನು ಕತ್ತರಿಸಿದ ಪ್ರಕರಣ, ಮೇ 15 ರಂದು ಹುಬ್ಬಳ್ಳಿಯಲ್ಲಿ 21 ವರ್ಷದ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ವಿಶ್ವ ಎಂಬಾತ ಚಾಕುವಿನಿಂದ ಹಿರಿದು ಕೊಲೆ ಸೇರಿದಂತೆ ಎಲ್ಲಾ ಪ್ರಕರಣಗಳು ಕಾಂಗ್ರೆಸ್ ಹೆಣ್ಣುಮಕ್ಕಳಿಗೆ ನೀಡಿ ಗ್ಯಾರೆಂಟಿಯಾಗಿದೆ ಎಂದು ಹರಿಹಾಯ್ದರು.

ಹೆಣ್ಣುಮಕ್ಕಳಿಗೆ ಸೂಕ್ತ ರಕ್ಷಣೆ ನೀಡುವಲ್ಲಿ ವಿಫಲವಾಗಿರುವ ಈ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ರಾಜ್ಯದ ಹೆಣ್ಣುಮಕ್ಕಳು ತಕ್ಕ ಪಾಠಕಲಿಸಲಿದ್ದಾರೆ ಎಂದು ಕಿಡಿಕಾರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ನಗರದಲ್ಲಿ 2026ಕ್ಕೆ ಅದ್ಧೂರಿ ಸ್ವಾಗತ
ನಗುವ ಜಗದ ಅಳುವ ಬಯಸಿದ ಚಿರಕವಿ ಸಣಕಲ್ಲ