- ಕುಡಿಯುವ ನೀರು, ವಸತಿ ನಿಲಯ, ಜಲಸಂಗ್ರಹ, ಉದ್ಯೋಗ ಸೃಷ್ಟಿ ಪ್ರಗತಿ ವೀಕ್ಷಣೆ - - -
- - -
ಕನ್ನಡಪ್ರಭ ವಾರ್ತೆ ದಾವಣಗೆರೆ ಗ್ರಾಮೀಣ ಪ್ರದೇಶಗಳಲ್ಲಿನ ಕುಡಿಯುವ ನೀರು, ವಸತಿ ನಿಲಯ, ಜಲಸಂಗ್ರಹಣೆ ಹಾಗೂ ಉದ್ಯೋಗ ಸೃಷ್ಟಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ಹಾಗೂ ಸ್ಥಳೀಯ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಉದ್ದೇಶದಿಂದ ‘ಬೆಳಗಿನ ನಡೆ -ಗ್ರಾಮದ ಕಡೆ’ ಕಾರ್ಯಕ್ರಮದಡಿ ಶುಕ್ರವಾರ ದಾವಣಗೆರೆ ತಾಲೂಕಿನ ವಿವಿಧ ಗ್ರಾಮಗಳಿಗೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.ಕಾರ್ಯಕ್ರಮ ಅಂಗವಾಗಿ ಹಿರಿತೋಗಲೇರಿ ಗ್ರಾಮದ ಹದಡಿ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ಘಟಕದ ಕಾರ್ಯನಿರ್ವಹಣೆ ಹಾಗೂ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು. ಬಳಿಕ ಕೊಡಗನೂರು ಗ್ರಾಮದ ರಾಮಗೊಂಡನಹಳ್ಳಿ ಬಹುಗ್ರಾಮ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ ನೀರು ಪೂರೈಕೆ ವ್ಯವಸ್ಥೆ, ಘಟಕದ ಕಾರ್ಯನಿರ್ವಹಣೆ ಹಾಗೂ ಸಾರ್ವಜನಿಕರಿಗೆ ಸಮರ್ಪಕ ನೀರು ತಲುಪುತ್ತಿರುವ ಕುರಿತು ಪರಿಶೀಲನೆ ನಡೆಸಿದರು.
ಇದಾದ ಬಳಿಕ ಮಾಯಕೊಂಡ ಗ್ರಾಮದ ಪರಿಶಿಷ್ಟ ಪಂಗಡ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಲ್ಪಿಸಲಾಗಿರುವ ವಸತಿ, ಕುಡಿಯುವ ನೀರು, ಸ್ವಚ್ಛತೆ, ಶೌಚಾಲಯ ಹಾಗೂ ಇತರೆ ಮೂಲ ಸೌಕರ್ಯಗಳನ್ನು ಪರಿಶೀಲಿಸಿದರು.
ಪ್ರಸ್ತುತ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಜಾಬ್ ಕಾರ್ಡ್ ಮೇಳ ಅಭಿಯಾನ ನಡೆಯುತ್ತಿದ್ದು, ಗ್ರಾಮೀಣ ಕುಟುಂಬಗಳಿಂದ ಉದ್ಯೋಗದ ಬೇಡಿಕೆ ಹಾಗೂ ಜಾಬ್ ಕಾರ್ಡ್ಗೆ ಸಂಬಂಧಿಸಿದ ಬೇಡಿಕೆಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಗ್ರಾಮದ ಅರ್ಹ ಕೂಲಿಕಾರರು ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಯಡಿ ಕೆಲಸಕ್ಕೆ ಹಾಜರಾಗುವಂತೆ ಪ್ರೇರೇಪಿಸಲಾಯಿತು. ಗ್ರಾಮೀಣ ಕುಟುಂಬಗಳಿಗೆ ಸ್ಥಳೀಯವಾಗಿಯೇ ಉದ್ಯೋಗ ಅವಕಾಶ ಕಲ್ಪಿಸುವುದರ ಜೊತೆಗೆ, ಗ್ರಾಮದ ಅಭಿವೃದ್ಧಿಗೂ ಯೋಜನೆಯ ಕಾಮಗಾರಿಗಳು ಸಹಕಾರಿ ಆಗುತ್ತವೆ ಎಂಬುದನ್ನು ಕೂಲಿಕಾರರಿಗೆ ತಿಳಿಸಿದರು.
ಈ ಸಂದರ್ಭ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
-21ಕೆಡಿವಿಜಿ32, 33: