ಮುಂಡರಗಿ: ಜಿಪಂ ಸಿಇಒ ಭರತ್ ಎಸ್ ಗುರುವಾರ ಬೆಳಗ್ಗೆ ಮುಂಡರಗಿ ತಾಲೂಕಿನ ಸಿಂಗಟಾಲೂರು ಗ್ರಾಮದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ. ದೇವರಾಜ ಅರಸು ಬಾಲಕರ ವಸತಿ ನಿಲಯಕ್ಕೆ ದಿಢೀರ್ ಭೇಟಿ ನೀಡಿ ದವಸ ಧಾನ್ಯ, ಆಹಾರ ಸಾಮಗ್ರಿಗಳ ಗುಣಮಟ್ಟ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಉಪಹಾರ ಸವಿದು ಆಹಾರದ ಗುಣಮಟ್ಟ ಪರಿಶೀಲಿಸಿದರು.
ನಂತರ ಹಮ್ಮಿಗಿ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿ ಚರಂಡಿ ಕಾಮಗಾರಿ ನಿರ್ವಹಿಸಲು ಸ್ಥಳ ಪರಿಶೀಲನೆ ನಡೆಸಿ ನಂತರ ಗ್ರಾಪಂ ಕಾರ್ಯಲಯಕ್ಕೆ ಭೇಟಿ ನೀಡಿ ಗ್ರಾಮಸ್ಥರು ಹಾಗೂ ಪಂಚಾಯತಿ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿ ವಿವಿಧ ಅಭಿವೃದ್ಧಿ ಕಾರ್ಯಗಳು ಹಾಗೂ ಯೋಜನೆಗಳ ಮಾಹಿತಿ ಪಡೆದುಕೊಂಡರು.
ನಂತರ ಮುಂಡರಗಿ ಪಟ್ಟಣದ ಕೋಟೆ ಭಾಗದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಕೆಲ ಹೊತ್ತು ಪ್ರಶ್ನೋತ್ತರ ನಡೆಸಿದ ಜಿಪಂ ಸಿಇಓ ಅವರು ಮೂಲಭೂತ ಸೌಕರ್ಯ,ಅಕ್ಷರ ದಾಸೋಹ ಮಾಹಿತಿ ಹಾಗೂ ಇನ್ನಿತರೆ ಸೌಲಭ್ಯಗಳ ಕುರಿತು ಪ್ರಶ್ನೆ ಕೇಳಿ ವಿದ್ಯಾರ್ಥಿಗಳಿಂದಲೇ ಉತ್ತರ ಪಡೆದರು. ಶಿಕ್ಷಕರ ಸಂಖ್ಯೆ ಹಾಗೂ ಕಲಿಕಾ ಚಟುವಟಿಕೆಗಳ ಕುರಿತು ಬಿಇಓ ಅವರಿಂದ ಮಾಹಿತಿ ಪಡೆದರು.ಈ ಸಂದರ್ಭದಲ್ಲಿ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಶ್ವನಾಥ ಹೊಸಮನಿ, ಬಿಇಒ ಎಚ್.ಎಂ. ಪಡ್ನೇಶಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.