ಜನರ ಸಮಸ್ಯೆ ಪರಿಹರಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಿ

KannadaprabhaNewsNetwork |  
Published : Jul 4, 2025 11:52 PM IST
14 | Kannada Prabha

ಸಾರಾಂಶ

ಮೂರು ತಿಂಗಳಿಗೆ ಒಂದು ಬಾರಿ ಕೆಡಿಪಿ ಸಭೆ ಹಾಗೂ 6 ತಿಂಗಳಿಗೆ ಒಂದು ಬಾರಿ ಜನತಾದರ್ಶನ

ಕನ್ನಡಪ್ರಭ ವಾರ್ತೆ ಮೈಸೂರು

ಜನರ ಸಮಸ್ಯೆಗಳನ್ನು ಪರಿಹರಿಸಿ ಮಧ್ಯವರ್ತಿಗಳ ಹಾವಳಿ ತಪ್ಪಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅಧಿಕಾರಿಗಳಿಗೆ ಸೂಚಿಸಿದರು.

ಜಿಪಂ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಜನಸ್ಪಂದನ ಹಾಗೂ ಇ– ಪೌತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮೂರು ತಿಂಗಳಿಗೆ ಒಂದು ಬಾರಿ ಕೆಡಿಪಿ ಸಭೆ ಹಾಗೂ 6 ತಿಂಗಳಿಗೆ ಒಂದು ಬಾರಿ ಜನತಾದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಹಿಂದೆ ಮಾಡಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ಬಂದಿದ್ದ ಮನವಿಗಳಲ್ಲಿ ಎಷ್ಟು ಪರಿಹಾರ ಮಾಡಲಾಗಿದೆ ಎಂಬುದನ್ನು ತಿಳಿಸಬೇಕು. ಕಾನೂನು ತೊಡಕು ಇರುವ ಅರ್ಜಿಗಳ ಬಗ್ಗೆಯೂ ಅರ್ಜಿದಾರರಿಗೆ ಮಾಹಿತಿ ನೀಡಬೇಕು. ಜನರಿಗೆ ಪಾರದರ್ಶಕ ಆಡಳಿತದ ಬಗ್ಗೆ ಮಾಹಿತಿ ನೀಡಬೇಕು ಎಂದರು.

ಯಾವ ಯಾವ ಇಲಾಖೆಗಳಲ್ಲಿ ಏನೇನು ಸಮಸ್ಯೆಗಳಿವೆ ಎಷ್ಟು ಅರ್ಜಿಗಳು ಬಂದಿದೆ. ಎಷ್ಟು ಅರ್ಜಿಗಳಿಗೆ ಪರಿಹಾರ ಮಾಡಲಾಗಿದೆ, ಮಾಡದೆ ಇರುವಂತಹ ಅರ್ಜಿಗಳಿಗೆ ಏನು ಪರಿಹಾರ ಎಂಬ ಎಲ್ಲಾ ಮಾಹಿತಿಯನ್ನು ಸಂಗ್ರಹಿಸಲಾಗಿದೆ. ಅರ್ಜಿದಾರರು ತಿಳಿಸಿರುವ ಸಮಸ್ಯೆ ಪರಿಹರಿಸಲು ಆಡಳಿತ ಯಾವಾಗಲೂ ಜನರ ಜೊತೆಯೇ ಇರುತ್ತದೆ ಎಂದು ಅವರು ಹೇಳಿದರು.

ಕಾನೂನಾತ್ಮಕವಾಗಿ ಪರಿಹಾರ ಮಾಡಲು ಸಾಧ್ಯವಾಗಿದೆ ಇರುವಂತಹ ಕಾರ್ಯಗಳ ಬಗ್ಗೆ ಮನವರಿಕೆ ಮಾಡಲು ಆಡಳಿತ ಜನರ ಜೊತೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು. ಹಾಗೂ ನಿಮ್ಮ ಜೊತೆಯಲ್ಲಿ ಕಚೇರಿಯ ಸಮಸ್ಯೆಯನ್ನು ಪರಿಹರಿಸಲು ಸಹಾಯವಾಗುತ್ತದೆ. ಜನರು ಮತ್ತು ಜಿಲ್ಲಾಡಳಿತ ನಡುವೆ ನೇರ ಸಂಪರ್ಕ ಇರುತ್ತದೆ. ಮಧ್ಯವರ್ತಿಗಳ ಹಾವಳಿಗಳನ್ನು ತಪ್ಪಿಸುವ ಸಲುವಾಗಿ ಪ್ರತಿ ಆರು ತಿಂಗಳಿಗೆ ಕಡ್ಡಾಯವಾಗಿ ಜನ ಸಂಪರ್ಕ ಸಭೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.

ಜನಸ್ಪಂದನಾ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೂರಾರು ಜನರ ಸಮಸ್ಯೆ ಆಲಿಸಿದ ಸಚಿವರು ಸಮಸ್ಯೆಗಳನ್ನು ಶೀಘ್ರದಲ್ಲೇ ಪರಿಹರಿಸುವ ಭರವಸೆ ನೀಡಿದರು. ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಹುಡುಕಿದ ಸಚಿವರು, ಇನ್ನುಳಿದ ಅಹವಾಲುಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಬೀದಿ ಬದಿ ವ್ಯಾಪಾರಿಗಳು, ಅಂಗವಿಕಲರು, ಕೂಲಿ ಕಾರ್ಮಿಕರು ಮನೆ ನಿರ್ಮಿಸಿಕೊಡಬೇಕು ಎಂದು ಮನವಿ ಮಾಡಿದ್ದಾರೆ. ಅವರೆಲ್ಲರ ಅರ್ಜಿಯನ್ನು ಸಂಗ್ರಹಿಸಿದ್ದು, ಬಹು ವಸತಿ ಸೌಲಭ್ಯ ಒದಗಿಸಲು ಕ್ರಮ ವಹಿಸಲಾಗುವುದು. ಎಲ್ಲರಿಗೂ ಸೂರು ಒದಗಿಸಲು ಯೋಜನೆ ರೂಪಿಸುತ್ತೇವೆ. ಆರ್ಥಿಕವಾಗಿ ಹಿಂದುಳಿದ ಹಲವರು ಸೌಲಭ್ಯ ದೊರಕುತ್ತಿಲ್ಲ ಎಂದು ತಿಳಿಸಿದ್ದಾರೆ. ಈ ರೀತಿ ಸಮಸ್ಯೆ ಇರುವವರನ್ನು ವಿಚಾರಿಸಿ ಅಧಿಕಾರಿಗಳು ಅವರಿಗೆ ಎಲ್ಲಾ ಸೌಲಭ್ಯ ಒದಗಿಸಿಕೊಡಬೇಕು ಎಂದು ಅವರು ಸೂಚಿಸಿದರು.

ವಿಧಾನಪರಿಷತ್ತು ಸದಸ್ಯ ಸಿ.ಎನ್. ಮಂಜೇಗೌಡ, ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಎಚ್.ಎಂ. ರೇವಣ್ಣ, ಜಿಲ್ಲಾಧ್ಯಕ್ಷ ಅರುಣ್ ಕುಮಾರ್, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಸಿಇಒ ಯುಕೇಶ್ ಕುಮಾರ್, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ಎನ್. ವಿಷ್ಣುವರ್ಧನ್, ನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಮೊದಲಾದವರು ಇದ್ದರು.

PREV