ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಚಿಕ್ಕಬಳ್ಳಾಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮಾಜಿ ಸಚಿವ ಡಾ. ಕೆ ಸುಧಾಕರ್ ಚುನಾವಣೆಯಲ್ಲಿ ತಮ್ಮನ್ನು ಗೆಲ್ಲಿಸಿ, ವೇದನೆ ಕಡಿಮೆ ಮಾಡುವಂತೆ ಕೋರಿ ಟಿಕೆಟ್ ಘೋಷಣೆಗೂ ಮುನ್ನ ಕ್ಷೇತ್ರದ ಜನರಿಗೆ ಮನವಿ ಮಾಡಿದ್ದಾರೆ.
ಅಲ್ಲದೆ, ಮಾ. 15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯದಲ್ಲಿ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು.
ಸೋಮವಾರ ನಗರದ ಖಾಸಗಿ ಪಾರ್ಟಿ ಹಾಲ್ ನಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಗೆಲ್ಲಿಸುವುದರ ಮೂಲಕ ನನ್ನ ವೇದನೆ ಕಡಿಮೆ ಮಾಡಿ ಎಂದು ಮನವಿ ಮಾಡಿದರು.
2-3 ದಿನಗಳಲ್ಲಿ ಪಟ್ಟಿ ಬಿಡುಗಡೆ: ಇನ್ನೇನು ಎರಡು ಮೂರು ದಿನಗಳಲ್ಲಿ ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಘೋಷಣೆ ಆಗುತ್ತದೆ. ಚಿಕ್ಕಬಳ್ಳಾಫುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವಂತೆ ಮನವಿ ಮಾಡಿದ್ದೇನೆ.
ಈ ಸಲ ಚುನಾವಣೆಯಲ್ಲಿ ನನ್ನನ್ನು ಗೆಲ್ಲಿಸಿಕೊಡಿ ಎಂಬ ಬೆಂಬಲಿಗರಿಗೆ ಮನವಿ ಮಾಡಿದರು.ಒಂದು ಅಗಳು ಅನ್ನದಾನ ಮಾಡದ ವ್ಯಕ್ತಿಯನ್ನು ಚಿಕ್ಕಬಳ್ಳಾಫುರದ ಜನ ಶಾಸಕರನ್ನಾಗಿ ಮಾಡಿದ್ದಾರೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಪರೋಕ್ಷವಾಗಿ ವ್ಗಾದಳಿ ನಡೆಸಿದ ಅವರು, ತಾವು ಹಗಲು ರಾತ್ರಿ ಕ್ಷೇತ್ರಕ್ಕಾಗಿ ದುಡಿದರೂ ನನ್ನನ್ನು ಸೋಲಿಸಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.
ಹರಕೆ ಹೊತ್ತವರಿಗೆ ಚಿರಋಣಿ: ಚಿಕ್ಕಬಳ್ಳಾಪುರದ ನಂದಿ ಗ್ರಾಮದಲ್ಲಿ ನಡೆದ ಶ್ರೀ ಭೋಗನಂದೀಶ್ವರ ಜಾತ್ರೆ ಹಾಗೂ ಬ್ರಹ್ಮರಥೋತ್ಸವ ದ ವೇಳೆ ಕೆಲವರು ನನ್ನ ಹೆಸರನ್ನು ಹರಕೆ ಕಟ್ಟಿ ಅಭ್ಯರ್ಥಿಯಾಗುವಂತೆ ಪ್ರಾರ್ಥಿಸಿದ್ದಾರೆ.
ಅವರಿಗೆ ನಾನು ಋಣಿಯಾಗಿದ್ದೇನೆ. ಕಳೆದೊಂದು ವರ್ಷದಿಂದ ಚಿಕ್ಕಬಳ್ಳಾಪುರ ಅಭಿವೃದ್ಧಿ ವಂಚಿತವಾಗಿದೆ. ಬಿಜೆಪಿ ನನಗೆ ಅವಕಾಶ ನೀಡಿದರೆ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡಲಿದ್ದಾರೆ.
ಹಿಂದಿನ ಲೋಪವನ್ನು ಸರಿಪಡಿಸಲು ನಾನು ದಿಟ್ಟ ಉತ್ತರ ನೀಡುತ್ತೇನೆ. ನರೇಂದ್ರ ಮೋದಿಯವರ ಪರವಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಧ್ವನಿಯಾಗಿ ಕೆಲಸ ಮಾಡುತ್ತೇನೆ.
ಜೆಡಿಎಸ್ ಮೈತ್ರಿಯೂ ಇರುವುದರಿಂದ ಬಿಜೆಪಿಗೆ ಹೆಚ್ಚು ಬಲ ಬಂದಿದೆ ಎಂದರು. ಚಿಕ್ಕಬಳ್ಳಾಪುರದಿಂದ ಮೋದಿ ಚಾಲನೆರಾಜ್ಯದಲ್ಲಿ ಲೋಕಸಭಾ ಚುನಾವಣಾ ಪ್ರಚಾರಕ್ಕೆ ಪ್ರಧಾನಿ ನರೇಂದ್ರರ ಮೋದಿ ಅವರು ಮಾ. 15 ರಂದು ಚಾಲನೆ ನೀಡಲಿದ್ದಾರೆ.
ಅಂದು ಬೆಳಗ್ಗೆ 10 ಗಂಟೆಗೆ ಪ್ರಧಾನಿ ನರೇಂದ್ರ ಮೋದಿಯವರು ದೇವನಹಳ್ಳಿಗೆ ಬರಲಿದ್ದಾರೆ. ಕಾರ್ಯಕರ್ತರು ಹಾಗೂ ರೈತರು ಉತ್ಸಾಹದಿಂದ ಅವರನ್ನು ಬರಮಾಡಿಕೊಳ್ಳಲಿದ್ದಾರೆ.
ನಂತರ ಚಿಕ್ಕಬಳ್ಳಾಪುರಕ್ಕೆ ಆಗಮಿಸಿ ಪ್ರಚಾರಕ್ಕೆ ಚಾಲನೆ ನೀಡಲಿದ್ದಾರೆ ಎಂದರು.ಈ ವೇಳೆ ಜಿಲ್ಲಾಪಂಚಾಯತಿ ಮಾಜಿ ಅಧ್ಯಕ್ಷ ಪಿ.ಎನ್.ಕೇಶವರೆಡ್ಡಿ, ಪುರದಗಡ್ಡೆ ಮುನೇಗೌಡ, ಖಾದಿ ಮಂಡಳಿ ಮಾಜಿ ಆಧ್ಯಕ್ಷ ಕೆ.ವಿ.ನಾಗರಾಜ್, ಒಕ್ಕಲಿಗರ ಸಂಘದ ಪ್ರಧಾನ ಕಾರ್ಯದರ್ಶಿ ಕೋನಪ್ಪರೆಡ್ಡಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮರಳ ಕುಂಟೆ ಕೃಷ್ಣಮೂರ್ತಿ, ನಗರಸಭೆಯ ಮಾಜಿ ಅಧ್ಯಕ್ಷ ಆನಂದಬಾಬುರೆಡ್ಡಿ, ನಗರಾಭಿವೃದ್ದಿ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ, ಮತ್ತಿತರರು ಇದ್ದರು