2 ವರ್ಷಗಳ ಅಧಿಕಾರ ಹಂಚಿಕೆ ನಿಗಮ, ಮಂಡಳಿಗಷ್ಟೆ: ಡಿಕೆಶಿ

KannadaprabhaNewsNetwork |  
Published : Oct 03, 2025, 01:07 AM IST
ಡಿ.ಕೆ.ಶಿವಕುಮಾರ್‌ | Kannada Prabha

ಸಾರಾಂಶ

‘ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ, ಸರ್ಕಾರಕ್ಕಲ್ಲ’   ‘ಹಾಲಿ ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿರುವವರನ್ನು ಎರಡು ವರ್ಷಗಳ ನಂತರ ಬದಲಾವಣೆ ಮಾಡಿ ಬೇರೆಯವರಿಗೆ ಅಧಿಕಾರ ಹಂಚಿಕೆ - ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ 

  ಬೆಂಗಳೂರು :  ‘ಅಧಿಕಾರ ಹಂಚಿಕೆ ಅಥವಾ ಬದಲಾವಣೆ ಸೂತ್ರ ನಿಗಮ ಮಂಡಳಿಗಳ ಮಟ್ಟಕ್ಕೆ ಮಾತ್ರ ಸೀಮಿತ, ಸರ್ಕಾರಕ್ಕಲ್ಲ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುವ ವೇಳೆ, ‘ಹಾಲಿ ನಿಗಮ ಮಂಡಳಿ ಅಧ್ಯಕ್ಷರಾಗಿ ನೇಮಕಗೊಂಡಿರುವವರನ್ನು ಎರಡು ವರ್ಷಗಳ ನಂತರ ಬದಲಾವಣೆ ಮಾಡಿ ಬೇರೆಯವರಿಗೆ ಅಧಿಕಾರ ಹಂಚಿಕೆ ಮಾಡಲಾಗುವುದು. ಈ ಅಧಿಕಾರ ಹಂಚಿಕೆ ಸರ್ಕಾರದ ಮಟ್ಟಕ್ಕಲ್ಲ’ ಎಂದರು,

‘ನಮ್ಮ ಈ ಅಧಿಕಾರ ಹಂಚಿಕೆ ಕೇವಲ ನಿಗಮ ಮಂಡಳಿ ವಿಚಾರದಲ್ಲಿ ಮಾತ್ರ. ಸರ್ಕಾರದ ಮಟ್ಟದಲ್ಲಿ ಅಲ್ಲ ಎಂದು ಸ್ಪಷ್ಟನೆ ನೀಡಲು ಬಯಸುತ್ತೇನೆ. ಇಲ್ಲವಾದರೆ ನಾನು ಹಂಚಿಕೆ ವಿಚಾರ ಮಾತನಾಡಿದೆ ಎಂದು ಸರ್ಕಾರದ ವಿಚಾರಕ್ಕೆ ಲಿಂಕ್ ಮಾಡಿ ಅನಗತ್ಯ ಚರ್ಚೆ ಆಗಬಹುದು. ಆ ರೀತಿ ಮಾಡುವುದು ಬೇಡ. ನಾನು ಹಾಗೂ ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಮಾತಿಗೆ ಬದ್ಧವಾಗಿ ನಡೆಯುತ್ತೇವೆ. ಈ ವಿಚಾರದಲ್ಲಿ ಅನಗತ್ಯ ಚರ್ಚೆ ಬೇಡ’ ಎಂದು ತಿಳಿಸಿದರು.

‘ಪಕ್ಷದ ಮುಖಂಡರು, ಕಾರ್ಯಕರ್ತರ ಪರಿಶ್ರಮವನ್ನು ಪಕ್ಷ ಗುರುತಿಸುತ್ತದೆ. ಪಕ್ಷಕ್ಕೆ ದುಡಿದವರಿಗೆ ನಾವು ನಿಗಮ-ಮಂಡಳಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನೇಮಿಸಿದ್ದೇವೆ. ಸದ್ಯದಲ್ಲೇ 650 ನಿರ್ದೇಶಕರ ಪಟ್ಟಿಯನ್ನೂ ಅಂತಿಮಗೊಳಿಸಿ ಎರಡು-ಮೂರು ದಿನಗಳಲ್ಲಿ ಪ್ರಕಟಿಸುತ್ತೇವೆ. ಈಗ ನೇಮಕಗೊಂಡಿರುವವರರಲ್ಲಿ ಎರಡು ವರ್ಷಗಳ ನಂತರ ಕೆಲ ಅಧ್ಯಕ್ಷರು ರಾಜೀನಾಮೆ ನೀಡಲಿದ್ದು, ಬೇರೆಯವರಿಗೆ ಅಧಿಕಾರ ನೀಡಲಾಗುವುದು. ನಾವು ಎಲ್ಲರಿಗೂ ಅಧಿಕಾರ ಹಂಚಿ ಪ್ರೋತ್ಸಾಹ ನೀಡುತ್ತೇವೆ’ ಎಂದರು.

‘ಮುಂದಿನ ದಸರಾದಿಂದ ಪಕ್ಷಕ್ಕೆ ದುಡಿದ ಸುಮಾರು ಸಾವಿರ ಜನ ಕಾರ್ಯಕರ್ತರಿಗೆ ಕಾಂಗ್ರೆಸ್ ಪಕ್ಷದಿಂದಲೇ ಆಹ್ವಾನ ನೀಡುವಂತೆ ಮಾಡಲಾಗುವುದು. ಎಲ್ಲಾ ಭಾಗದವರು ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತಾಗಬೇಕು. ಈ ವೈಭವಯುತ ನಾಡಹಬ್ಬವನ್ನು ಜನರು ನೋಡಿ ಕಣ್ತುಂಬಿಕೊಳ್ಳಲಿ’ ಎಂದು ತಿಳಿಸಿದರು.

16 ಜಿಲ್ಲಾಧ್ಯಕ್ಷರ ಬದಲಾವಣೆಗೆ ಸಿದ್ಧತೆ

ಬೆಂಗಳೂರು: ರಾಜ್ಯದ 16 ಜಿಲ್ಲೆಗಳ ಕಾಂಗ್ರೆಸ್‌ ಅಧ್ಯಕ್ಷರನ್ನು ಬದಲಾವಣೆ ಮಾಡಲು ತೀರ್ಮಾನಿಸಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಿಳಿಸಿದರು.

ಅನೇಕ ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ಮಾಡಲು ರಾಜ್ಯ ಹಾಗೂ ರಾಷ್ಟ್ರಮಟ್ಟದ ನಾಯಕರನ್ನು ಪ್ರತಿ ಜಿಲ್ಲೆಗೆ ಕಳುಹಿಸಿ ಪರಿಶೀಲನೆ ಮಾಡಿ ಆಯ್ಕೆ ಮಾಡಲಾಗುತ್ತಿದೆ. ನಾನು ಕೂಡ ಒಂದು ತಂಡ ಕಳುಹಿಸಿದ್ದೆ. ಆದರೆ ಹೈಕಮಾಂಡ್ ನಾಯಕರು, ದೆಹಲಿಯಿಂದಲೇ ತಂಡ ಬರಲಿದೆ ಎಂದು ಹೇಳಿದ ಹಿನ್ನೆಲೆಯಲ್ಲಿ ನಾನು ಈ ಕೆಲಸವನ್ನು ತಾತ್ಕಾಲಿಕವಾಗಿ ನಿಲ್ಲಿಸಿದ್ದೇನೆ. ಈಗಿರುವ ಜಿಲ್ಲಾಧ್ಯಕ್ಷರ ಪೈಕಿ ಅನೇಕರು ಅನೇಕ ವರ್ಷಗಳಿಂದ ಅಧಿಕಾರದಲ್ಲಿದ್ದಾರೆ. ಮತ್ತೆ ಕೆಲವರು ನಿಗಮ ಮಂಡಳಿ ಅಧ್ಯಕ್ಷರಾಗಿದ್ದಾರೆ. ಹೀಗಾಗಿ ಸುಮಾರು 16 ಜಿಲ್ಲೆಗಳ ಅಧ್ಯಕ್ಷರ ಬದಲಾವಣೆ ಮಾಡಲು ತೀರ್ಮಾನಿಸಿದ್ದೇನೆ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಜಿ ರಾಮ್‌ ಜಿ: ಈಗ ಎಚ್ಡಿಕೆಗೆ ಡಿಕೆಶಿ ಸವಾಲ್‌
ಜಿ ರಾಮ್‌ ಜಿ ವಿರುದ್ಧ ಕೈ ಹೋರಾಟ ಶುರು