60 ಕೈ ಶಾಸಕರು ಬಿಜೆಪಿ ಸೇರುವ ಯತ್ನಾಳ ಹೇಳಿಕೆ ಬಾಲಿಶ : ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌

Nirupama ks | Published : Jan 20, 2025 11:54 AM

ಕಾಂಗ್ರೆಸ್‌ನ 60 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಬಾಲಿಶ. 60 ಮಂದಿಯಲ್ಲ ಆರು ಮಂದಿ ಕೂಡ ಸೇರುವುದಿಲ್ಲ. ಬಿಜೆಪಿ, ಜೆಡಿಎಸ್‌ ಶಾಸಕರೇ 25 ಮಂದಿ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಬೆಂಗಳೂರು : ಕಾಂಗ್ರೆಸ್‌ನ 60 ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿಕೆ ಬಾಲಿಶ. 60 ಮಂದಿಯಲ್ಲ ಆರು ಮಂದಿ ಕೂಡ ಸೇರುವುದಿಲ್ಲ. ಬಿಜೆಪಿ, ಜೆಡಿಎಸ್‌ ಶಾಸಕರೇ 25 ಮಂದಿ ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯಲ್ಲಿ ಆಂತರಿಕ ಕಚ್ಚಾಟ ಹೆಚ್ಚಾಗಿದೆ. ವಿಜಯೇಂದ್ರ, ಯತ್ನಾಳ್‌, ರಮೇಶ್‌ ಜಾರಕಿಹೊಳಿ ಒಬ್ಬರಿಗೊಬ್ಬರು ಏಕವಚನದಲ್ಲಿ ಮಾತನಾಡುತ್ತಿದ್ದಾರೆ. ಮೊದಲು ಅವರು ತಮ್ಮ ಪಕ್ಷವನ್ನು ಸರಿಪಡಿಸಿಕೊಳ್ಳಲಿ ಎಂದು ತಿರುಗೇಟು ನೀಡಿದರು.

ಇದೇ ವೇಳೆ ಬಿಜೆಪಿ ಹಾಗೂ ಜೆಡಿಎಸ್‌ನಿಂದ ಬರಲು 25 ಮಂದಿ ಶಾಸಕರು ಸಿದ್ಧರಿದ್ದಾರೆ ಎಂಬ ಹೇಳಿಕೆಗೆ ಈಗಲೂ ಬದ್ಧ ಎಂದು ಪುನರುಚ್ಚರಿಸಿದ ಅವರು, ಕೆಲವು ಕಡೆ ನಮ್ಮ ಪಕ್ಷದ ಅಭ್ಯರ್ಥಿಗಳು ದುರ್ಬಲರಾಗಿದ್ದು, ಅಂಥ ಕ್ಷೇತ್ರಗಳಿಗೆ ಸೂಕ್ತ ಸಂದರ್ಭದಲ್ಲಿ ಬಿಜೆಪಿ, ಜೆಡಿಎಸ್‌ ಶಾಸಕರನ್ನು ಕರೆದುಕೊಳ್ಳುತ್ತೇವೆ ಎಂದು ಹೇಳಿದರು.

ಬಿಜೆಪಿಯಲ್ಲಿನ ಆಂತರಿಕ ಕಚ್ಚಾಟದಿಂದ ಅಲ್ಲಿನ ಶಾಸಕರು ಬೇಸತ್ತಿದ್ದಾರೆ. ಹೀಗಾಗಿ ಮುಹೂರ್ತ ಕೂಡಿ ಬಂದಾಗ ಸೂಕ್ತ ಸಮಯದಲ್ಲಿ ಬಿಜೆಪಿ, ಜೆಡಿಎಸ್‌ ಶಾಸಕರು ಕಾಂಗ್ರೆಸ್‌ಗೆ ಬರಲಿದ್ದಾರೆ. ನಾವೇನು ಆಪರೇಷನ್‌ ಹಸ್ತಕ್ಕೆ ಪ್ರಯತ್ನ ಮಾಡುವುದಿಲ್ಲ. ಯಾವ್ಯಾವ ಶಾಸಕರು ನಮ್ಮೊಂದಿಗೆ ಇದ್ದಾರೆ ಎಂಬುದು ಸಹ ಅವರಿಗೆ ಗೊತ್ತಿದೆ. ಅವರೆಲ್ಲ ಯಾವುದೇ ಬೇಡಿಕೆ ಇಲ್ಲದೆ ಪಕ್ಷಕ್ಕೆ ಬರಲು ಸಿದ್ಧರಿದ್ದು, ಪರಿಶೀಲನೆ ಮಾಡಿ ಅವರನ್ನು ಕರೆಸಿಕೊಳ್ಳುತ್ತೇವೆ ಎಂದು ಹೇಳಿದರು.