ದಿಲ್ಲಿಯಲ್ಲಿ ಬಿಜೆಪಿ ಲಿಂಗಾಯತ ನಾಯಕರ ಸಭೆ - ಸೋಮಣ್ಣ ಗೃಹಪ್ರವೇಶ ನಿಮಿತ್ತ ದಿಲ್ಲಿಗೆ ಬಂದಿದ್ದ ನಾಯಕರು

Published : Feb 11, 2025, 11:11 AM IST
bjp flag

ಸಾರಾಂಶ

ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ದೆಹಲಿ ನಿವಾಸದಲ್ಲಿ ಸೋಮವಾರ ಗೃಹಪ್ರವೇಶದ ನೆಪದಲ್ಲಿ ಬಿಜೆಪಿಯ ಕೆಲ ನಾಯಕರು, ಅದರಲ್ಲೂ ಲಿಂಗಾಯತ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ನವದೆಹಲಿ :ಕೇಂದ್ರ ರೇಲ್ವೆ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಅವರ ದೆಹಲಿ ನಿವಾಸದಲ್ಲಿ ಸೋಮವಾರ ಗೃಹಪ್ರವೇಶದ ನೆಪದಲ್ಲಿ ಬಿಜೆಪಿಯ ಕೆಲ ನಾಯಕರು, ಅದರಲ್ಲೂ ಲಿಂಗಾಯತ ನಾಯಕರು ಪ್ರತ್ಯೇಕ ಸಭೆ ನಡೆಸಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.

ಗೃಹಪ್ರವೇಶ ನಿಮಿತ್ತ ಬಿಜೆಪಿಯ ಭಿನ್ನರ ಗುಂಪಿನ ನಾಯಕರ ಸಹಿತ ಹಲವು ಮುಖಂಡರು ಸೋಮಣ್ಣ ನಿವಾಸಕ್ಕೆ ಭೇಟಿ ನೀಡಿದ್ದರು. ಬಸನಗೌಡ ಪಾಟೀಲ್‌ ಯತ್ನಾಳ್‌ ಹಾಗೂ ಕುಮಾರ್‌ ಬಂಗಾರಪ್ಪ ಅವರು ಹೈದರಾಬಾದ್‌ಗೆ ಹೊರಟ ಬಳಿಕ ಸೋಮಣ್ಣ ನಿವಾಸದಲ್ಲಿ ಲಿಂಗಾಯತ ನಾಯಕರ ಸಭೆ ನಡೆಯಿತು. ಸಂಸದ ಬಸವರಾಜ ಬೊಮ್ಮಾಯಿ, ಶಾಸಕರಾದ ಅರವಿಂದ ಬೆಲ್ಲದ್, ಬಿ.ಪಿ.ಹರೀಶ್‌, ಮಾಜಿ ಸಚಿವರಾದ ಮುರುಗೇಶ್‌ ನಿರಾಣಿ, ಶ್ರೀಮಂತ ಪಾಟೀಲ್, ಮುಖಂಡ ಎನ್‌.ಆರ್‌.ಸಂತೋಷ್‌ ಸಭೆಯಲ್ಲಿ ಭಾಗಿಯಾಗಿದ್ದರು. ಪಕ್ಷದಲ್ಲಿ ಆಗುತ್ತಿರುವ ಬೆಳವಣಿಗೆಗಳು, ಹೈಕಮಾಂಡ್‌ ನಿಲುವು ಸೇರಿ ಹಲವು ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ತಿಳಿದು ಬಂದಿದೆ.

ರಾಜಕೀಯ ಚರ್ಚೆ ನಡೆದಿಲ್ಲ-ನಿರಾಣಿ: ಸಭೆ ಬಳಿಕ ಮಾತನಾಡಿದ ಮುರುಗೇಶ್ ನಿರಾಣಿ, ದೆಹಲಿಯಲ್ಲಿ ಇಂಡಿಯಾ ಎನರ್ಜಿ ವೀಕ್ ಕಾರ್ಯಕ್ರಮ ನಡೆಯುತ್ತಿದೆ. ನಮ್ಮ ಕಂಪನಿಯ ಸ್ಟಾಲ್ ಹಾಕಿದ್ದೇವೆ. ಹಾಗಾಗಿ, ದೆಹಲಿಗೆ ಬಂದಿದ್ದೇನೆ. ಇದೇ ವೇಳೆ, ಸೋಮಣ್ಣನವರ ಗೃಹಪ್ರವೇಶ ಇತ್ತು. ಕೇವಲ ಲಿಂಗಾಯತರಿಗೆ ಮಾತ್ರ ಆಹ್ವಾನ ನೀಡಿರಲಿಲ್ಲ. ಎಲ್ಲಾ ಸಮಾಜದ ಬಿಜೆಪಿ ನಾಯಕರಿಗೆ ಆಹ್ವಾನ ನೀಡಿದ್ದರು. ನಾವೆಲ್ಲ ಪೂಜೆಯಲ್ಲಿ ಭಾಗಿಯಾಗಿ ಊಟ ಮಾಡಿ ಬಂದೆವು. ಸೋಮಣ್ಣ ನಿವಾಸದಲ್ಲಿ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸಮಜಾಯಿಷಿ ನೀಡಿದರು.

ರಾಜ್ಯಾಧ್ಯಕ್ಷ ವಿಜಯೇಂದ್ರ ಗೈರು ಹಾಜರಿ ಕುರಿತು ಪ್ರತಿಕ್ರಿಯಿಸಿ, ನಮ್ಮ ರಾಜ್ಯಾಧ್ಯಕ್ಷರು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ರಾಜ್ಯಾಧ್ಯಕ್ಷರಿಗೆ ಆಹ್ವಾನ ಕೊಟ್ಟಿದ್ದಾರೋ, ಇಲ್ಲವೋ ಗೊತ್ತಿಲ್ಲ. ಸಂಜೆವರೆಗೂ ವಿಜಯೇಂದ್ರ ಅವರು ಸೋಮಣ್ಣ ಅವರ ನಿವಾಸಕ್ಕೆ ಬಂದಿರಲಿಲ್ಲ. ಬಹುಶ: ಕೆಲಸದ ಒತ್ತಡದಿಂದ ಕಾರ್ಯಕ್ರಮಕ್ಕೆ ಬಾರದಿರಬಹುದು ಎಂದರು.

ಪಕ್ಷದಲ್ಲಿನ ಭಿನ್ನಮತ ಕುರಿತು ಪ್ರತಿಕ್ರಿಯಿಸಿ, ಪಕ್ಷದಲ್ಲಿ ಸಣ್ಣಪುಟ್ಟ ಅಸಮಾಧಾನ ಸಹಜ. ಎರಡೂ ಕಡೆಯವರು ತಪ್ಪು ತಿದ್ದಿಕೊಂಡು ಹೋಗಬೇಕು. ವಿಜಯೇಂದ್ರ ಕೂಡ ತಮ್ಮ ತಪ್ಪು ತಿದ್ದಿಕೊಳ್ಳಬೇಕು, ಇನ್ನೊಂದು ಗುಂಪು ಕೂಡ ತಮ್ಮ ತಪ್ಪು ತಿದ್ದಿಕೊಳ್ಳಬೇಕು. ಎಲ್ಲರೂ ಪ್ರತಿಷ್ಠೆ ಬಿಟ್ಟು ಕೆಲಸ ಮಾಡಿಕೊಂಡು ಹೋಗಬೇಕು. ಯಾರಿಗೂ ತೊಂದರೆಯಾಗದಂತೆ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತಾರೆ. ಹೈಕಮಾಂಡ್ ನವರು ರಾಜ್ಯಾಧ್ಯಕ್ಷರನ್ನಾಗಿ ಯಾರನ್ನು ಘೋಷಣೆ ಮಾಡುತ್ತಾರೋ ಅವರ ಜೊತೆ ಕೆಲಸ ಮಾಡಿಕೊಂಡು ಹೋಗಬೇಕು ಎಂದು ಹೇಳಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಅಧಿಕಾರಕ್ಕಾಗಿ ಅಪವಿತ್ರ ರಾಜಕೀಯ ಮೈತ್ರಿ - ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ವೈರಿಗಳ ಮಿಲನ
ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ವಿವಾದ