ಬರ ಸ್ಥಿತಿ ವಿವರಣೆಗೆ ಸರ್ವಪಕ್ಷ ನಿಯೋಗ : ಡಿಕೆಶಿ

Published : Jul 26, 2026, 11:26 AM IST
DK Shivakumar

ಸಾರಾಂಶ

ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರದ ಬಳಿ ಚರ್ಚಿಸಲು ಸರ್ವಪಕ್ಷ ನಿಯೋಗವನ್ನು ಕರೆದುಕೊಂಡು ಹೋಗಲಾಗುವುದು. ಈ ಸಂಬಂಧ ದೆಹಲಿಯಲ್ಲಿ ಸೋಮವಾರ ಸಂಸದರ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

 ಚಿತ್ರದುರ್ಗ :  ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಕೇಂದ್ರ ಸರ್ಕಾರದ ಬಳಿ ಚರ್ಚಿಸಲು ಸರ್ವಪಕ್ಷ ನಿಯೋಗವನ್ನು ಕರೆದುಕೊಂಡು ಹೋಗಲಾಗುವುದು. ಈ ಸಂಬಂಧ ದೆಹಲಿಯಲ್ಲಿ ಸೋಮವಾರ ಸಂಸದರ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.

ಬರಪೀಡಿತ ಪ್ರದೇಶಗಳ ವೀಕ್ಷಣೆಗಾಗಿ ಶನಿವಾರ ಚಿತ್ರದುರ್ಗ ಜಿಲ್ಲೆ ಹಿರಿಯೂರಿಗೆ ಆಗಮಿಸಿದ ಸಿಎಂ, ಹಿರಿಯೂರು ತಾಲೂಕಿನ ಯರಬಳ್ಳಿ ಹಾಗೂ ತಾಳವಟ್ಟಿ ಗ್ರಾಮದಲ್ಲಿನ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಸಚಿವ ಈಶ್ವರ್ ಖಂಡ್ರೆ ಈ ವೇಳೆ ಉಪಸ್ಥಿತರಿದ್ದರು.

ಬಳಿಕ, ಚಿತ್ರದುರ್ಗದ ಮುರುಘಾಮಠದ ಅನುಭವ ಮಂಟಪದಲ್ಲಿ ವಿಭಾಗಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ ಮೋದಿ ಅವರು ಎಲ್ ನೀನೋ ಪರಿಣಾಮದ ಬಗ್ಗೆ ಮಾತನಾಡಿದ್ದಾರೆ. ಈ ಎಚ್ಚರಿಕೆಯನ್ನು ನಾವು ಕಡೆಗಣಿಸಬಾರದು. ನಾನೂ ಪ್ರಧಾನಿಯವರಿಗೆ ರಾಜ್ಯದ ಬರ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದೇನೆ. ಬರದ ಬಗ್ಗೆ ವಸ್ತುಸ್ಥಿತಿ ತಿಳಿಸಲು ಡಿಸಿಎಂ ಅವರು ಪ್ರಧಾನಿಯವರ ಬಳಿಗೆ ಶೀಘ್ರವೇ ನಿಯೋಗವೊಂದನ್ನು ಕಳುಹಿಸಲಿದ್ದಾರೆ ಎಂದರು.

ರಾಜ್ಯದಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆ ಮತ್ತು ವಿವಿಧ ಪ್ರಾದೇಶಿಕ ವಿಚಾರಗಳ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದೆ. ಪ್ರಧಾನಿ ಹಾಗೂ ಕೇಂದ್ರ ಗೃಹ ಸಚಿವರಿಗೆ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ಪರಿಸ್ಥಿತಿ ಪರಿಶೀಲಿಸಲು ಶೀಘ್ರದಲ್ಲೇ ಕೇಂದ್ರದ ತಂಡ ಆಗಮಿಸುವ ನಿರೀಕ್ಷೆ ಇದೆ ಎಂದರು.

ಕುಡಿವ ನೀರು ಹಾಗೂ ಬರ ಪರಿಹಾರಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ. ಜಿಲ್ಲಾಡಳಿತದ ಬಳಿ ಸಾಕಷ್ಟು ಅನುದಾನ ಲಭ್ಯವಿದೆ. ಬೆಳಗಾವಿ ಅಧಿವೇಶನದಲ್ಲಿ ತೆಗೆದುಕೊಂಡ ಐತಿಹಾಸಿಕ ತೀರ್ಮಾನದಂತೆ ಬರ ಪರಿಹಾರ ಹಾಗೂ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಸಕರ ಅಧ್ಯಕ್ಷತೆಯ ಸಭೆಗಳಲ್ಲಿ 1 ಕೋಟಿ ರು.ವರೆಗೆ ವೆಚ್ಚ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಆಗಸ್ಟ್‌ನಲ್ಲಿ ಅಧಿವೇಶನ:

ವಿಧಾನಸಭೆ ಅಧಿವೇಶನ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, ಆಗಸ್ಟ್ 2ನೇ ವಾರ ಅಥವಾ 6ನೇ ತಾರೀಕು ವಿಧಾನಸಭೆಯ ಅಧಿವೇಶನ ನಡೆಯಬಹುದು. ಸೂಕ್ತ ದಿನಾಂಕ ನಿಗದಿಪಡಿಸಲು ಈಗಾಗಲೇ ರಾಜ್ಯಪಾಲರ ಕಚೇರಿಗೆ ಮಾಹಿತಿ ರವಾನಿಸಲಾಗಿದೆ. ಶೀಘ್ರದಲ್ಲೇ ದಿನಾಂಕ ತೀರ್ಮಾನವಾಗಲಿದೆ. ಎಸ್‌ಐಆರ್ ಕಾರಣದಿಂದಾಗಿ ಅಧಿವೇಶನ ಮುಂದೂಡಬೇಕಾದ ಪರಿಸ್ಥಿತಿ ಎದುರಾಗಿತ್ತು. ಈಗ ಎಸ್‌ಐಆರ್‌ ಪ್ರಕ್ರಿಯೆ ಒಂದು ಹಂತಕ್ಕೆ ಬಂದಿದೆ ಎಂದರು.

ವದ್ದೀಕೆರೆ ಸಿದ್ದೇಶ್ವರಸ್ವಾಮಿ ದೇಗುಲಕ್ಕೆ ಭೇಟಿ:

ಬರ ಪರಿಶೀಲನೆಗೆ ಆಗಮಿಸಿದ್ದ ಸಿಎಂ, ಹಿರಿಯೂರು ತಾಲೂಕಿನ ಇತಿಹಾಸ ಪ್ರಸಿದ್ಧ ವದ್ದೀಕೆರೆ ಸಿದ್ದೇಶ್ವರಸ್ವಾಮಿ ದೇಗುಲಕ್ಕೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ, ದೇವಸ್ಥಾನದ ಜೀರ್ಣೋದ್ದಾರಕ್ಕೆ 25 ಕೋಟಿ ರು. ಅನುದಾನ ಬಿಡುಗಡೆ ಮಾಡುವಂತೆ ಗ್ರಾಮಸ್ಥರು ಸಿಎಂಗೆ ಮನವಿ ಮಾಡಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಪ್ರಶ್ನೆಪತ್ರಿಕೆ ಲೀಕ್‌ಗೆ 10 ವರ್ಷ ಜೈಲು, ₹10 ಕೋಟಿ ದಂಡ : ನಾಳೆ ಬಿಲ್‌ ಮಂಡನೆ
ಬುಧವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆ?