ಸಿದ್ದು ಸರ್ಕಾರದ ವಿರುದ್ಧ ಒಗ್ಗೂಡಿ ಹೋರಾಡಿ: ಶಾ

KannadaprabhaNewsNetwork |  
Published : Jun 21, 2025, 12:49 AM ISTUpdated : Jun 21, 2025, 07:18 AM IST
ಅಮಿತ್ ಶಾ | Kannada Prabha

ಸಾರಾಂಶ

ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನಕ್ಕೆ ಅವಕಾಶ ನೀಡದೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಒಗ್ಗಟ್ಟಿನ ಹೋರಾಟ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ.

 ಬೆಂಗಳೂರು :  ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನಕ್ಕೆ ಅವಕಾಶ ನೀಡದೆ ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಒಗ್ಗಟ್ಟಿನ ಹೋರಾಟ ಕೈಗೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳ ಮೂಲಕ ಹಲವು ಅವಕಾಶಗಳನ್ನು ನೀಡುತ್ತಿರುವಾಗ ಅದನ್ನು ಪ್ರತಿಪಕ್ಷವಾಗಿ ಬಿಜೆಪಿ ಸಮರ್ಥವಾಗಿ ಬಳಸಿಕೊಂಡು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವಂತೆ ಪರಿಣಾಮಕಾರಿ ಹೋರಾಟ ನಡೆಸಬೇಕು ಎಂದು ಅವರು ತೀಕ್ಷ್ಣವಾಗಿ ಹೇಳಿದ್ದಾರೆ.

ಈ ಮೂಲಕ ಅಮಿತ್ ಶಾ ಅವರು ಈಗ ರಾಜ್ಯ ಬಿಜೆಪಿ ನಡೆಸುತ್ತಿರುವ ಹೋರಾಟಗಳು ನಿರೀಕ್ಷಿತ ಮಟ್ಟದಲ್ಲಿ ಇಲ್ಲ ಎಂಬುದನ್ನು ಪರೋಕ್ಷವಾಗಿ ತಿಳಿಸಿದ್ದಾರೆ.

ನಗರದ ಹೊರವಲಯದಲ್ಲಿನ ಬಿಜಿಎಸ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಉದ್ಘಾಟನೆ ನಿಮಿತ್ತ ಬೆಂಗಳೂರಿಗೆ ಆಗಮಿಸಿದ್ದ ಅಮಿತ್ ಶಾ ಅವರನ್ನು ಶುಕ್ರವಾರ ಬೆಳಗ್ಗೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್‌.ಅಶೋಕ್‌ ಹಾಗೂ ಉಪನಾಯಕ ಅರವಿಂದ ಬೆಲ್ಲದ ಅವರು ಭೇಟಿಯಾಗಿ ಸುಮಾರು ಅರ್ಧ ಗಂಟೆ ಕಾಲ ಸಮಾಲೋಚನೆ ನಡೆಸಿದರು.ಪ್ರಸಕ್ತ ರಾಜ್ಯ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದುಕೊಂಡ ಅವರು, ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳೇ ಮುಂದೆ ಬಿಜೆಪಿಗೆ ಮೆಟ್ಟಿಲುಗಳು ಎಂಬುದನ್ನು ಮರೆಯಬೇಡಿ ಎಂಬ ಕಿವಿಮಾತು ಹೇಳಿದರು ಎನ್ನಲಾಗಿದೆ. 

ಹೋರಾಟಕ್ಕೆ ಸೂಚನೆ-ವಿಜಯೇಂದ್ರ:

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯೇಂದ್ರ, ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ನಮ್ಮ ಹೋರಾಟ ದ್ವಿಗುಣಗೊಳಿಸಬೇಕೆಂಬ ವಿಷಯದಲ್ಲಿ ಅಮಿತ್ ಶಾ ಅವರು ಕೆಲ ಸಲಹೆ, ಸೂಚನೆಗಳನ್ನು ನೀಡಿದ್ದಾರೆ ಎಂದು ತಿಳಿಸಿದರು.ನಾನು, ಬಸವರಾಜ ಬೊಮ್ಮಾಯಿ, ಆರ್.ಅಶೋಕ್, ಅರವಿಂದ ಬೆಲ್ಲದ್ ಅವರ ಜೊತೆಗೂಡಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇವೆ. ರಾಜ್ಯ ರಾಜಕಾರಣ, ಪ್ರಸ್ತುತ ಬೆಳವಣಿಗೆಗಳ ಕುರಿತು ಚರ್ಚಿಸಿದ್ದೇವೆ ಎಂದು ಹೇಳಿದರು.

ಇದೇ ವೇಳೆ ಪಕ್ಷದ ಅತೃಪ್ತ ಮುಖಂಡರೊಂದಿಗೆ ಮಾತುಕತೆ ಕುರಿತ ಪ್ರಶ್ನೆಗೆ ಉತ್ತರಿಸಿದ ವಿಜಯೇಂದ್ರ, ಪಕ್ಷದೊಳಗಿನ ಸಣ್ಣಪುಟ್ಟ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿದ್ದೇವೆ ಎಂದರು.

PREV
Read more Articles on

Recommended Stories

ಛಲವಾದಿಗೆ ಘೇರಾವ್‌ ಕೇಸ್‌ ಹಕ್ಕು ಬಾಧ್ಯತಾ ಸಮಿತಿಗೆ
ವಿದ್ಯುತ್‌ ಸ್ಮಾರ್ಟ್‌ ಮೀಟರ್‌ ಏನು ಚಿನ್ನದ್ದಾ? : ವಿಪಕ್ಷ ಕಿಡಿ