ಕನ್ನಡಪ್ರಭ ವಾರ್ತೆ ಮಂಡ್ಯ
ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ತಾಲೂಕಿನ ತಗ್ಗಹಳ್ಳಿಯಲ್ಲಿ ರಾಜ್ಯಸಭೆ ಪ್ರವೇಶಕ್ಕೆ ದೇವೇಗೌಡರಿಗೆ ಬಿಜೆಪಿ ಟಿಕೆಟ್ ಸಿಗದ ಬಗ್ಗೆ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಟಿಕೆಟ್ ಕೊಡುವಂತೆ ದೇವೇಗೌಡರು ಯಾರ ಬಳಿಯೂ ಅರ್ಜಿ ಹಾಕಿರಲಿಲ್ಲ. ಬಿಜೆಪಿ ಪಕ್ಷದಲ್ಲೇ ೬೦ ಜನ ಶಾಸಕರಿರುವಾಗ ನಾವು ಕೇಳುವುದು ಎಷ್ಟರಮಟ್ಟಿಗೆ ಸರಿ. ೭೦ ವರ್ಷದ ಗೌಡರ ರಾಜಕೀಯ ಜೀವನದಲ್ಲಿ ಕಾಂಗ್ರೆಸ್ ಹೇಗೆ ನಡೆಸಿಕೊಂಡಿದೆ ಎನ್ನುವುದು ಗೊತ್ತಿದೆ. ಈಗ ದೇವೇಗೌಡರ ಬಗ್ಗೆ ಅನುಕಂಪದ ಮಾತುಗಳನ್ನಾಡುತ್ತಿದ್ದಾರೆ. ಮುಂಬರುವ ಚುನಾವಣೆ ಬಗ್ಗೆ ಮೈತ್ರಿಪಕ್ಷದ ಬಗ್ಗೆ ಅವರಿಗೆ ಆತಂಕವಿದೆ. ಅದಕ್ಕಾಗಿ ಮೈತ್ರಿಯಲ್ಲಿ ಬಿರುಕು ಮೂಡುವಂತೆ ಮಾಡಲು ಒಕ್ಕಲಿಗರಿಗೆ ಅನ್ಯಾಯ ಎಂದು ಬೊಗಳೆ ಬಿಡುತ್ತಿದ್ದಾರೆ ಎಂದು ದೂಷಿಸಿದರು.
ಈ ಹಿಂದೆಯೂ ದೇವೇಗೌಡರು ಕಾಂಗ್ರೆಸ್ ಬೆಂಬಲದಿಂದ ರಾಜ್ಯಸಭೆಗೆ ಹೋಗಿರಲಿಲ್ಲ. ದೇವೇಗೌಡರ ವಿರುದ್ಧ ಮತ್ತೊಬ್ಬ ಅಭ್ಯರ್ಥಿ ನಿಲ್ಲುವ ಅವಕಾಶ ಇರಲಿಲ್ಲ. ಹಾಗಾಗಿ ಅವರನ್ನು ಅನಿವಾರ್ಯವಾಗಿ ಬೆಂಬಲಿಸಬೇಕಾಯಿತು. ದೇವೇಗೌಡರದ್ದು ಹೋರಾಟದ ಬದುಕು. ಅಧಿಕಾರ ಕೇಳಿಕೊಂಡು ಇನ್ನೊಬ್ಬರ ಮನೆ ಬಾಗಿಲಿಗೆ ಎಂದೂ ಹೋಗಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಪ್ರಧಾನಿ ಸ್ಥಾನವನ್ನೇ ಬಿಟ್ಟು ಬಂದರು ಎಂದರು.ರಾಜ್ಯದಲ್ಲಿ ಒಕ್ಕಲಿಗ ಮುಖ್ಯಮಂತ್ರಿ ಇರಬೇಕಾದರೆ ರಾಜ್ಯಸಭೆ ತೆಗೆದುಕೊಂಡು ಏನು ಮಾಡುತ್ತೀರಾ. ಏನು ಮಾಡುವರೆಂದು ಎರಡು ತಿಂಗಳು ಕಾದು ನೋಡೋಣ ಎಂದ ಕುಮಾರಸ್ವಾಮಿ, ನಾನು ಸಲಹೆ ನೀಡುವಷ್ಟು ದೊಡ್ಡವನಲ್ಲ. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಏನು ಹರಿದಿದ್ದಾರೆ ಎಂದು ಅವರೇ (ಡಿ.ಕೆ.ಶಿವಕುಮಾರ್) ಹೇಳಿದ್ದಾರೆ. ಎಲ್ಲದಕ್ಕೂ ಸಾಕ್ಷಿ ಗುಡ್ಡೆ ಕೇಳುತ್ತಾರೆ. ಹಾಗಾಗಿ ನಾನೇನು ಹರಿದಿಲ್ಲ, ನಮ್ಮ ಬಳಿ ಏನು ಸಲಹೆ ಕೇಳುತ್ತಾರೆ ಎಂದು ವ್ಯಂಗ್ಯವಾಡಿದರಲ್ಲದೇ, ‘ಅತಿ ವಿನಯಂ ಧೂರ್ತ ಲಕ್ಷಣಂ’ ಎಂದು ಮೂದಲಿಸಿದರು.
ವಿಧಾನ ಪರಿಷತ್ಗೆ ಜೆಡಿಎಸ್ನಿಂದ ಅಭ್ಯರ್ಥಿ ಹಾಕಿರುವ ವಿಚಾರದ ಬಗ್ಗೆ ಕೇಳಿದಾಗ, ನಮಗೂ ಎರಡು ಮತ ಬೇಕು, ಕಾಂಗ್ರೆಸ್ನವರಿಗೂ ಎರಡು ಮತ ಬೇಕು. ಇದರಲ್ಲಿ ಯಾವುದೇ ಗೇಮ್ ಪ್ಲಾನ್ ಇಲ್ಲ. ನಾವು ಬಿಜೆಪಿಯಿಂದ ಉಚ್ಚಾಟನೆಯಾಗಿರುವ ಯತ್ನಾಳ್ ಅವರನ್ನು ಕೇಳುತ್ತೇವೆ. ಅವರಿಗೆ ಹಣ ಬಲ ಇದೆ, ನೋಡೋಣ ಏನಾಗುತ್ತೆ ಎಂದರು.
ತಾಲೂಕಿನ ತಗ್ಗಹಳ್ಲಿ ಗ್ರಾಮದಲ್ಲಿ ೩೨.೫೦ ಲಕ್ಷ ರು. ಶಾಲಾ ಕಟ್ಟಡದ ಉದ್ಘಾಟನೆ ನೆರವೇರಿಸಲಾಗಿದೆ. ಚೀರನಹಳ್ಳಿಯಲ್ಲೂ ೩೨ ಲಕ್ಷ ಶಾಲಾ ಕೊಠಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಿದ್ದೇವೆ. ಕೀಲಾರ ಗ್ರಾಮದ ಸುತ್ತಮುತ್ತಲ ಸರ್ಕಾರಿ ಶಾಲಾ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆಯನ್ನು ಒದಗಿಸಲಾಗುತ್ತಿದೆ. ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಲಾಗುತ್ತಿದ್ದು, ಜೊತೆಗೆ ಜಿಲ್ಲೆಯ ರಸ್ತೆಗಳ ನಿರ್ಮಾಣಕ್ಕೆ ಸಿಎಸ್ಆರ್ ನಿಧಿಯಿಂದ ೫೪ ಕೋಟಿ ರು. ಬಿಡುಗಡೆ ಮಾಡುತ್ತಿರುವುದಾಗಿ ಹೇಳಿದರು.