ಕನ್ನಡಪ್ರಭ ವಾರ್ತೆ, ತುಮಕೂರು ಜಿಲ್ಲಾ ಬಾಲಭವನದ ಅಭಿವೃದ್ಧಿಗೆ ಪೂರಕವಾದ ಹಲವು ಕಾಮಗಾರಿಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿ.ಪಂ. ಸಿಇಓ ಪ್ರಭು ಅವರು ಸೂಚಿಸಿದರು. ಅವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಭೆ, ಜಿಲ್ಲಾ ಹಾಗೂ ತಾಲೂಕು ಶಿಶು ಪಾಲನಾ ಕೇಂದ್ರಗಳ ಸಮಿತಿ ಸಭೆ, ಸ್ತ್ರೀಶಕ್ತಿ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿದರು. ಜಿಲ್ಲೆಯ ತಾಲೂಕುಗಳ ನಗರ ಮತ್ತು ಗ್ರಾಮೀಣಾ ಮಕ್ಕಳಿಗೆ ಪ್ರತ್ಯೇಕವಾಗಿ ಕಾರ್ಯಕ್ರಮ/ಚಟುವಟಿಕೆಗಳನ್ನು ಆಯೋಜಿಸುವ ಸಂಬಂಧ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಲು ಸೂಚಿಸಿದರು. ಮಕ್ಕಳ ಗ್ರಾಮಸಭೆಗಳಲ್ಲಿ ಕಡ್ಡಾಯವಾಗಿ ಮಕ್ಕಳು ಹಾಜರಿರಲು ಅಗತ್ಯ ಕ್ರಮವಹಿಸುವಂತೆ ತಿಳಿಸಿದರು ಈ ಸಂದರ್ಭಗಳಲ್ಲಿ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಾಟದ ಬಗ್ಗೆ ಅರಿವು ಮೂಡಿಸುವಂತೆ ಹಾಗೂ ಇಂತಹ ಸಭೆಗಳಲ್ಲಿ ಮಕ್ಕಳ ಸಮಸ್ಯೆಗಳನ್ನು ಆಲಿಸಿ ಸದರಿ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವಂತೆ ತಿಳಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲಿಸಲಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಸಮರ್ಪಕವಾಗಿ ಪೂರಕ ಪೌಷ್ಠಿಕ ಆಹಾರ ವಿತರಣೆಗೆ ಯಾವುದೇ ರೀತಯ ವ್ಯತ್ಯಯ ಉಂಟಾಗದಂತೆ ಅಗತ್ಯ ಕ್ರಮವಹಿಸಲು ಸೂಚಿಸಿದರು. ಅಂಗನವಾಡಿ ಕೇಂದ್ರಗಳ ಮೂಲಭೂತ ಸೌಕರ್ಯಗಳು ಕುರಿತು ಚರ್ಚಿಸಿ ಜಿಲ್ಲೆಯಲ್ಲಿ ಅತೀ ಶೀಘ್ರವಾಗಿ ಬಾಡಿಗೆ ಕಟ್ಟಡದಲ್ಲಿ ನಡೆಯುವ ಕೇಂದ್ರಗಳನ್ನು ಎಲ್ಲಾ ಮೂಲಭೂತ ಸೌಲಭ್ಯಗಳನ್ನೊಳಗೊಂಡ ಸುಸಜ್ಜಿತ ಸ್ವಂತ ಅಂಗನವಾಡಿ ಕಟ್ಟಡಗಳಲ್ಲಿ ನಡೆಸಲು ಅಗತ್ಯ ಕ್ರಮಕೈಗೊಳ್ಳುವಂತೆ ತಿಳಿಸಿದರು. ಸಾಂತ್ವನ ಕೇಂದ್ರಗಳಲ್ಲಿ ಸಿಬ್ಬಂದಿಗಳು ಕಡ್ಡಾಯವಾಗಿ ದಿನದ 24 ಗಂಟೆ ಕಾರ್ಯನಿರ್ವಹಿಸುವಂತೆ ಸೂಚಿಸಿದರು. ಸಾಂತ್ವನ ಕೇಂದ್ರಗಳ ದೂರವಾಣಿ ಸಂಖ್ಯೆಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿಗಳಲ್ಲಿ ವ್ಯಾಪಕ ಪ್ರಚಾರ ಮಾಡಲು ಅಗತ್ಯ ಕ್ರಮವಹಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಿಗೆ ಸೂಚಿಸಿದರು. ಹಾಗೂ ಪ್ರತಿ ಸಾಂತ್ವನ ಕೇಂದ್ರದಲ್ಲಿ ದೂರವಾಣಿ ಸ್ಥಗಿತಗೊಳ್ಳದಂತೆ ಸೂಕ್ತ ಕ್ರಮಕೈಗೊಳ್ಳಲು ಸೂಚಿಸಿದರು. ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಂ.ಎಸ್. ಶ್ರೀಧರ್ ಅವರು ಸಭೆಯಲ್ಲಿ ಹಾಜರಿದ್ದ ಎಲ್ಲಾ ಅಧಿಕಾರಿ/ಅಧಿಕಾರೇತರ ಸದಸ್ಯರುಗಳನ್ನು ಸಭೆಗೆ ಸ್ವಾಗತಿಸಿ, ಸಭೆಯ ಕಾರ್ಯಕಲಾಪಗಳನ್ನು ನಡೆಸಿಕೊಡುವಂತೆ ಮನವಿ ಮಾಡಿಕೊಂಡರು. .ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಪವಿತ್ರ ವಂದಿಸಿದರು.