ರಾಜ್ಯ ಕಾಂಗ್ರೆಸ್‌ ಸರ್ಕಾರ ಕಿತ್ತಾಕಲು ಬಿವೈವಿ ಸಂಕಲ್ಪ

Published : Sep 11, 2026, 06:42 AM IST
Ballari Chalo BJP BY Vijayendra

ಸಾರಾಂಶ

ಭ್ರಷ್ಟಾಚಾರದ ವಿರುದ್ಧದ ನಮ್ಮ ಯುದ್ಧದ ಆರಂಭ ಎಂದು ಅಬ್ಬರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮನೆಯಲ್ಲಿ ಕೂರುವ ಪ್ರಶ್ನೆಯೇ ಇಲ್ಲ, ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಪರ್ಯಟನೆ ಮಾಡುತ್ತೇವೆ. ಈ ದರಿದ್ರ, ಭ್ರಷ್ಟ ಸರ್ಕಾರವನ್ನು ಕಿತ್ತು ಹಾಕುತ್ತೇವೆ ಎಂದು ಗುಡುಗಿದ್ದಾರೆ.

ಬಳ್ಳಾರಿ : ನಮ್ಮ ಈ ಪಾದಯಾತ್ರೆಯ ಸಮಾರೋಪ ಹೋರಾಟದ ಅಂತ್ಯವಲ್ಲ, ಭ್ರಷ್ಟಾಚಾರದ ವಿರುದ್ಧದ ನಮ್ಮ ಯುದ್ಧದ ಆರಂಭ ಎಂದು ಅಬ್ಬರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮನೆಯಲ್ಲಿ ಕೂರುವ ಪ್ರಶ್ನೆಯೇ ಇಲ್ಲ, ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಪರ್ಯಟನೆ ಮಾಡುತ್ತೇವೆ. ಈ ದರಿದ್ರ, ಭ್ರಷ್ಟ ಸರ್ಕಾರವನ್ನು ಕಿತ್ತು ಹಾಕುತ್ತೇವೆ ಎಂದು ಗುಡುಗಿದ್ದಾರೆ.

ಉರಿಬಿಸಿಲಿನ ತಾಪಕ್ಕೆ ಹೆಸರಾಗಿರುವ ಗಣಿನಾಡು ಬಳ್ಳಾರಿ ಗುರುವಾರ ಸಂಜೆ ನಡೆದ ಬೃಹತ್ ರಾಜಕೀಯ ಸಮಾವೇಶಕ್ಕೆ ಸಾಕ್ಷಿಯಾಯಿತು. ವಾಲ್ಮೀಕಿ ನಿಗಮದ 187 ಕೋಟಿ ರು. ವಾಪಸ್‌ಗೆ ಆಗ್ರಹಿಸಿ, ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಸೆ.1ರಂದು ರಾಯಚೂರು ಜಿಲ್ಲೆಯಲ್ಲಿ ಆರಂಭಗೊಂಡ ಬಳ್ಳಾರಿ ಚಲೋ ಪಾದಯಾತ್ರೆ, 187 ಕಿ.ಮೀ. ಕ್ರಮಿಸಿ 3 ಜಿಲ್ಲೆಗಳನ್ನು ಹಾದು ಸೆ.9ರಂದು ಬಳ್ಳಾರಿ ತಲುಪಿತ್ತು. ಗುರುವಾರ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ನಡೆದ ಅದ್ಧೂರಿ ಸಮಾರೋಪದೊಂದಿಗೆ ತೆರೆ ಕಂಡಿತು.

ಪಾದಯಾತ್ರೆಯುದ್ದಕ್ಕೂ ಮೊಳಗಿದ ಘೋಷಣೆ

ಪಾದಯಾತ್ರೆಯುದ್ದಕ್ಕೂ ಮೊಳಗಿದ ಘೋಷಣೆ, ಬಳ್ಳಾರಿಯ ಸಮಾರೋಪ ವೇದಿಕೆಯಲ್ಲೂ ಪ್ರತಿಧ್ವನಿಸಿದವು. ರಾಜ್ಯ ಸರ್ಕಾರದ ಆಡಳಿತ ವೈಫಲ್ಯವನ್ನು ಜನರ ಮುಂದಿಟ್ಟ ಬಿಜೆಪಿ ನಾಯಕರು, ಹೋರಾಟ ಮತ್ತಷ್ಟು ತೀವ್ರಗೊಳಿಸುವ ಸಂಕಲ್ಪ ವ್ಯಕ್ತಪಡಿಸಿದರು. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಬಳ್ಳಾರಿ ಚಲೋ ಪಕ್ಷದ ಸಂಘಟನಾ ಶಕ್ತಿ ಮತ್ತು ಕಾರ್ಯಕರ್ತರ ಒಗ್ಗಟ್ಟನ್ನು ಪ್ರದರ್ಶಿಸುವ ವೇದಿಕೆಯಾಗಿಯೂ ಗಮನ ಸೆಳೆಯಿತು.

ಸಮಾರಂಭದಲ್ಲಿ ಮಾತನಾಡಿದ ವಿಜಯೇಂದ್ರ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ ನೀತಿಗಳು ಹಾಗೂ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಆರಂಭಿಸಿರುವ ಹೋರಾಟ ಮುಂದುವರಿಯಲಿದ್ದು, ರಣರಂಗದಲ್ಲಿ ನಮ್ಮನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ

ಬಳ್ಳಾರಿ ಚಲೋ ಪಾದಯಾತ್ರೆಯ ಸಮಾರೋಪ ಸಮಾವೇಶದ ಮೂಲಕ ಮೊದಲ ಹಂತದ ಹೋರಾಟ ಅಂತ್ಯಗೊಂಡಿದೆ. ಆದರೆ, ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧದ ಹೋರಾಟ ಇಲ್ಲಿಗೆ ನಿಲ್ಲುವುದಿಲ್ಲ. ಮುಂದಿನ ದಿನಗಳಲ್ಲಿಯೂ ಜನರ ಪರ ಹೋರಾಟ ನಡೆಸಲಾಗುವುದು. ಕಾಂಗ್ರೆಸ್ ಸರ್ಕಾರವನ್ನು ಮನೆಗೆ ಕಳುಹಿಸಲು ರಾಜ್ಯದ ಜನರು ತೀರ್ಮಾನಿಸಿದ್ದಾರೆ. ಭ್ರಷ್ಟಾಚಾರದ ವಿರುದ್ಧ ಬಿಜೆಪಿಯ ಸಮರ ಆರಂಭವಾಗಿದ್ದು, ಇದನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ವಿಜಯೇಂದ್ರ ಹೇಳಿದರು.

ರಾಜ್ಯದಲ್ಲಿ ಡ್ರಗ್ಸ್‌ ಮಾಫಿಯಾ ಮಿತಿ ಮೀರಿದೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಮುಖ್ಯಮಂತ್ರಿಗಳೇ ಹೇಳಿಕೊಳ್ಳುವಂತೆ ಅವರು, ಶೇ.90ರಷ್ಟು ಬಿಜಿನೆಸ್ ಮ್ಯಾನ್, ಶೇ.10ರಷ್ಟು ಮಾತ್ರ ರಾಜಕಾರಣಿಯಾಗಿದ್ದಾರೆ. ಒಬ್ಬ ಬಿಜಿನೆಸ್ ಮ್ಯಾನ್‌ನಿಂದ ರಾಜ್ಯದ ಕಲ್ಯಾಣ ನಿರೀಕ್ಷಿಸಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ರಾಜ್ಯದ ನಗರ ಹಾಗೂ ಗ್ರಾಮೀಣ ಪ್ರದೇಶ ಅಭಿವೃದ್ಧಿಯಾಗಿಲ್ಲ. ಇಡೀ ರಾಜ್ಯದ ಪ್ರಗತಿ ಹಿನ್ನಡೆಯತ್ತ ಮುಖ ಮಾಡಿದೆ. ಹೀಗಾಗಿ, ರಾಜ್ಯದ ಪ್ರಗತಿಯ ದೃಷ್ಟಿಯಿಂದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹200 ಕೋಟಿ ಬಿಡುಗಡೆ ಮಾಡಬೇಕು. ಎಸ್ಸಿಟಿಎಸ್ಪಿ ಹಣ ಬಳಕೆ ಕುರಿತು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಒತ್ತಾಯಿಸಿದರು.

ರಾಜ್ಯದಲ್ಲಿ ಭೀಕರ ಬರಗಾಲವಿದ್ದು, ಕಾಂಗ್ರೆಸ್ ಸರ್ಕಾರ ಕೂಡಲೇ ನಾಡಿನ ಎಲ್ಲ ರೈತರ ₹5 ಲಕ್ಷದವರೆಗಿನ ಸಾಲ ಮನ್ನಾ ಮಾಡಬೇಕು. ತ್ರಿಫೇಸ್ ವಿದ್ಯುತ್ ಇಲ್ಲದೆ ರೈತರು ತೀವ್ರ ಸಮಸ್ಯೆ ಎದುರಿಸುತ್ತಿದ್ದು ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ಹಿಂದುಳಿದ ವರ್ಗಗಳ ಇಲಾಖೆ ಹಾಗೂ ಬೋರ್ಡ್‌ಗಳಿಗೆ ₹2 ಸಾವಿರ ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ವಿಜಯೇಂದ್ರ ಆಗ್ರಹಿಸಿದರು.

ರೈತರ ಸಾಲ ಮನ್ನಾ ಮಾಡಿ ಎಂದರೆ ಮೋದಿ ಹತ್ತಿರ ಹೋಗೋಣ ಅಂತಾರೆ. ಆದರೆ, ಹಿಂದೆ ಯಡಿಯೂರಪ್ಪ ಇದ್ದಾಗ ರಾಜ್ಯದಿಂದಲೇ ಪರಿಹಾರ ಕೊಟ್ರು. ರೈತರ ಸಾಲ ಮನ್ನಾ ಮಾಡಿದ್ರು. ಈಗ ಮಹಾರಾಷ್ಟ್ರ ಸರ್ಕಾರ ರೈತರ ಸಾಲಮನ್ನಾ ಮಾಡಿಲ್ಲವೇ? ಸಾಲ ಮನ್ನಾ ಮಾಡದಿದ್ದರೆ ರೈತರೇ ಬೀದಿಗಿಳಿಯಲಿದ್ದಾರೆ ಎಂದು ಎಚ್ಚರಿಸಿದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.
Read more Articles on

Recommended Stories

ಆಡಳಿತಕ್ಕೆ100 ದಿನ : ಬಲಿಷ್ಠ ಕರ್ನಾಟಕಕ್ಕೆ ಡಿಕೆಶಿ ನವ ಸಂಕಲ್ಪದ ಘೋಷಣೆ
ಮಂಡ್ಯ ಜಿಲ್ಲಾ ಕಾಂಗ್ರೆಸ್‌ಗೆ ಕುಮಾರ್ ಕೊಪ್ಪ ಹೊಸ ಸಾರಥಿ