ಚನ್ನಪಟ್ಟಣ ಚುನಾವಣೆ : ಡಿಕೆಸು ಕಣಕ್ಕಿಳಿಸಲು ಕಾಂಗ್ರೆಸ್‌ ಕಾರ್ಯಕರ್ತರ ಸಭೆ ಒತ್ತಾಯ । ಡಿಕೆಶಿ ಎದುರು ಬೇಡಿಕೆ

Published : Oct 20, 2024, 08:04 AM IST
dk suresh

ಸಾರಾಂಶ

ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ರಾಮನಗರ ಹಾಗೂ ಚನ್ನಪಟ್ಟಣ ಕಾರ್ಯಕರ್ತರೊಂದಿಗೆ ಶನಿವಾರ ಸಭೆ ನಡೆಸಿದ್ದು, ಈ ವೇಳೆ ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿದೆ.

ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ರಾಮನಗರ ಹಾಗೂ ಚನ್ನಪಟ್ಟಣ ಕಾರ್ಯಕರ್ತರೊಂದಿಗೆ ಶನಿವಾರ ಸಭೆ ನಡೆಸಿದ್ದು, ಈ ವೇಳೆ ಮಾಜಿ ಸಂಸದ ಡಿ.ಕೆ. ಸುರೇಶ್‌ ಅವರಿಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿ ಬಂದಿದೆ.

ಅಭ್ಯರ್ಥಿ ಆಯ್ಕೆ ಬಗ್ಗೆ ರಾಜರಾಜೇಶ್ವರಿ ನಗರದಲ್ಲಿ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್‌ ಅವರು ಕಾರ್ಯಕರ್ತರೊಂದಿಗೆ ಅಭಿಪ್ರಾಯ ಸಂಗ್ರಹ ಸಭೆ ನಡೆಸಿದರು.

ಈ ವೇಳೆ ಕಾರ್ಯಕರ್ತರು, ‘ಡಿ.ಕೆ. ಸುರೇಶಣ್ಣ ಅವರೇ ಅಭ್ಯರ್ಥಿ ಆಗಬೇಕು. ಅವರು ಅಭ್ಯರ್ಥಿ ಆದರೆ ನಮಗೆ ನೂರಾನೆ ಬಲ ಇದ್ದಂತೆ. ಕ್ಷೇತ್ರದಲ್ಲಿ ಸಲೀಸಾಗಿ ಗೆದ್ದುಕೊಂಡು ಬರಬಹುದು’ ಎಂದು ಸಲಹೆ ನೀಡಿದರು.

ಯಾರೇ ನಿಂತರೂ ನಾನೇ ಅಭ್ಯರ್ಥಿ- ಡಿಕೆಶಿ:

ಈ ವೇಳೆ ಡಿ.ಕೆ. ಶಿವಕುಮಾರ್‌ ಅವರು, ಡಿ.ಕೆ. ಸುರೇಶ್‌ ಅವರ ಉದ್ದೇಶವೇನು ಎಂಬುದು ಗೊತ್ತಿಲ್ಲ. ಯಾರೇ ನಿಂತರೂ ನಾನೇ ಅಭ್ಯರ್ಥಿ ಎಂದು ಕೆಲಸ ಮಾಡಬೇಕು. ಒಬ್ಬ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್‌ ನೀಡಿದರೂ ಗೆಲ್ಲಿಸಿಕೊಂಡು ಬರಬೇಕು ಎಂದು ಕರೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರ ಬಳಿ ನಾನು ಚರ್ಚೆ ಮಾಡಿದ್ದೇನೆ. ಅವರಿಗೆ ಏನು ಹೇಳಬೇಕೋ ಹೇಳುತ್ತಿದ್ದೇನೆ. ಅವರ ಅಭಿಪ್ರಾಯ ಕೇಳಿದ್ದೇನೆ. ರಾಜಕಾರಣ ಸಾಧ್ಯತೆಗಳ ಕಲೆ. ಪ್ರಧಾನ ಮಂತ್ರಿಗಳ ಕ್ಷೇತ್ರವನ್ನೇ ನಾವು ರಾಮನಗರದಲ್ಲಿ ಗೆದ್ದಿದ್ದೇವೆ. ಹೀಗಾಗಿ ಕಂಗೆಡಬೇಡಿ. ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸಿದರೂ ನೀವು ತಯಾರಿರಬೇಕು ಎಂದು ಕರೆ ನೀಡಿದ್ದೇನೆ ಎಂದು ಹೇಳಿದರು.

ಸುರೇಶ್‌ಗೂ ಜವಾಬ್ದಾರಿ ನೀಡುತ್ತೇನೆ: ಸಭೆಯಲ್ಲಿ ಬಹಳಷ್ಟು ಮಂದಿ ಡಿ.ಕೆ. ಸುರೇಶ್ ಅವರ ಹೆಸರು ಹೇಳುತ್ತಿದ್ದರು ಎಂದು ಕೇಳಿದಾಗ, ‘ಅವರು ಅಭಿಮಾನದಿಂದ ಹೇಳುತ್ತಾರೆ. ಸುರೇಶ್ ಅವರಿಗೂ ನಾನು ಜವಾಬ್ದಾರಿ ನೀಡುತ್ತೇನೆ. ಅವರದೂ ಹಲವಾರು ಲೆಕ್ಕಾಚಾರ ಇರುತ್ತದೆ. ಎಲ್ಲವನ್ನೂ ಮುಂದೆ ನೋಡೋಣ’ ಎಂದಷ್ಟೇ ಹೇಳಿದರು.

ಸುರೇಶ್ ಅವರಿಗೆ ಸ್ಪರ್ಧಿಸುವಂತೆ ಮನವೊಲಿಸುತ್ತೀರಾ ಎಂದು ಕೇಳಿದಾಗ, ‘ನಾವು ಯಾರ ಮನಸನ್ನೂ ಒಲಿಸುವುದಿಲ್ಲ. ನಾವು ಇವರೇ ನಮ್ಮ ಅಭ್ಯರ್ಥಿ ಎಂದು ಹೇಳಿದರೆ ಎಲ್ಲರೂ ಒಪ್ಪುತ್ತಾರೆ’ ಎಂದು ಸೂಚ್ಯವಾಗಿ ಹೇಳಿದರು.

ಸಭೆಯಲ್ಲಿ ಶಾಸಕ ಶಾಸಕ ಇಕ್ಬಾಲ್ ಹಸೇನ್, ಪರಿಷತ್‌ ಸದಸ್ಯರಾದ ಪುಟ್ಟಣ್ಣ, ಎಸ್‌.ರವಿ, ಮಾಜಿ ಶಾಸಕ ರಾಜು ಸೇರಿದಂತೆ ಹಲವರು ಹಾಜರಿದ್ದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಗೃಹಲಕ್ಷ್ಮಿ ಸ್ಕೀಂ ₹5000 ಕೋಟಿ ಹಗರಣ: ಬಿಜೆಪಿ
ಬೆಳಗಾವಿ ಸದನದಲ್ಲೂ ಸಿಎಂ ಕುರ್ಚಿಯ ಕದನ!