₹18000 ಕೋಟಿ ಬರ ಪರಿಹಾರಕ್ಕೆ ಸಿಎಂ ಕೇಂದ್ರಕ್ಕೆ ಮೊರೆ

KannadaprabhaNewsNetwork |  
Published : Dec 20, 2023, 01:15 AM IST
ನವದೆಹಲಿಯಲ್ಲಿ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿಯಾದರು. ಈ ವೇಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇದ್ದರು. | Kannada Prabha

ಸಾರಾಂಶ

ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ವಿವರಣೆ ನೀಡಿ, ಪರಿಹಾರ ಬಿಡುಗಡೆಗೆ ಮನವಿ ಮಾಡಿದರು. ಈ ವೇಳೆ ರಾಜ್ಯದ 236 ತಾಲೂಕುಗಳ ಪೈಕಿ 223 ಬರಪೀಡಿತವಾಗಿವೆ. ಅದರಲ್ಲಿ 196 ತಾಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದನ್ನು ಪ್ರಧಾನಿ ಗಮನಕ್ಕೆ ತಂದರು. ಕಂದಾಯ ಸಚಿವ ಕೃಷ್ಣ ಬೈರೇಗೌಡ ಜೊತೆಗಿದ್ದರು.

ಸಿದ್ದು ಬೇಡಿಕೆ ಪಟ್ಟಿ1. ಬರಗಾಲದಿಂದ ಕರ್ನಾಟಕದಲ್ಲಿ 48.19 ಲಕ್ಷ ಹೆಕ್ಟೇರ್‌ ಬೆಳೆ ನಷ್ಟ. ಹೀಗಾಗಿ 18177 ಕೋಟಿ ರು. ಬರ ಪರಿಹಾರ ಬಿಡುಗಡೆ ಮಾಡಬೇಕು

2. ಉನ್ನತ ಮಟ್ಟದ ಸಭೆಯನ್ನು ತುರ್ತಾಗಿ ಕರೆದು ಕರ್ನಾಟಕಕ್ಕೆ ಬರ ಪರಿಹಾರ ಬಿಡುಗಡೆ ಮಾಡುವಂತೆ ಅಮಿತ್‌ ಶಾ ಅವರಿಗೆ ಸೂಚಿಸಬೇಕು3. ಬರಗಾಲ ಇರುವ ಕಾರಣ ಉದ್ಯೋಗ ಖಾತ್ರಿಯಡಿ ಮಾನವ ದಿನವನ್ನು 100ರಿಂದ 150 ದಿನಗಳಿಗೆ ಹೆಚ್ಚಿಸಲು ನಮಗೆ ಅನುಮತಿ ನೀಡಬೇಕುಕನ್ನಡಪ್ರಭ ವಾರ್ತೆ ನವದೆಹಲಿ

ರಾಜ್ಯದಲ್ಲಿ ಈ ಬಾರಿ ಬರದಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದು, ಈ ಸಂಬಂಧ 18,177.44 ಕೋಟಿ ರು. ಗಳ ಬರ ಪರಿಹಾರವನ್ನು ಬಿಡುಗಡೆ ಮಾಡಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಭೆಯನ್ನು ತುರ್ತಾಗಿ ಕರೆದು, ಬರ ಪರಿಹಾರ ಬಿಡುಗಡೆಗೊಳಿಸಲು ಸೂಚನೆ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಮನವಿ ಮಾಡಿದ್ದಾರೆ.

2ನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಎರಡನೇ ಬಾರಿಗೆ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿನ ಬರ ಪರಿಸ್ಥಿತಿಯ ಕುರಿತು ವಿವರಣೆ ನೀಡಿ, ಪರಿಹಾರ ಬಿಡುಗಡೆಗೆ ಮನವಿ ಮಾಡಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಜೊತೆ ನಾನು ಮೋದಿ ಅವರನ್ನು ಭೇಟಿ ಮಾಡಿ, ಶೀಘ್ರವೇ 18,177.44 ಕೋಟಿ ರು.ಗಳ ಬರ ಪರಿಹಾರ ಬಿಡುಗಡೆಗೆ ಮನವಿ ಮಾಡಿದ್ದೇನೆ. ಈ ಪೈಕಿ, ಎನ್‌ಡಿಆರ್‌ಎಫ್‌ನಿಂದ 4663.12 ಕೋಟಿ ರು., ಇನ್‌ಪುಟ್‌ ಸಬ್ಸಿಡಿ 12,757.86 ಕೋಟಿ ರು., ಕುಡಿಯುವ ನೀರಿಗಾಗಿ ತುರ್ತು ಪರಿಹಾರವಾಗಿ 566.78 ಕೋಟಿ ರು., ಜಾನುವಾರುಗಳ ರಕ್ಷಣೆಗಾಗಿ 363.68 ಕೋಟಿ ರು. ಒದಗಿಸುವಂತೆ ಮನವಿಯಲ್ಲಿ ಉಲ್ಲೇಖಿಸಲಾಗಿದೆ ಎಂದರು.ರಾಜ್ಯದ 236 ತಾಲೂಕುಗಳ ಪೈಕಿ 223 ಬರಪೀಡಿತವಾಗಿವೆ. ಅದರಲ್ಲಿ 196 ತಾಲೂಕುಗಳಲ್ಲಿ ಬರದ ತೀವ್ರತೆ ಹೆಚ್ಚಾಗಿದೆ. ಇದರಿಂದಾಗಿ 48.19 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕೃಷಿ ಮತ್ತು ತೋಟಗಾರಿಕಾ ಬೆಳೆಗಳು ನಷ್ಟವಾಗಿದ್ದನ್ನು ಪ್ರಧಾನಿ ಗಮನಕ್ಕೆ ತಂದಿದ್ದೇನೆ. ಈವರೆಗೆ ನಾವು ಪರಿಹಾರ ಕೋರಿ 3 ಬಾರಿ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಆದರೆ, ಈ ಕುರಿತು ಪ್ರಾಥಮಿಕ ಸಭೆಯನ್ನೇ ನಡೆಸಿಲ್ಲ. ರಾಜ್ಯಕ್ಕೆ ಬರ ಪರಿಹಾರ ಸಿಗಬೇಕಾದರೆ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದ ಉನ್ನತ ಮಟ್ಟದ ಸಮಿತಿಯ ಸಭೆ ನಡೆಯಬೇಕು. ಈ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರವೇ ಬರ ಪರಿಹಾರ ಬಿಡುಗಡೆಗೊಳಿಸಲು ಸೂಚಿಸಬೇಕು ಎಂದು ಪ್ರಧಾನಿಗೆ ಮನವಿ ಮಾಡಿದ್ದೇನೆ. ಮೋದಿ ಅವರು ನಮ್ಮ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಶೀಘ್ರ ಪರಿಹಾರವನ್ನು ಅವರಿಂದ ನಿರೀಕ್ಷಿಸಿದ್ದೇವೆ ಎಂದರು.

ಬರ ಪರಿಸ್ಥಿತಿಯಲ್ಲಿ ನರೇಗಾ ಕೆಲಸವನ್ನು 100 ರಿಂದ 150 ದಿನಗಳಿಗೆ ಕಡ್ಡಾಯವಾಗಿ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿದೆ. ಅದರಂತೆ ಹೆಚ್ಚಿಸಲು 3 ತಿಂಗಳ ಹಿಂದೆಯೇ ನಾವು ಕೇಂದ್ರಕ್ಕೆ ಮನವಿ ಮಾಡಿದ್ದೇವೆ. ಇನ್ನು, ಮಹದಾಯಿ ಯೋಜನೆ ಜಾರಿ ವಿಷಯದಲ್ಲಿ ಪರಿಸರ ಮತ್ತು ಅರಣ್ಯ ಇಲಾಖೆಯಿಂದ ಯೋಜನೆಗೆ ಅನುಮತಿ ನೀಡುವುದು ಬಾಕಿ ಇದೆ. ಅನುಮತಿ ನೀಡಿದರೆ ನಮ್ಮ ಜನರಿಗೆ ಅನುಕೂಲ ಆಗಲಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಈಗಾಗಲೇ 5,300 ಕೋಟಿ ರು. ಅನುದಾನ ಘೋಷಿಸಿದೆ. ಆದರೆ, ಈ ತನಕ ಒಂದು ರು. ಕೂಡ ಬಂದಿಲ್ಲ. ಇನ್ನು, ಬೆಂಗಳೂರು, ರಾಮನಗರ ಜಿಲ್ಲೆಗಳ ವ್ಯಾಪ್ತಿಗೆ ಕುಡಿಯುವ ನೀರಿಗಾಗಿ ಮೇಕೆದಾಟು ಯೋಜನೆಯಿಂದ 66 ಟಿಎಂಸಿ ನೀರು ಸಂಗ್ರಹ ಮಾಡುವ ಉದ್ದೇಶವಿದೆ. ತಮಿಳುನಾಡು ರಾಜಕೀಯ ಕಾರಣಕ್ಕಾಗಿ ಈ ಯೋಜನೆಗೆ ವಿರೋಧ ಮಾಡುತ್ತಿದೆ. ಈ ಎಲ್ಲಾ ವಿಚಾರಗಳ ಕುರಿತು ಮೋದಿ ಜೊತೆ ಚರ್ಚೆ ನಡೆಸಿದ್ದೇನೆ. ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ ಎಂದರು.

PREV
Catch up on the latest political news from Karnataka and India (ರಾಜಕೀಯ ಸುದ್ದಿ) — election results, government decisions, party updates, and in-depth political analysis on Kannada Prabha.

Recommended Stories

ಚಾಟ್‌ ಜಿಪಿಟಿಯಲ್ಲಿ ಐದು ಪ್ರಶ್ನೆ ಕೇಳಿದರೆ 500 ಲೀ. ನೀರು ಬಳಕೆ
ಕಾರಂತ ಬಡಾವಣೆ ರೈತರಿಗೆ ನಿವೇಶನ ನೀಡಲು ಕ್ರಮ: ಡಿ.ಕೆ.ಶಿವಕುಮಾರ್‌ ಭರವಸೆ