ಕಾಂಗ್ರೆಸ್ ಹುಳುಕು ಮುಚ್ಚಿಕೊಳ್ಳಲು ಬಿಜೆಪಿ ಮೇಲೆ ಸುಳ್ಳು ಆರೋಪ : ಬಸವರಾಜ ಬೊಮ್ಮಾಯಿ

KannadaprabhaNewsNetwork |  
Published : Sep 02, 2024, 02:00 AM ISTUpdated : Sep 02, 2024, 04:47 AM IST
1ಕೆಎಂಎನ್ ಡಿ24 | Kannada Prabha

ಸಾರಾಂಶ

ಕಾಂಗ್ರೆಸ್ ಸರ್ಕಾರ ತಮ್ಮ ಲೋಪಗಳನ್ನು ಮುಚ್ಚಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಆಧಾರರಹಿತ ಆರೋಪಗಳನ್ನು ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. 

 ಮಂಡ್ಯ : ಕಾಂಗ್ರೆಸ್ ಸರ್ಕಾರ ತಮ್ಮ ಹುಳುಕುಗಳನ್ನು ಮುಚ್ಚಿಕೊಳ್ಳಲು ಹಿಂದಿನ ಬಿಜೆಪಿ ಸರ್ಕಾರದ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಮುಡಾ ಕೇಸ್‌ನಲ್ಲಿ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ತನಿಖೆಗೆ ಅನುಮತಿ ನೀಡಿದ್ದಕ್ಕೆ ಪ್ರತಿಯಾಗಿ ಕೋವಿಡ್ ವೇಳೆ ಬಿಜೆಪಿ ಭಾರೀ ಭ್ರಷ್ಟಾಚಾರ ನಡೆಸಿದೆ ಎಂದು ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಮುಖ್ಯಮಂತ್ರಿಗಳು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ರಾಜ್ಯಪಾಲರು ಕಾಂಗ್ರೆಸ್ ಸರ್ಕಾರವನ್ನು ಬೀಳಿಸುತ್ತಿದ್ದಾರೆ ಎನ್ನುವುದು ಹಳೇ ಟ್ಯಾಕ್ಟಿಸ್. ಇದೆಲ್ಲವನ್ನು ಈ ರಾಜ್ಯದ ಜನ ಬಹಳ ನೋಡಿದ್ದಾರೆ ಎಂದರು.

ರಾಜ್ಯಪಾಲರು ಅನುಮತಿ ಕೊಟ್ಟಿರುವುದು ಕೇವಲ ತನಿಖೆ ನಡೆಸಿ ಎಂದಷ್ಟೆ. ಆದರೆ, ಕಾಂಗ್ರೆಸ್ಸಿನ ಮಿತ್ರರು ಯಾಕೆ ಅಷ್ಟೊಂದು ಆತಂಕಗೊಂಡಿದ್ದಾರೋ ತಿಳಿಯದು. ಈಗ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದೆ. ಅಂತಿಮ ಘಟ್ಟಕ್ಕೆ ಬಂದಿದೆ. ಕಾದು ನೋಡೋಣ ಎಂದರು.

ಮಾಜಿ ಸಚಿವರಾದ ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ ವಿಚಾರದಲ್ಲಿ ರಾಜ್ಯಪಾಲರು ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಕಾಂಗ್ರೆಸ್ಸಿಗರು ಪ್ರಶ್ನಿಸುತ್ತಿದ್ದಾರೆ. ಅದಕ್ಕೆ ರಾಜ್ಯಪಾಲರು ನಮ್ಮ ಕಚೇರಿಯಲ್ಲಿ ಯಾವ ಕಡತವೂ ಬಾಕಿ ಉಳಿದಿಲ್ಲ ಎಂದು ತಕ್ಕ ಉತ್ತರ ಕೊಟ್ಟಿದ್ದಾರೆ. ಅದೇನೆ ಇರಲಿ, ಅದಕ್ಕೂ ಇದಕ್ಕೂ ಥಳಕು ಹಾಕುವುದು ಸರಿಯಲ್ಲ ಎಂದರು.

ಪ್ರಸ್ತುತ ರಾಜ್ಯದ ಮುಖ್ಯಸ್ಥನ ಮೇಲೆ ಆರೋಪವಿರುವುದರಿಂದ ಮುಕ್ತ ಮತ್ತು ಪಾರದರ್ಶಕವಾಗಿ ತನಿಖೆ ನಡೆಯಬೇಕು. ಆ ಬಳಿಕ ನ್ಯಾಯಾಲಯದ ನಿರ್ಧಾರದ ಮೇಲೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೋ ಬೇಡವೋ ಎಂಬುದು ನಿರ್ಧಾರವಾಗುತ್ತದೆ ಎಂದರು.

ಕೋವಿಡ್‌ಗೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರದಿ ತರಿಸಿಕೊಂಡಿದ್ದಾರೆ. ಅದರಲ್ಲಿ ಏನಿದೆ ಎಂಬುದು ನಮಗೆ ತಿಳಿದಿಲ್ಲ. ತಿಳಿದ ಬಳಿಕ ಪಕ್ಷ ಸೂಕ್ತ ಉತ್ತರ ನೀಡಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ ಸಿ.ಪಿ.ಯೋಗೇಶ್ವರ್ ಕಣಕ್ಕೆ ಇಳಿಯುವ ಸಂಬಂಧ ಮೈತ್ರಿ ನಾಯಕರು ನಿರ್ಧಾರ ಕೈಗೊಳ್ಳಲಿದ್ದಾರೆ. ನಟ ದರ್ಶನ್ ವಿಚಾರವಾಗಿ ಮಾತನಾಡುವುದಿಲ್ಲ ಎಂದರು.

PREV

Recommended Stories

ರಾಹುಲ್‌ ವಿರುದ್ಧ 5ಕ್ಕೆ ಬಿಜೆಪಿ ಧರಣಿ : ಬಿವೈವಿ
ಸಂಘರ್ಷ ಬಿಟ್ಟು ಒಳಮೀಸಲು ಜಾರಿ : ಪರಂ ನೇತೃತ್ವದ ಸಭೆ