ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ : ಅಧಿವೇಶನಕ್ಕೆ ಸಿದ್ಧತೆ- ಸದನದಲ್ಲಿ ಪ್ರತಿಪಕ್ಷಗಳನ್ನು ಕಟ್ಟಿಹಾಕುವ ಬಗ್ಗೆ ಚರ್ಚೆ

Sujatha NR | Published : Mar 2, 2025 10:40 AM

ವಿಧಾನಮಂಡಲ ಅಧಿವೇಶನ ಮಾ.3 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚಿಸಲು ಮಾ.4 ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

  ಬೆಂಗಳೂರು : ವಿಧಾನಮಂಡಲ ಅಧಿವೇಶನ ಮಾ.3 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚಿಸಲು ಮಾ.4 ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಮಾ.3ರಿಂದ 21 ರವರೆಗೆ ಅಧಿವೇಶನ ನಡೆಯಲಿದೆ. ಇದರ ನಡುವೆ ಮಾ.7 ರಂದು ಬಜೆಟ್ ಅಧಿವೇಶನ ನಡೆಯಲಿದ್ದು, ಅಧಿವೇಶನದಲ್ಲಿ ಬಿಜೆಪಿ-ಜೆಡಿಎಸ್‌ ಪ್ರಸ್ತಾಪಿಸಲಿರುವ ವಿಚಾರಗಳಿಗೆ ತಿರುಗೇಟು ನೀಡುವ ಬಗ್ಗೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ಸಂಸದರು, ಶಾಸಕರು ಹಾಗೂ ಪರಿಷತ್‌ ಸದಸ್ಯರು ಭಾಗವಹಿಸಲಿದ್ದಾರೆ.

ಅಧಿವೇಶನದ ವೇಳೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಪ್ರಶ್ನೆಗಳಿಗೆ ಸೂಕ್ತ ಉತ್ತರ ನೀಡಬೇಕು. ಬೆಲೆ ಏರಿಕೆ, ಅನುದಾನ ಕೊರತೆ, ಗ್ಯಾರಂಟಿಗಳ ಹಣ ಬಿಡುಗಡೆ ವಿಳಂಬದ ಬಗ್ಗೆ ಚರ್ಚಿಸಿದರೆ ಸೂಕ್ತ ತಿರುಗೇಟು ನೀಡಬೇಕು. ಕೇಂದ್ರದಿಂದ ಆಗುತ್ತಿರುವ ಅನ್ಯಾಯಗಳನ್ನು ಬಲವಾಗಿ ಪ್ರಸ್ತಾಪಿಸಬೇಕು. ಬಿಜೆಪಿ ಬಣ ಜಗಳ, ರಾಜ್ಯಪಾಲರ ಮೂಲಕ ನಡೆಸುತ್ತಿರುವ ರಾಜಕಾರಣ, ಮೈಕ್ರೋ ಫೈನಾನ್ಸ್ ಬಿಲ್‌ಗೂ ವಿರೋಧ ಮಾಡಿಸಿದ್ದು ಇಂಥ ಸೂಕ್ಷ್ಮ ವಿಚಾರಗಳನ್ನು ಮುಂದಿಟ್ಟುಕೊಂಡು ಪ್ರತಿಪಕ್ಷಗಳನ್ನು ಎದುರಿಸಲು ಚರ್ಚಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.